‘ಸೇನೆಗೆ ಸೇರಲು ಎನ್‌ಸಿಸಿ ಪ್ರೇರಣೆ. ಭಾರತೀಯ ಸೇನೆಯ ಸೇವೆ ವಿಶಿಷ್ಟ ಅನುಭವ’ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾ.ಸುಧೀರ್ ಜಿ. ಅಮೀನ್ ಹೇಳಿಕೆ

116.3K Views 30 Jul 2024

ಮಂಗಳೂರು : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದು ಒಂದು ವಿಶಿಷ್ಟ ಅನುಭವ. ಸೇನೆಗೆ ಸೇರ ಬಯಸುವ ಯುವಕರು ದೇಶಪ್ರೇಮ, ಸೇವಾ ಮನೋಭಾವನೆ ಹಾಗೂ ದೃಢವಾದ ಮಾನಸಿಕ ಸಿದ್ಧತೆ ಹೊಂದಿರುವುದು ಅಗತ್ಯ ಎಂದು ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಜಿ. ಅಮೀನ್ ಹೇಳಿದರು.
ಮಂಗಳವಾರ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿ ಸ್ವೀಕರಿಸಿ ಮಾತನಾಡಿದ ಅವರು ಭಾರತೀಯ ವಾಯು ಸೇನೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸುವ ಅವಕಾಶ ಲಭಿಸಿದ್ದು, ಅದರ ಅನುಭವ ವಿಭಿನ್ನ . ಸೇನಾ ಸಮವಸ್ತ್ರದ ಮೇಲಿನ ಗೌರವ ಮತ್ತು ಸೇವಾ ಮನೋಭಾವ ಸೇನೆಗೆ ಸೇರುವಂತೆ ಆಕರ್ಷಿಸಿತು. ಕಾಲೇಜು ದಿನಗಳಲ್ಲಿ ಎನ್‌ಸಿಸಿ ಸೇರಿದ್ದು ಮತ್ತಷ್ಟು ಪ್ರೇರಣೆ ದೊರೆಯಿತು. ಪದವಿ ಮುಗಿದು ಪರೀಕ್ಷೆ ಫಲಿತಾಂಶ ಬರುವ ಮೊದಲೇ ವಾಯು ಸೇನೆಗೆ ಆಯ್ಕೆಯಾಗಿದ್ದೆ ಎಂದರು.
ವಾಯು ಸೇನೆಯ ತರಬೇತಿಯ ನಂತರ ಗೌಹಾಟಿಯಲ್ಲಿ ವೃತ್ತಿ ಜೀವನ ಆರಂಭಗೊಂಡಿತು. ವಿವಿಧ ಕರ್ತವ್ಯಗಳನ್ನು ನಿರ್ವಹಿಸಿ ಹಂತಹಂತವಾಗಿ ಭಡ್ತಿ ಪಡೆದು ಗ್ರೂಪ್ ಕ್ಯಾಪ್ಟನ್ ಆಗಿ ನಿವೃತ್ತಿಯಾದೆ. ವಿಶ್ವದ ಅತಿ ದೊಡ್ಡ ಹೆಲಿಕಾಪ್ಟರ್‌ನಲ್ಲಿ ಕೆಲಸ ಮಾಡುವ ಅವಕಾಶ ದೊರಕಿತ್ತು. ಈ ಹೆಲಿಕಾಪ್ಟರ್‌ನಲ್ಲಿ ಬುಲ್ಡೋಜರ್ ಕೊಂಡೊಯ್ದು ಈಶಾನ್ಯ ಭಾರತದ ಕೆಲವು ದುರ್ಗಮ ಪ್ರದೇಶಗಳಲ್ಲಿ ರಸ್ತೆ ಮಾಡಲು ಸಾಧ್ಯವಾಯಿತು. ಅಸ್ಸಾಂ, ಅರುಣಾಚಲ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಪ್ರವಾಹ ಬಂದಾಗ ಜನರನ್ನು ರಕ್ಷಣೆ ಮಾಡಿದ್ದೆವು. ಈ ಸಂದರ್ಭ ಸಂತ್ರಸ್ತರಿಂದ ಸಿಗುತ್ತಿದ್ದ ಪ್ರಶಂಸೆ ವೃತ್ತಿ ಜೀವನನದ ಮರೆಯಲಾಗದ ಕ್ಷಣಗಳು ಎಂದು ಅವರು ವಿವರಿಸಿದರು.
ಭಾರತೀಯ ಸೇನೆ ಈಗ ಸದೃಢವಾಗಿದೆ. ಯಾವುದೇ ಶತ್ರು ರಾಷ್ಟ್ರವನ್ನು ಬಗ್ಗು ಬಡಿಯುವ ಶಕ್ತಿ ನಮ್ಮ ಸೇನೆಗೆ ಇದೆ. ಅಗ್ನಿಪಥ್
ಉತ್ತಮ ಯೋಜನೆಯಾಗಿದೆ. ರಾಜಕೀಯ ಕಾರಣಕ್ಕಾಗಿ ಕೆಲವರ ವಿರೋಧ ಇರಬಹುದು ಎಂದು ಅವರು ಅಭಿಪ್ರಾಯ ಪಟ್ಟರು.
ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕಾ ಭವನ ಟ್ರಸ್ಟ್‌ನ ಅಧ್ಯಕ್ಷ ರಾಮಕೃಷ್ಣ ಆರ್. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಕೋಶಾಧಿಕಾತಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ರಾಷ್ಟ್ರಪತಿ, ಪ್ರಧಾನಿಗಳ ಬೆಂಗಾವಲು
ರಾಷ್ಟ್ರಪತಿಗಳಾಗಿದ್ದ ಕೆ.ಆರ್.ನಾರಾಯಣ್, ಶಂಕರದಯಾಳ್ ಶರ್ಮ, ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಪ್ರಧಾನ ಮಂತ್ರಿಗಳಾಗಿ ವಾಜಪೇಯಿ, ದೇವೇ ಗೌಡ, ಐ.ಕೆ. ಗುಜ್ರಾಲ್, ರಕ್ಷಣಾ ಸಚಿವರಾಗಿದ್ದ ಜಾರ್ಜ್ ಫರ್ನಾಂಡಿಸ್, ಮುಲಾಯಂ ಸಿಂಗ್ ಯಾದವ್, ಸಂಸದೆಯಾಗಿದ್ದ ಪೂಲನ್ ದೇವಿ ಮುಂತಾದವರನ್ನು ಸೇನಾ ಹೆಲಿಕಾಪ್ಟರ್‌ಗಳಲ್ಲಿ ಕರೆದೊಯ್ಯುವ ಸಂದರ್ಭ ಅವರ ಜತೆ ಬೆರೆಯುಬ ಅವಕಾಶ ಲಭಿಸಿತ್ತು. ಪೂಲನ್ ದೇವಿಯವರಿಂದ ಪಡೆದ ಆಟೋಗ್ರಾಫ್ ಈಗಲೂ ಮನೆಯಲ್ಲಿದೆ ಎಂದು ಸುಧೀರ್ ಜಿ. ಅಮೀನ್ ನೆನಪಿಸಿಕೊಂಡರು.

Read More News

Scroll to Top