ಮೂಲ್ಕಿ: ಸಮಾಜದ ಎಲ್ಲಾ ವರ್ಗದವರಲ್ಲಿಯೂ ಸೌಹಾರ್ದತೆಯ ಸಂದೇಶವನ್ನು ನೀಡಿದ ನಾರಾಯಣಗುರುಗಳು ಸಮಾನತೆ ಮತ್ತು ಮಾನವೀತಯತೆಯ ಪ್ರತೀಕವಾಗಿದ್ದಾರೆ. ಅವರ ಆದರ್ಶವನ್ನಿಟ್ಟುಕೊಂಡ ಬಿಲ್ಲವ ಸಂಘಟನೆಗಳು ಸಮಾಜ ಸ್ಪಂದನೆ ಮಾಡುವ ದೇಶಸೇವೆಯಂತೆ ಕೆಲಸ ನಿರ್ವಹಿಸುತ್ತಿದೆ. ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕತೆಯ ಮೌಲ್ಯವನ್ನು ಎತ್ತಿ ಹಿಡಿಯುವ ಕೆಲಸ ನಿರ್ವಹಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು.
ಅವರು ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ 14 ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಹಾಗೂ 7 ವಿದ್ಯಾರ್ಥಿಗಳಿಗೆ ಒಟ್ಟು 1.5 ಲಕ್ಷ ರೂ.ಗಳ ವಿದ್ಯಾನಿಧಿಯನ್ನು ಹಸ್ತಾಂತರಿಸಲಾಯಿತು. ಯು. ಟಿ. ಖಾದರ್ ಅವರನ್ನು ಗೌರವಿಸಲಾಯಿತು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಶುಭಹಾರೈಸಿದರು.
ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ-ಆರ್ಡಿನೇಟರ್ ಎಚ್.ವಸಂತ ಬೆರ್ನಾಡ್, ಕೆ.ಎಸ್.ರಾವ್ ನಗರ ಬಿಲ್ಲವ ಸಂಘದ ಅಧ್ಯಕ್ಷ ಮಹಾಬಲ ಸನಿಲ್, ಮೂಲ್ಕಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಬಿಲ್ಲವ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಗೋಪಿನಾಥ ಪಡಂಗ, ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಕುಬೆವೂರು, ಕೋಶಾಧಿಕಾರಿ ಚಂದ್ರಶೇಖರ ಕನ್ನಡರೆಬೆಟ್ಟು, ಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಮಹಿಳಾ ಮಂಡಳಿ ಅಧ್ಯಕ್ಷೆ ಶಶಿಕಲಾ ಅಮೀನ್, ಸೇವಾದಳದ ದಳಪತಿ ಶಶಿಕಾಂತ ಸುವರ್ಣ ಮತ್ತಿತರರು ಇದ್ದರು. ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಮೊದಲು ಸಂಘದ ನಾರಾಯಣಗುರು ಮಂದಿರಕ್ಕೆ ಯು.ಟಿ.ಖಾದರ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

















































































































































































