ಮಂಗಳೂರು : ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯಲ್ಲಿ “ಐಡಿಯಾದಿಂದ ಪ್ರಕಟಣೆಯವರೆಗೆ” ವಿಷಯದ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಪ್ರೊ.ಚಾನ್ಸೆಲರ್ ಡಾ.ಎಂ. ಶಾಂತಾರಾಮ್ ಶೆಟ್ಟಿ ಮಾತನಾಡಿ ” ಆಧುನಿಕ ವೈದ್ಯಕೀಯ ಶಿಕ್ಷಣ ಹಾಗೂ ರೋಗಿಗಳ ಆರೈಕೆಯಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಗುಣಮಟ್ಟದ ವೈಜ್ಞಾನಿಕ ಪ್ರಕಟಣೆಗಳ ಪ್ರಾಮುಖ್ಯತೆ ಹೆಚ್ಚಿದೆ. ಯುವ ಸಂಶೋಧಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಶೈಕ್ಷಣಿಕ ಬರವಣಿಗೆ ಹಾಗೂ ಪುರಾವೆ ಆಧಾರಿತ ಸಂಶೋಧನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸ ಬೇಕು’ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಅರ್ಥೋಪೆಡಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ಮಾತನಾಡಿ ” ವೈದ್ಯಕೀಯ ಸಂಶೋಧನೆ ಮತ್ತು ವೈಜ್ಞಾನಿಕ ಪ್ರಕಟಣೆಗಳಲ್ಲಿ ಆಸಕ್ತಿ ಹೊಂದಿರುವ ಅಧ್ಯಾಪಕರು, ವೈದ್ಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಲು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ’ ಎಂದರು.
ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಮೂಳೆಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ವಿಕ್ರಮ್ ಶೆಟ್ಟಿ ಸ್ವಾಗತಿಸಿದರು. ಸಂಶೋಧನಾ ವಿಧಾನ, ಹಸ್ತಪ್ರತಿ ತಯಾರಿಕೆ, ನೈತಿಕ ಪ್ರಕಾಶನ ಅಭ್ಯಾಸಗಳು ಮತ್ತು ಸೂಚ್ಯಂಕಿತ ನಿಯತಕಾಲಿಕೆಗಳಲ್ಲಿ ಯಶಸ್ವಿ ಪ್ರಕಟಣೆಗಾಗಿ ತಂತ್ರಗಳ ಕುರಿತು ತಜ್ಞರು ಮಾಹಿತಿ ನೀಡಿದರು.




















































































































































































