ಮಂಗಳೂರು: ನಗರ ಅರಣ್ಯೀಕರಣವು ಹಸಿರು ಹೊದಿಕೆಯನ್ನು ಹೆಚ್ಚಿಸಿ ಭವಿಷ್ಯದಲ್ಲಿ ಸುಸ್ಥಿರ ನಗರ ನಿರ್ಮಾಣಕ್ಕೆ ಪೂರಕವಾಗಲಿದೆ. ಮಂಗಳೂರು ನಗರದಲ್ಲಿ ಹೆಚ್ಚು ಗಿಡ ನೆಡಲು ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮಿಯಾವಾಕಿ ಆರಣ್ಯ ನಿರ್ಮಿಸಲು ಆದ್ಯತೆ ನೀಡಬೇಕೆಂದು ಮಾಜಿ ಮೇಯರ್ ದಿವಾಕರ ಕದ್ರಿ ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದಲ್ಲಿ ಭಾನುವಾರ ನಗರದ ಲಾಲ್ ಬಾಗ್ ನ ಇಂದಿರಾ ಪ್ರಿಯದರ್ಶಿನಿ ಪಾರ್ಕ್ ನಲ್ಲಿ ನಡೆದ ವನಮಹೋತ್ಸವ ಮತ್ತು ಹನಿ ಇಬ್ಬನಿ- ಸಿಹಿ ಸಿಂಚನ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವನ ಮಹೋತ್ಸವಕ್ಕೆ ಚಾಲನೆ ನೀಡಿದ ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಮಾತನಾಡಿ ನಗರದಲ್ಲಿ ತಾಪಮಾನ ಏರಿಕೆ ತಡೆಯಲು ಮಿಯಾವಾಕಿ ಅರಣ್ಯ ಮಾತ್ರ ಪರಿಹಾರೋಪಾಯವಾಗಿದೆ ಎಂದರು.
ಅಭಾಸಾಪ ದ.ಕ.ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಕಟ್ಟ ಮುಖ್ಯ ಅತಿಥಿಯಾಗಿದ್ದರು.
ಹಿರಿಯ ಕವಿ, ಸಾಹಿತಿ ಡಾ.ವಸಂತ ಕುಮಾರ್ ಪೆರ್ಲ ಅವರ ಅಧ್ಯಕ್ಷತೆಯಲ್ಲಿ ಬಹು ಭಾಷಾ ಕವಿಗೋಷ್ಠಿ ನಡೆಯಿತು.
30 ಕವಿಗಳು ಸ್ವರಚಿತ ಕವನ ವಾಚಿಸಿದರು. ಡಾ.ಸುರೇಶ್ ನೆಗಳಗುಳಿ, ರೇಮಂಡ್ ಡಿಕುನ್ಹ ಮುಂತಾದವರು ಉಪಸ್ಥಿತರಿದ್ದರು.
ಅಭಾಸಾಪ ಜಿಲ್ಲಾ ಜತೆ ಕಾರ್ಯದರ್ಶಿ ಲತೇಶ್ ಬಾಕ್ರಬೈಲ್ ಸ್ವಾಗತಿಸಿದರು.
ಕವಿಗೋಷ್ಠಿಯ ಸಂಘಟಕಿ ಗೀತಾ ಲಕ್ಷ್ಮೀಶ್ ಕಾರ್ಯಕ್ರಮ ನಿರೂಪಿಸಿದರು.






























































































































































































