ಮಂಗಳೂರು : ಮತದಾನ ಪ್ರತಿಯೊಬ್ಬರ ಜವಾಬ್ದಾರಿ. ಯಾವುದೇ ಭಯವಿಲ್ಲದೆ, ಪ್ರಭಾವಕ್ಕೆ ಒಳಪಡದೆ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ಕ್ಲಬ್ ಮತ್ತು ದ.ಕ. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ವ್ಯಾಪಕ ಮತದಾನ ಆಗಬೇಕು .ಈ ನಿಟ್ಟಿನಲ್ಲಿ ನಗರದ ಹಲವು ಕಡೆ ಸ್ವೀಪ್ ಸಮಿತಿಯಿಂದ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಚುನಾವಣೆ ದಿನ ಎಲ್ಲರೂ ಉತ್ಸುಕತೆಯಿಂದ ಮತದಾನಕ್ಕೆ ಆಗಮಿಸಬೇಕು. ದಕ್ಷಿಣ ಕನ್ನಡ ಬುದ್ದಿವಂತರ ಜಿಲ್ಲೆಯಾಗಿದೆ. ಈ ಬಾರಿಯ ಚುನಾವಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹರು ಬಂದು ಬುದ್ದಿವಂತಿಕೆ ಪ್ರದರ್ಶಿಸಬೇಕಿದೆ ಎಂದು ಅವರು ಹೇಳಿದರು.
ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಜಿತೇದ್ರ ಕುಂದೇಶ್ವರ, ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.
ಮತದಾನ ಜಾಗೃತಿ ಬಗ್ಗೆ ಸಂತ ಆ್ಯಗ್ನೆಸ್ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಕಿರು ನಾಟಕ ಪ್ರದರ್ಶಿಸಲಾಯಿತು.


























































































































































































