“ವಿದ್ಯಾರ್ಥಿಗಳು ದೈನಂದಿನ ಆಗುಹೋಗು ತಿಳಿಯಲು ಪತ್ರಿಕೆಗಳನ್ನು ಓದಬೇಕು”-ಸ್ಪೀಕರ್ ಯು.ಟಿ. ಖಾದರ್. “ಪತ್ರಕರ್ತರೇ ಹಾಸ್ಯ ಪ್ರಜ್ಞೆ ಬೆಳೆಸಿಕೊಳ್ಳಿ”-ಭುವನೇಶ್ವರಿ ಹೆಗಡೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ

113.9K Views 1 Jul 2024

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯು ಸೋಮವಾರ ಬೆಳಗ್ಗೆ ನಗರದ ಪತ್ರಿಕಾಭವನದಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಪತ್ರಿಕೆಗಳು ಜನರ ಧ್ವನಿಯಾಗಿ ಸ್ವಾತಂತ್ರ್ಯ ಪೂರ್ವದಿಂದಲೇ ಕಾರ್ಯ ನಿರ್ವಹಿಸುತ್ತ ಬಂದಿವೆ. ಅಂಬೇಡ್ಕರ್, ಗಾಂಧೀಜಿ ಕೂಡ ಜನರನ್ನು ತಲುಪಲು ಪತ್ರಿಕೆಯನ್ನು ಆರಂಭಿಸಿದ್ದರು. ಇಂದು ಬದಲಾದ ಕಾಲಘಟ್ಟದಲ್ಲಿ ಪತ್ರಿಕೆಗಳ ಸ್ವರೂಪ ಬದಲಾಗಿದೆ. ವಿದ್ಯಾರ್ಥಿಗಳು ದೈನಂದಿನ ಆಗುಹೋಗು ತಿಳಿಯಲು ಪ್ರತಿನಿತ್ಯ ಪತ್ರಿಕೆಗಳನ್ನು ಓದಬೇಕು. ನಾನು ಚಿಕ್ಕಂದಿನಲ್ಲಿ ಪತ್ರಿಕೆ ಓದುವುದರ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೆ. ಪತ್ರಿಕೆಯನ್ನು ಕಾದು ಕುಳಿತು ತಗೊಂಡು ಅಲ್ಲೇ ಕೂತು ಓದುವಷ್ಟು ಆಸಕ್ತಿ ನನ್ನಲ್ಲಿತ್ತು. ಭಾಷೆಯ ಬಗ್ಗೆ ಹಿಡಿತ ಹೊಂದಲು ಪತ್ರಿಕೆ ಓದುವುದು ಸಹಕಾರಿ. ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವಲ್ಲಿ ಪತ್ರಕರ್ತರ ಕೊಡುಗೆ ಹೆಚ್ಚಿದೆ. ಪತ್ರಕರ್ತರು ವಾಸ್ತವವನ್ನು ಅರಿತುಕೊಂಡು ಕೆಲಸ ಮಾಡಬೇಕು” ಎಂದರು.


ಬಳಿಕ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದ ನಿವೃತ್ತ ಉಪನ್ಯಾಸಕಿ ಭುವನೇಶ್ವರಿ ಹೆಗಡೆ ಅವರು, “ಪತ್ರಕರ್ತರಿಗೆ ಸಾಮಾಜಿಕ ಜವಾಬ್ದಾರಿ ಇರಬೇಕು. ವಿಷಯವನ್ನು ಉತ್ಪ್ರೇಕ್ಷೆ ಮಾಡಿ ಬರೆಯಬಾರದು. ಪತ್ರಕರ್ತರು ಯಾವುದೇ ಕಾರಣಕ್ಕೂ ಒತ್ತಡಕ್ಕೆ ಒಳಗಾಗಬಾರದು. ಪತ್ರಕರ್ತರು ಸ್ವಸ್ಥ ಸಮಾಜದ ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕು. ಪತ್ರಕರ್ತರು ಹಾಸ್ಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಿ. ಇದರಿಂದ ಒತ್ತಡ ಕಡಿಮೆಯಾಗಿ ನಿಮ್ಮ ಅರೋಗ್ಯ ಸುಸ್ಥಿತಿಯಲ್ಲಿ ಇರುತ್ತದೆ” ಎಂದರು.


ವೇದಿಕೆಯಲ್ಲಿ ಮೂಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್,ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ವಾರ್ತಾ ಸಾರ್ವಜನಿಕ ಇಲಾಖೆ ಸಹಾಯಕ ಖಾದರ್ ಶಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮತ್ತಿತರರು ಉಪಸ್ಥಿತರಿದ್ದರು.
ಹಿರಿಯ ಪತ್ರಿಕಾ ವಿತರಕ ತಾರನಾಥ್ ಅವರನ್ನು ಇದೇ ಸಂದರ್ಭದಲ್ಲಿ ಅತಿಥಿಗಳು ಸನ್ಮಾನಿಸಿದರು.
ಛಾಯಾಗ್ರಾಹಕ ಸತೀಶ್ ಇರಾ ದೇವರನ್ನು ಸ್ತುತಿಸಿದರು. ಶ್ರೀನಿವಾಸ್ ಇಂದಾಜೆ ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವಿಜಯ್ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.

Read More News

Scroll to Top