ಬಡವರ ಧ್ವನಿಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕೆಲಸ ಮಾಡುತ್ತಿದೆ: ಐಕಳ ಹರೀಶ್ ಶೆಟ್ಟಿ. ಸಮಾಜಕಲ್ಯಾಣ ಸಹಾಯಧನ ವಿತರಣೆ

102.2K Views 4 Jan 2025

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.


ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಂಟ ಸಮಾಜ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಪ್ರವೃತ್ತವಾಗುತ್ತದೆ. ಅದೇ ರೀತಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇತರೆ ಸಮಾಜದವರಿಗೂ ನೆರವಿನ ಹಸ್ತ ನೀಡುತ್ತಿದೆ ಎಂದರು.
ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವಿಕವಾಗಿ ಮಾತನಾಡಿ 37 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹಲವು ಕಾರ್ಯಗಳು ನಿರಂತರವಾಗಿ ನಡೆದಿದೆ. ದಾನಿಗಳ ನೆರವಿನಿಂದ ಮತ್ತು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳ ಶ್ರಮದಿಂದ ಸಹಾಯಹಸ್ತ ನೀಡಲು ಸಾಧ್ಯವಾಯಿತು. ಈ ಬಾರಿ 16 ಲಕ್ಷ ರೂಪಾಯಿ ಹಣವನ್ನು ವಿತರಿಸಲಾಯಿತು ಎಂದರು. ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ ಒಕ್ಕೂಟಕ್ಕೆ ಯಾರೇ ಅರ್ಜಿ ಸಲ್ಲಿಸಿದರೂ ಅರ್ಜಿಯನ್ನು ತಿರಸ್ಕರಿಸದೆ ಪರಿಶೀಲಿಸಿ ನೆರವನ್ನು ನೀಡಿದೆ ಎಂದರು.


ಮುಖ್ಯ ಅತಿಥಿಯಾಗಿ ಆಗಮಿಸಿದ ಆಸ್ಟ್ರೇಲಿಯದ ಉದ್ಯಮಿ ದಯಾನಂದ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.
ಸಮಾರಂಭದಲ್ಲಿ ಚಂದ್ರಹಾಸ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಜಪ್ಪಿನಮೊಗರು ಬಂಟರ ಸಂಘದ ಅಧ್ಯಕ್ಷ ಸತ್ಯಪ್ರಸಾದ್ ಶೆಟ್ಟಿ, ಸುಧಾಕರ ಪೂಂಜ ಸುರತ್ಕಲ್, ಹರ್ಷಕುಮಾರ್ ರೈ, ಗೀತಾ ರೈ, ಕೊಲ್ಲಾಡಿ ಬಾಲಕೃಷ್ಣ ರೈ ಉಪಸ್ಥಿತರಿದ್ದರು. ಉದಯಕುಮಾರ್ ಪ್ರಾರ್ಥನೆಗೈದರು. ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ನಿರ್ವಹಿಸಿದರು. ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ ವಂದಿಸಿದರು.

Read More News

Scroll to Top