ಮಂಗಳೂರು : ಮಾನವೀಯ ಸೇವೆ ಮತ್ತು ಸಮಾಜ ಸೇವಾ ಕಾರ್ಯದಲ್ಲಿ ಪರಿಪೂರ್ಣವಾಗಿ ತೊಡಗಿಸಿ ಕೊಂಡಿರುವ ರೆಡ್ಕ್ರಾಸ್ ಸೊಸೈಟಿಯ ಬಲವರ್ಧನೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ರೆಡ್ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವತಿಯಿಂದ ಸಂಸದರ ಕಚೇರಿಯಲ್ಲಿ ಶನಿವಾರ ಗೌರವ ಸ್ವೀಕರಿಸಿದ ಅವರು
ರೆಡ್ಕ್ರಾಸ್ ಸೊಸೈಟಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.
ದ.ಕ.ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡಕ್ಕೆ ಅಗತ್ಯ ನೆರವು ಒದಗಿಸಲಾಗುವುದು. ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ಅವರನ್ನು ಅಥವಾ ಕೇಂದ್ರದ ಆರೋಗ್ಯ ಸಚಿವರನ್ನು ಆಹ್ವಾನಿಸಲು ಪ್ರಯತ್ನಿಸುವುದಾಗಿ ಸಂಸದರು ತಿಳಿಸಿದರು.
ರೆಡ್ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಗೌರವಿಸಿದರು. ಆಡಳಿತ ಮಂಡಳಿ ನಿರ್ದೇಶಕರಾದ ಡಾ.ಬಿ.ಸಚ್ಚಿದಾನಂದ ರೈ, ಪುಷ್ಪರಾಜ್ ಜೈನ್, ಪಿ.ಬಿ.ಹರೀಶ್ ರೈ, ಗುರುದತ್ತ್ ಎಂ.ನಾಯಕ್, ವಿಠಲ ಎ. , ಕಾರ್ಯದರ್ಶಿ ಕಿಶೋರ್ಚಂದ್ರ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ನ ಮಾಜಿ ಅಧ್ಯಕ್ಷ ಸಂತೋಷ್ಕುಮಾರ್ ರೈ ಬೋಳಿಯಾರ್ ಉಪಸ್ಥಿತರಿದ್ದರು.


























































































































































































