ರಾಷ್ಟ್ರೀಯ ಪತ್ರಿಕಾ ದಿನಾಚರಣೆ : ‘ಪತ್ರಕರ್ತರಿಂದ ಸಮಾಜವನ್ನು ಎಚ್ಚರಿಸುವ ಕಾರ್ಯ’ : ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಆಶಯ

104.6K Views 19 Nov 2024

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ನಗರಾಭಿವವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಮಾತನಾಡಿ ‘ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಪತ್ರಕರ್ತರು ಸಮಾಜವನ್ನು ಕಾಲಕಾಲಕ್ಕೆ ಎಚ್ಚರಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ದಿನ ನಿತ್ಯದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಮಾಧ್ಯಮದ ಬಗ್ಗೆ ಸಮಾಜದಲ್ಲಿ ಗೌರವದ ಸ್ಥಾನವಿದೆ ಎಂದರು.
ಹಿರಿಯ ಪತ್ರಿಕಾ ವಿತರಕ ನಾಗರಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕಾ ವಿತರಕರಾಗಿರುವ ನಮ್ಮಂತವರನ್ನು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಮಾತನಾಡಿ ‘ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈ ಬಾರಿ ಬದಲಾಗುತ್ತಿರುವ ಮಾಧ್ಯಮಗಳ ಸ್ವರೂಪ ವಿಷಯದ ಬಗ್ಗೆ ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸುತ್ತಿದೆ. ಸುದ್ದಿಯನ್ನು ಪರಿಶೀಲನೆ ನಡೆಸದೆ ನೇರವಾಗಿ ನವ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದು ಈಗ ನಡೆಯುತ್ತಿದೆ. ಕರ್ನಾಟಕ ಸರ್ಕಾರ ಇದನ್ನು ತಡೆಯಲು ಒಂದು ಹೊಸ ಕಾಯ್ದೆಯನ್ನು ಜಾರಿ ಮಾಡಿದೆ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು.
ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದ ಪತ್ರಕರ್ತ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಭುವನೇಂದ್ರ ಪುದುವೆಟ್ಟು ಅವರಿಗೆ ಸಭೆ ಆರಂಭದ ಮೌನ ಪ್ರಾರ್ಥನೆಯೊಂದಿಗೆ ಸಂತಾಪ ಸೂಚಿಸಲಾಯಿತು.

Read More News

Scroll to Top