ಆರ್ಯಭಟ ಇಂಟರ್‌ನ್ಯಾಷನಲ್ ಅವಾರ್ಡ್ ಗೆ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಆಯ್ಕೆ.

116.7K Views 31 May 2024

ಮಂಗಳೂರು: ಅಬುಧಾಬಿಯಲ್ಲಿರುವ ಪ್ರತಿಷ್ಠಿತ ಇಂಡಿಯಾ ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್‌ನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಇವರು ಪ್ರತಿಷ್ಠಿತ ‘ಆರ್ಯಭಟ ಇಂಟರ್‌ನ್ಯಾಷನಲ್ ಅವಾರ್ಡ್-2024’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಜಯರಾಮ ರೈಯವರು ಮಾಡುತ್ತಿರುವ ಸಮಾಜ ಸೇವೆ ಮತ್ತು ಸಾಂಸ್ಕೃತಿಕ, ಸಾಹಿತ್ಯಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ, ಆರ್ಯಭಟ ಕಲ್ಚರಲ್ ಆರ್ಗನೈಸೇಷನ್ ಬೆಂಗಳೂರು ಇವರು ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಜೂ. 23 ರಂದು ಬೆಂಗಳೂರು ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ಇಂಡಿಯಾ ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡ ಸಂಘಟನೆಯಾಗಿದೆ. ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಮಿತ್ರಂಪಾಡಿ ಜಯರಾಮ ರೈಯವರು ಮೇ 13ರಂದು ನಡೆದ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾಗಿದ್ದರು. ಪ್ರಸ್ತುತ ಅಬುಧಾಬಿಯಲ್ಲಿರುವ ಬಿನ್ ಫರ್ದನ್ ಸಂಸ್ಥೆಯ ಸಿಎಫ್‌ಓ ಆಗಿ ಯಶಸ್ವಿ ಉದ್ಯಮಿಯಾಗಿರುವ ಮಿತ್ರಂಪಾಡಿ ಜಯರಾಮ ರೈಯವರು ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ದಿ. ಮಿತ್ರಂಪಾಡಿ ಚೆನ್ನಪ್ಪ ರೈ ಮತ್ತು ಡಿಂಬ್ರಿಗುತ್ತು ಸರಸ್ವತಿ ರೈ ಅವರ ಪುತ್ರ.
ಧಾರ್ಮಿಕ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಇವರು ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿಯನ್ನು ಮೂಡಿಸಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಅವರನ್ನೂ ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ನಡೆಸಲ್ಪಡುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಎಂಬ ಘೋಷ ವಾಕ್ಯದಲ್ಲಿ 22 ಗ್ರಾಮ ಪಂಚಾಯತ್ ವ್ಯಾಪ್ತಿಯ 32 ಗ್ರಾಮಗಳಲ್ಲಿ ಪ್ರತಿ ತಿಂಗಳು ನಡೆಯುವ ಸಾಹಿತ್ಯ ಸಂಭ್ರಮದ ಕಾರ್ಯಕ್ರಮದ ಮಹಾಪೋಷಕರಾಗಿದ್ದಾರೆಈ ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ‘ಕನ್ನಡದಲ್ಲೂ ಐಎಎಸ್ ಬರೆಯಿರಿ’ ಅಭಿಯಾನ, ಕವಿಗೋಷ್ಠಿ ಕಥಾಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಉಪನ್ಯಾಸ, ಸಾಧಕರಿಗೆ ಸನ್ಮಾನ ನಡೆಯುತ್ತಿದ್ದು, ಈಗಾಗಲೇ ಸುಮಾರು 5 ಸಾವಿರ ಪುಟಾಣಿ ಸಾಹಿತಿಗಳಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟ ಗೌರವ ಹಾಗೂ 50 ಸಾವಿರಕ್ಕೂ ಅಧಿಕ ಪ್ರೇಕ್ಷಕ ವರ್ಗ ವೀಕ್ಷಿಸಿ, ಆನಂದಿಸಿದ ಗೌರವ ಇವರಿಗೂ ಸಲ್ಲುತ್ತದೆ. ಕಳೆದ 25 ವರ್ಷಗಳಿಂದ ಅರಬ್ ರಾಷ್ಟ್ರದಲ್ಲೂ ಕನ್ನಡ ಸೇವೆ ಹಾಗೂ ಕನ್ನಡಿಗರ ಸೇವೆ ಮಾಡುತ್ತಿರುವ ಇವರು ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟಿನಲ್ಲಿ ಅನೇಕ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುವ ವಿಶ್ವಕನ್ನಡ ಸಮ್ಮೇಳನ, ವಿಶ್ವ ತುಳು ಸಮ್ಮೇಳನ, ಕವಿ ಸಮ್ಮೇಳನ, ನಾಟಕ ಯಕ್ಷಗಾನ, ಸಂಗೀತ ರಸಮಂಜರಿ, ಇನ್ನಿತರ ಸಾಮಾಜಿಕ ಚಟುವಟಿಕೆಗಳಿಗೆ ನಿರಂತರ ಬೆಂಬಲ, ಪ್ರೋತ್ಸಾಹ ನೀಡುತ್ತಿದ್ದಾರೆ.
ಜಯರಾಮ ರೈಯವರು ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಇದೀಗ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರು ಇಂಡಿಯಾ ಸೋಷಿಯಲ್ ಸೆಂಟರ್ ಟೋಸ್ಟ್ ಮಾಸ್ಟರ್ ಇಂಟಕ್ ನ್ಯಾಷನಲ್ ಅಬಧಾಬಿ ಇದರ ಸ್ಥಾಪಕಾಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

Read More News

Scroll to Top