ಮಂಗಳೂರು: ದೇವಿ ಆರಾಧನಾ ಪರಂಪರೆಯ ನವರಾತ್ರಿ ಹಬ್ಬ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ದಸರಾ ಆಚರಣೆ ನಾಡಿನ ಏಕತೆಯ ಸಂಕೇತವಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಶರಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಶಾರದಾ ವಿದ್ಯಾಲಯದ ಸಹಯೋಗದಲ್ಲಿ ದಸರಾ ಮಹೋತ್ಸವದ ಅಂಗವಾಗಿ ನಗರದ ಶಾರದಾ ವಿದ್ಯಾಲಯದಲ್ಲಿ ಭಾನುವಾರ ನಡೆದ 3ನೇ ವರ್ಷದಮುದ್ದು ಶಾರದೆ ಹಾಗೂ ನವದುರ್ಗೆ ವೇಷ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ನಾಯಕ್ ಮಾತನಾಡಿ ಮುದ್ದು ಶಾರದೆ ಸ್ಪರ್ಧೆಯ ಮೂಲಕ ಎಳೆಯ ಮಕ್ಕಳಿಗೆ ವೇದಿಕೆ ಏರಲು ಅವಕಾಶ ಕಲ್ಪಿಸಿರುವುದು ಒಂದು ಉತ್ತಮ ಪ್ರಯತ್ನವಾಗಿದೆ ಎಂದರು.
ಮಾಜಿ ಕಾರ್ಪೋರೇಟರ್ ಕಿರಣ್ ಕುಮಾರ್ ಕೋಡಿಕಲ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉದ್ಯಮಿಗಳಾದ ಡಾ.ಪ್ರತಾಪ್ ಮಧುಕರ ಕಾಮತ್, ಡಿ. ರಮೇಶ್ ನಾಯಕ್, ಗಣೇಶ ಎನ್. ಶರ್ಮ, ಸೌತ್ ಕೆನರಾ ಫೋಟೋಗ್ರಾಫರ್ಸ್ ಸಹಕಾರ ಸಂಘದ ಅಧ್ಯಕ್ಷ ಕೆ.ವಾಸುದೇವ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶರಧಿ ಪ್ರತಿಷ್ಠಾನದ ಕಾರ್ಯದರ್ಶಿ ಪುನೀಕ್ ಶೆಟ್ಟಿ, ಸದಸ್ಯರಾದ ಜಗದೀಶ್ ಶೆಟ್ಟಿ ಬಿಜೈ, ದಿನೇಶ್ ಹೊಳ್ಳ ಉಪಸ್ಥಿತರಿದ್ದರು.
ಚೇತನ್ ಶೆಟ್ಟಿ ಪಿಲಿಕುಳ ಕಾರ್ಯಕ್ರಮ ನಿರೂಪಿಸಿದರು.





















































































































































































