ಡಾ. ಎಂ. ಎನ್. ರಾಜೇಂದ್ರ ಕುಮಾರ್ ನಿರ್ಮಾಣದ ವಾದಿರಾಜ ವಾಲಗ ಮಂಡಳಿ ಚಲನಚಿತ್ರಕ್ಕೆ ಮುಹೂರ್ತ

118.9K Views 20 Nov 2025

ಮಂಗಳೂರು: ಎಂ.ಎನ್.ಆರ್. ಪ್ರೊಡಕ್ಷನ್ ಲಾಂಛನದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನಿರ್ಮಾಣದ “ವಾದಿರಾಜ ವಾಲಗ ಮಂಡಳಿ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಾಳೆ ಬೆಳಿಗ್ಗೆ 9 ಗಂಟೆಗೆ ಉರ್ವಾ ಮಾರಿಯಮ್ಮ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕರಾದ ಎಂ. ಎನ್. ರಾಜೇಂದ್ರ ಕುಮಾರ್ ಅವರು ಪತ್ರಿಕಾಗೋಷ್ಠಿ ಹೇಳಿದರು
ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಜೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ವಿನು ಬಳಂಜ ಅವರ ನಿರ್ದೇಶನದಲ್ಲಿ ಸುಮಾರು 600 ಕಂತುಗಳಲ್ಲಿ “ಕನ್ನಡ” ವಾಹಿನಿಯಲ್ಲಿ ಪ್ರಸಾರಗೊಂಡ ಈ ಧಾರಾವಾಹಿಯು ಜನಮೆಚ್ಚುಗೆಯನ್ನು ಪಡೆದಿರುತ್ತದೆ. ಹಾಗೇ ಪ್ರತಿಭಾವಂತ ನಿರ್ದೇಶಕ ಎಂ.ಡಿ.ಶ್ರೀಧರ್ ಅವರ ನಿರ್ದೇಶನದಲ್ಲಿ “ಗಲಾಟೆ” ಎಂಬ ಸಿನೆಮಾ ನಟ ಪ್ರಜ್ವಲ್ ದೇವರಾಜ್ ಹಾಗೂ ಬಹುತಾರಾಗಣದಲ್ಲಿ ನಿರ್ಮಾಣವಾಗಿದ್ದು, ಇದು ಬಹುಪಾಲು ವಿದೇಶದಲ್ಲಿ ಚಿತ್ರೀಕರಣಗೊಂಡಿದೆ. ಈ “ಗಲಾಟೆ” ಚಲನಚಿತ್ರ “ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆಯ ಮೊದಲ ಚಲನಚಿತ್ರವಾಗಿದೆ.


ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆ ತುಳುನಾಡಿನ ಸಂಸ್ಥೆಯಾಗಿರುವುದರಿಂದ ತುಳುಭಾಷೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ “ಡಾಕ್ಟ್ರಾ..ಭಟ್ರಾ?” ಎನ್ನುವ ತುಳು ಸಿನೆಮಾ ಮುಹೂರ್ತ ಮಾಡಲಾಗಿದ್ದು, ಈ ಸಿನೆಮಾ ಮುಂದಿನ ವರ್ಷ ತೆರೆಕಾಣಲಿದೆ ಎಂದರು.
ಈ ಮಧ್ಯೆ ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ನಿರ್ದೇಶಕ, ಕಾಂತಾರ ಸಿನೆಮಾದ “ವರಾಹ ರೂಪಂ” “ಕಾಂತಾರ-I” ರ “ಗೊತ್ತಿಲ್ಲಾ ಶಿವನೇ ಭಕ್ತಿ ದಾರಿಯು” ಹಾಡುಗಳನ್ನು ರಚಿಸಿರುವ ಶಶಿರಾಜ್ ರಾವ್ ಕಾವೂರು ರಚಿಸಿರುವ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಇರುವ “ವಾದಿರಾಜ ವಾಲಗ ಮಂಡಳಿ” ಎಂಬ ಕನ್ನಡ ಸಿನೆಮಾವನ್ನು ತೆರೆಗೆ ಸಿದ್ಧಪಡಿಸುತ್ತಿದ್ದೇವೆ.
ಈ ಸಿನೆಮಾ ಉತ್ತಮ ಕಥಾ ಹಂದರದಿಂದ ಸಂಪೂರ್ಣ ಹಾಸ್ಯ ಪ್ರಧಾನವಾಗಿದ್ದು, ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಕೂಡಾ ನೀಡುತ್ತದೆ.


ಸಿನೆಮಾದಲ್ಲಿ ನವೀನ್ ಡಿ ಪಡೀಲ್, ಲಕ್ಷ್ಮಣ ಕುಮಾರ್ ಮಲ್ಲೂರು, ಪ್ರಕಾಶ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳೂರ್, ಮೈಮ್ ರಾಮದಾಸ್, ಶೋಭರಾಜ್ ಪಾವೂರು, ತನ್ವಿ ರಾವ್, ವೇನ್ಯ ರೈ, ಚೈತ್ರಾ ಶೆಟ್ಟಿ, ಕೀರ್ತನಾ ಮುಂತಾದವರು ನಟಿಸಲಿದ್ದಾರೆ.
ಚಿತ್ರಕ್ಕೆ ಎಸ್. ಚಂದ್ರಶೇಖರನ್ ಅವರ ಛಾಯಾಗ್ರಹಣ, ಮಣಿಕಾಂತ್ ಕದ್ರಿಯವರ ಸಂಗೀತ ನಿರ್ದೇಶನ, ಸಹ ನಿರ್ಮಾಪರಾಗಿ ಜಯಪ್ರಕಾಶ್ ತುಂಬೆ, ಕಾರ್ಯಕಾರಿ ನಿರ್ಮಾಪಕರಾಗಿ ಸಂತೋಷ್ ಶೆಟ್ಟಿ, ಸಹಕರಿಸಲಿದ್ದಾರೆ, ಕಾಸರಗೋಡು, ಮಂಗಳೂರು, ಉಡುಪಿ, ಕುಂದಾಪುರ ಮುಂತಾದ ಕಡೆ 40 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಶಶಿರಾಜ್ ಕಾವೂರ್, ಗೋಪಿನಾಥ್ ಭಟ್,ಎಸ್. ಚಂದ್ರಶೇಖರ್, ಜಯಪ್ರಕಾಶ್ ತುಂಬೆ, ಲಕ್ಷ್ಮಣ್ ಕುಮಾರ್ ಮಲ್ಲೂರು, ಸಂತೋಷ್ ಶೆಟ್ಟಿ, ಸುನೀಲ್ ಬಜಗೋಳಿ,ಉಪಸ್ಥಿತರಿದ್ದರು.
ಚಿತ್ರಗಳು-ಸತೀಶ್ ಕಾಪಿಕಾಡ್

Read More News

Scroll to Top