ಪಿಲಿಕುಳದಲ್ಲಿ ದ.ಕ.ಹಾಗೂ ಕೊಡಗು ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ತರಬೇತಿ. ‘ವಿಪತ್ತು ನಿರ್ವಹಣೆ ತರಬೇತಿಯಿಂದ ಹೆಚ್ಚಿನ ಕೌಶಲ್ಯ’-ಎನ್‌ಡಿಆರ್‌ಎಫ್ ಅಧಿಕಾರಿ ಶಾಂತಿಲಾಲ್ ಜಾಟಿಯಾ

91.6K Views 15 Sep 2025

ಮಂಗಳೂರು: ವಿಪತ್ತು ಸಂಭವಿಸಿದಾಗ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಲು ಹಾಗೂ ಅವುಗಳ ಪರಿಣಾಮಗಳನ್ನು ಕಡಿಮೆ ಮಾಡಲು ಅಗತ್ಯ ಇರುವ ಜ್ಞಾನ ಮತ್ತು ಕೌಶಲ್ಯವನ್ನು ವಿಪತ್ತು ನಿರ್ವಹಣೆ ತರಬೇತಿಯು ಒದಗಿಸುತ್ತದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಮಾಂಡೆಂಟ್ ಶಾಂತಿಲಾಲ್ ಜಾಟಿಯಾ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಹಾಗೂ ದ.ಕ. ಜಿಲ್ಲಾ ಸಂಸ್ಥೆ ವತಿಯಿಂದ ಎನ್‌ಡಿಆರ್‌ಎಫ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಪಿಲಿಕುಳದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಸೋಮವಾರ ನಡೆದ ದ.ಕ.ಹಾಗೂ ಕೊಡಗು ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.
ವಿಪತ್ತು ನಿರ್ವಹಣಾ ಪ್ರಾಧಿಕಾರದ ಜಿಲ್ಲಾ ನೋಡಲ್ ಅಧಿಕಾರಿ ವಿಜಯಕುಮಾರ್ ಪೂಜಾರ್ ಶಿಬಿರ ಉದ್ಘಾಟಿಸಿದರು. ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪಿ.ಬಿ.ಹರೀಶ್ ರೈ, ಗುರುಪುರ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಗುರುಪುರ ಸ್ಥಳೀಯ ಸಂಸ್ಥೆ ಅಧ್ಯಕ್ಷ ಸೋಹನ್ ಅತಿಕಾರಿ, ಉಪಾಧ್ಯಕ್ಷ ಸುನೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಸ್ಕೌಟ್ ಅಯುಕ್ತ ಟಿ.ಎಂ.ತುಂಬೆ ಅಧ್ಯಕ್ಷತೆ ವಹಿಸಿದ್ದರು.
ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ 30 ಕಾಲೇಜುಗಳ 355 ರೋವರ್ಸ್‌-ರೇಂಜರ್ಸ್‌ ವಿದ್ಯಾರ್ಥಿಗಳು ಒಂದು ವಾರದ
ತರಬೇತಿ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಸಂಘಟಕಿ ಲತಾ ಮಂಜುನಾಥ್ ತಿಳಿಸಿದರು. ಸ್ಕೌಟ್ಸ್‌ನ ರಾಜ್ಯ ಸಂಘಟನಾ
ಆಯುಕ್ತ ಭರತ್‌ರಾಜ್.ಕೆ. ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಕುಮಾರ್ ಕೆ.ಎಸ್.ವಂದಿಸಿದರು.
ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

Read More News

Scroll to Top