ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ

92.5K Views 26 Jul 2025

ಮಂಗಳೂರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪ್ರತಿನಿಧಿ ಪತ್ರಿಕೆಯ ಮಂಗಳೂರು ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪ್ರದಾನ ಮಾಡಲಾಯಿತು.
ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ನನ್ನ ಜವಾಬ್ದಾರಿ ಇನ್ನಷ್ಟ್ಟು ಹೆಚ್ಚಾಗಿದೆ. ಪತ್ರಕರ್ತರು ಸಮಾಜಮುಖಿ ಚಿಂತನೆಗಳನ್ನು ಮಾಡಿದಾಗ ಹಾಗೂ ಆಶಕ್ತರ ನೋವುಗಳಿಗೆ ಸ್ಪಂದಿಸಿದಾಗ ಸಮಾಜದಲ್ಲಿ ಅಭಿವೃದ್ಧಿ ಹಾಗೂ ಬದಲಾವಣೆ ಕಾಣಬಹುದಾಗಿದೆ ಎಂದು ಹೇಳಿದರು. ನಾನು ವಿದೇಶದಲ್ಲೂ ಪ್ರಶಸ್ತಿ ಸ್ವೀಕರಿಸಿದ್ದೇನೆ. ಆದರೆ ನನ್ನ ಕೆಲಸ ಗುರುತಿಸಿ ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘ ಪ್ರಶಸ್ತಿ ನೀಡಿರುವುದು ತುಂಬಾ ಖುಷಿ ತಂದಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತ ಬದ್ರುದ್ದಿನ್ ಮಾಣಿ, ದೇರಳಕಟ್ಟೆ ವಿದ್ಯಾ ರತ್ನ ಇಂಗ್ಲಿಷ್ ಮೀಡಿಯಂ ಸ್ಕೂಲ್ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೋಟ್ಟು, ರಾಜ್ಯ ಜಾನಪದ ಪರಿಷತ್ ಅಧ್ಯಕ್ಷ ಪಮ್ಮಿ ಕೊಡಿಯಲ್ ಬೈಲ್, ಗಡಿನಾಡು ಪ್ರಾಧಿಕಾರದ ಸದಸ್ಯ ಸುಬ್ಬಯ್ಯ ಕಟ್ಟೆ, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಪು, ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಫದ ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್,ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಪ್ರಮುಖರಾದ ಗಂಗಾಧರ್, ಅಖಿಲೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಹುಬ್ಬಳ್ಳಿ ಅವ್ವ ಸೇವಾ ಟ್ರಸ್ಟ್ ನ ದತ್ತಿ ನಿಧಿ ಪ್ರಶಸ್ತಿಯ ಮೊತ್ತವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಲಾಗಿರುವ ಕುತ್ಲುರು ಸರಕಾರಿ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನ ಸಮವಸ್ತ್ರಕ್ಕೆ ನೀಡುವುದಾಗಿ ಹೇಳಿದರು.

Scroll to Top