ಉಡುಪಿ: ಜಿಲ್ಲೆಯ ಉಡುಪಿ ನಗರಸಭಾ ವ್ಯಾಪ್ತಿಯ ಅಂಬಲಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸೂಕ್ತ ಬ್ಯಾರಿಕೇಡ್ ಹಾಗೂ ಸುರಕ್ಷತಾ ಕ್ರಮಗಳನ್ನು ಅಳವಡಿಸದೆ ಇರುವುದರಿಂದ ಪ್ರಯಾಣಿಕರ ಜೀವಕ್ಕೆ ಸಂಕಷ್ಟವಾಗಿರುತ್ತದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪತ್ರ ಮುಖೇನ ಮನವಿ ಮಾಡಿದ್ದಾರೆ.
ಈಗಾಗಲೇ ಉಡುಪಿ ಹತ್ತಿರದ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯಿಂದಾಗಿ ಅನೇಕ ಅವಘಡಗಳು ಸಂಭವಿಸಿದ್ದರೂ ಕೂಡಾ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಅಧಿಕಾರಿಗಳು ಅಂಬಲಪಾಡಿ ಫ್ಲೈ ಓವರ್ ಕಾಮಗಾರಿ ಪ್ರಾರಂಭದ ಹಂತದಲ್ಲಿ ಮುಂಜಾಗ್ರತೆ ವಹಿಸಿರುವುದಿಲ್ಲ.
ಇದರಿಂದಾಗಿ ನಿರ್ಮಾಣವಾದ ದೊಡ್ಡ ಗಾತ್ರದ ಹೊಂಡಗಳಲ್ಲಿ ವಾಹನಗಳು ಉರುಳಿ ಅಪಘಾತವಾಗುತ್ತಿದ್ದು ಈ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಕಾಮಗಾರಿ ಹಂತದಲ್ಲಿ ನಿರ್ಲಕ್ಷ್ಯತೆ ವಹಿಸಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಜೊತೆಗೆ ಸುರಕ್ಷತಾ ದೃಷ್ಟಿಯಿಂದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸೂಚನ ಫಲಕಗಳನ್ನು ಅಳವಡಿಸಬೇಕಾಗಿ ಮನವಿಯಲ್ಲಿ ತಿಳಿಸಿದ್ದಾರೆ.






























































































































































































