Author name: editor

ಪ್ರಾದೇಶಿಕ ವಾರ್ತೆಗಳು

ಎಂಆರ್ ಪಿಎಲ್ ನ 4 ನೇ ಹಂತದ ನಿರ್ವಸಿತರ ಕುಟುಂಬಗಳ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಮಂಗಳೂರು: ಎಂಆರ್ ಪಿಎಲ್ 4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು ಪೆರ್ಮುದೆ ಎಕ್ತಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು.ದ.ಕ ಜಿಲ್ಲಾ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, ವಿಶೇಷ ಭೂಸ್ವಾದಿನಾಧಿಕಾರಿ, ಎಂಅಸರ್ ಪಿಎಲ್ ನ ಅಧಿಕಾರಿಗಳ ಮತ್ತು ಭೂ ನಿರ್ವಸಿತರ ಹಿತರಕ್ಷಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.ಸ್ಥಳೀಯ ಶಾಸಕರು ಮತ್ತು ದ.ಕ ಜಿಲ್ಲಾ ಸಂಸದರು ಮಾತಾನಾಡಿ ಎಂಆರ್ ಪಿಎಲ್ ನ ವಿಸ್ತರಣೆಗಾಗಿ ಸ್ಥಳಿಯರು ಭೂಮಿಯನ್ನು ತ್ಯಾಗ ಮಾಡುತ್ತಿದ್ದು ಅವರಿಗೆ ದೊರಕಬೇಕಾದ `ಸವಲತ್ತುಗಳನ್ನು ಯಾವುದೇ ನಿಬಂದನೆಗಳಿಲ್ಲದೆ ಅಧಿಸೂಚನೆಗೆ ಮೊದಲು ಇದ್ದ ಎಲ್ಲಾ ಮನೆಗಳಿಗೆ ಸೂಕ್ತ ಪುನರ್ವಸತಿ ಮತ್ತು ಉದ್ಯೋಗವನ್ನು ವಿಳಂಬ ಮಾಡದೆ ಶೀಘ್ರವಾಗಿ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಆಗ್ರಹಿಸಲಾಯಿತು,ಸುಧೀರ್ಘ ನಡೆದ ಸಭೆಯಲ್ಲಿ ಕೊನೆಗೆ ಜಿಲ್ಲಾಧಿಕಾರಿಗಳು ಮತ್ತು ಎಂಆರ್ ಪಿಎಲ್ ನ ಅಧಿಕಾರಿಗಳು ಎಲ್ಲಾ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದರು.ಇವರಿಂದ ಹರ್ಷಗೊಂಡ ಭೂ ನಿರ್ವಸಿತರ ಹಿತರಕ್ಷಣಾ ಸಮಿತಿಹಲಾವರು ವರ್ಷಗಳಿಂದ ಬಾಕಿ ಉಳಿದ್ದಿದ್ದ ಎಂಆರ್ ಪಿಎಲ್ ನ 4 ನೇ ಹಂತದ ಭೂಸ್ವಾದಿನತೆ ಬಗ್ಗೆ ಇದ್ದ ಉದ್ಯೋಗ ಹಾಗೂ ಪುನರ್‌ ವಸತಿಯ ಬೇಡಿಕೆಗೆ ಸ್ಪಂದಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕ ಉಮಾನಾಥ ಕೊಟ್ಯನ್ ಅವರಿಗೆ ಅದೇ ರೀತಿ ದ.ಕ.ಜಿಲ್ಲಾಧಿಕಾರಿ ಹಾಗೂ ಎಂಆರ್ ಪಿಎಲ್ ಅಧಿಕಾರಿಗಳಿಗೆ ಭೂ ನಿರ್ವಸಿತರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ತರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

“ಬೀಚ್ ಫೆಸ್ಟಿವಲ್ ನಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ”-ಮೇಯರ್ ಸುಧೀರ್ ಶೆಟ್ಟಿ. ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ

ಮಂಗಳೂರು: “ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಸಂಜೆ ನಗರದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ಜರುಗಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತಾಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರು ಟ್ರಿಯಾಥ್ಲನ್ ಹಾಗೂ ಮಂಗಳೂರು ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜನೆಯಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುತ್ತಿರುವ ತಪಸ್ಯ ಫೌಂಡೇಶನ್ ಸಾರ್ಥಕ ಕೆಲಸವನ್ನು ಮಾಡುತ್ತಿದೆ. ಸಂಘಟನೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಮಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲ. ಕ್ಯಾನ್ಸರ್ ಪೀಡಿತ ಮಕ್ಕಳ ಆರೈಕೆಗೆ 100 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುತ್ತಿರುವ ಸಂಘಟನೆಯ ಜೊತೆಗೆ ಮಹಾನಗರ ಪಾಲಿಕೆ ನಿರಂತರ ಸಹಕಾರ ನೀಡಲಿದೆ” ಎಂದರು.ಮಂಗಳೂರು ಸಂಸದ ಕ್ಯಾ. ಬೃಜೇಶ್ ಚೌಟ ಮಾತಾಡಿ, “ತಪಸ್ಯ ಫೌಂಡೇಶನ್ ಮಾಡುತ್ತಿರುವ ಕಾರ್ಯ ನಿಜವಾದ ತಪಸ್ಸು. ನೀವು ಮಾಡುತ್ತಿರುವ ಕೆಲಸ ದೇವರ ಕೆಲಸವಾಗಿದೆ. ಸಂಘಟನೆ ಮಾಡುವ ಈ ಕಾರ್ಯದಲ್ಲಿ ಇಡೀ ಮಂಗಳೂರಿನ ಜನರು ಪಾಲ್ಗೊಳ್ಳಬೇಕು. ತುಳುನಾಡಿನಲ್ಲಿ ಒಳ್ಳೆಯ ಕೆಲಸ ಮಾಡಿದರೆ ದೈವ ದೇವರ ಸಹಕಾರ ಖಂಡಿತ ಇದ್ದೇ ಇರುತ್ತದೆ. ನಾನು ನಿಮ್ಮ ಎಲ್ಲ ಪ್ರಯತ್ನಗಳಿಗೆ ಜೊತೆಗೂಡಿ ಸಹಕಾರ ನೀಡುತ್ತೇನೆ“ ಎಂದರು. ಡಾ.ವಿಜಯ್ ಕುಮಾರ್ ಮಾತನಾಡಿ, “ತಪಸ್ಯ ಫೌಂಡೇಶನ್ ಸಮಾಜದಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿದೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ತೊಡಗಿಕೊಂಡಿರುವ ಫೌಂಡೇಶನ್ ಗೆ ಯೇನಪೋಯ ಆಸ್ಪತ್ರೆ ಸಹಕಾರ ನೀಡುತ್ತಾ ಬಂದಿದೆ. ಮುಂದೆಯೂ ಇದೇ ರೀತಿ ಸಂಘಟನೆಯ ಜೊತೆ ಕೆಲಸ ಮಾಡಲಿದೆ. ಕ್ಯಾನ್ಸರ್ ರೋಗಿಗಳ ಆರೈಕೆಗಾಗಿ ಪ್ಯಾಲೇಟಿವ್ ಕೇರ್ ಇಂದಿನ ಕಾಲದಲ್ಲಿ ಅಗತ್ಯವಿದೆ. ಇದರಲ್ಲಿ ನಿರತ ಸಂಘಟನೆಯ ಎಲ್ಲರಿಗೂ ಅಭಿನಂದನೆಗಳು“ ಎಂದರು.ಇದೇ ಸಂದರ್ಭದಲ್ಲಿ 52ನೇ ವಯಸ್ಸಿನಲ್ಲಿ ಮೌಂಟ್ ಏವರೆಸ್ಟ್ ಶಿಖರ ಏರಿರುವ ಕರ್ನಾಟಕದ ಮೊದಲ ಮಹಿಳೆ ಡಾ. ಉಷಾ ಹೆಗ್ಡೆ ಅವರನ್ನು ಅತಿಥಿಗಳು ಸನ್ಮಾನಿಸಿದರು.ಕಾರ್ಯಕ್ರಮದ ಟಿ ಶರ್ಟ್, ಮೆಡಲ್, ಬ್ಯಾಡ್ಜ್ ಅನಾವರಣಗೊಳಿಸಿದರು.ವೇದಿಕೆಯಲ್ಲಿ ಮಂಗಳೂರು ಸಂಸದ ಬೃಜೇಶ್ ಚೌಟ, ಐಡಿಎಫ್‌ಸಿ ಬ್ಯಾಂಕಿನ ರೀಜನಲ್ ಹೆಡ್ ಶರಣ್ ರಜನಿ, ಎನ್ ಐಟಿಕೆ ಡೀನ್ ಎ.ಸಿ. ಹೆಗ್ಡೆ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯೇನಪೋಯ ವಿವಿಯ ವೈಸ್‌ ಚಾನ್ಸೆಲರ್‌ ಡಾ। ವಿಜಯ ಕುಮಾರ್, ಇಂಡಿಯನ್ ಟ್ರಿಯಾಥ್ಲನ್ ಫೆಡರೇಷನ್ ಅಭಿವೃದ್ಧಿ ಅಧಿಕಾರಿ ಹರೀಶ್ ಪ್ರಸಾದ್, ರಾಜ್ಯ ರಸ್ಲಿಂಗ್ ಫೆಡರೇಷನ್ ಅಧ್ಯಕ್ಷ ಗುಣರಂಜನ್ ಶೆಟ್ಟಿ, ಶರಣ್ ರಜನಿ, ಸಂದೇಶ್ ಹೆಗ್ಡೆ, ನರಸಿಂಹ ಹೆಗ್ಡೆ, ಕೆಎಂಸಿ ಆಸ್ಪತ್ರೆಯ ಹರ್ಷ ಪ್ರಸಾದ್‌ ಮತ್ತಿತರರು ಉಪಸ್ಥಿತರಿದ್ದರು.ತಪಸ್ಯ ಫೌಂಡೇಶನ್ ಮೆನೇಜಿಂಗ್ ಟ್ರಸ್ಟಿ ಸಬಿತಾ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.–ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಕದ್ರಿ ಪಾರ್ಕ್‌ನಲ್ಲಿ ವನಮಹೋತ್ಸವ. ‘ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ.’ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಮಂಗಳೂರು : ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ನಡೆದ ಹಸಿರೇ ಉಸಿರು ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಗ್ರಾಮವಾಸ್ತವ್ಯ, ಬ್ರಾೃಂಡ್ ಮಂಗಳೂರಿನಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ‘ ಪತ್ರಕರ್ತರು ಪರಿಸರದ ಬಗ್ಗೆ ಕಾಳಜಿ ವಹಿಸಿ ಗಿಡಗಳನ್ನು ನೆಟ್ಟಿರುವುದು ಶ್ಲಾಘನೀಯ ಎಂದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ದ.ಕ.ವಾರ್ತಾ ಇಲಾಖೆಯ ಉಪ ನಿರ್ದೇಶಕ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಂಗಳೂರು ಮಹಾ ನಗರ ಪಾಲಿಕೆಯ ಜಂಟಿ ಅಯುಕ್ತ ಚಂದ್ರಶೇಖರಯ್ಯ, ಕಲಬುರಗಿ ಆಕಾಶವಾಣಿಯ ನಿವೃತ್ತ ನಿಲಯ ನಿರ್ದೇಶಕ ಸದಾನಂದ ಪೆರ್ಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ಹಿರಿಯ ಪತ್ರಕರ್ತರಾದ ರಮೇಶ್ ಪೆರ್ಲ ,ಪದ್ಮನಾಭ ಗಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ನಾಳೆ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣೆ ಶಿಬಿರ.

ಮಂಗಳೂರು : ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ, ದ.ಕ.ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಹಾಗೂ ಹೊರನಾಡ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಡಾ‌.ಸುಧಾಕರ ಶೆಟ್ಟಿ ಅವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರವು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯಧಾಮದಲ್ಲಿ ನಾಳೆ  ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ12 ರ ವರೆಗೆ ನಡೆಯಲಿರುವ ಈ ಶಿಬಿರದ ಪ್ರಯೋಜನವನ್ನು ಕಲ್ಲಬೆಟ್ಟು ಮತ್ತು ಆಸುಪಾಸಿನ ಗ್ರಾಮಗಳ ಮಕ್ಕಳು ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಸುರೇಶ್ ಕೋಟ್ಯಾನ್, ಉಪಾಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಆರ್.ಶೆಟ್ಟಿ ಅವರು ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಪ್ರಾಮಾಣಿಕವಾಗಿ ಯೋಧನ ಹಾಗೆ ಸಮರ್ಪಣಾ ಮನೋಭಾವದಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾರ್ಯ ನಿರ್ವಹಿಸಲಿದ್ದಾರೆ. ಸಂಸದರ ಕಚೇರಿ ಉದ್ಘಾಟಿಸಿ ಶುಭ ಹಾರೈಸಿದ ಡಾ. ಕಲ್ಲಡ್ಕ ಪ್ರಭಾಕರ್ ಭಟ್

ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೂತನ ಕಚೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎರಡನೇ ಮಹಡಿಯಲ್ಲಿ ಶುಕ್ರವಾರ ಶುಭಾರಂಭಗೊಂಡಿತು.ಆರ್‌ಎಸ್‌ಎಸ್ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಚೇರಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ದೇವರ ಹಾಗೂ ಜನರ ಆಶೀರ್ವಾದದಿಂದ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಓರ್ವ ನಿವೃತ್ತ ಯೋಧ ಸಂಸದರಾಗಿ ಆಯ್ಕೆಯಾಗಿದ್ದಾರೆ. ಯೋಧ ರಾಷ್ಟ್ರದ ಒಳಿತಿಗಾಗಿ ಕೆಲಸ ಮಾಡಿದಂತೆ ಬ್ರಿಜೇಶ್ ಚೌಟ ಅವರು ಕ್ಷೇತ್ರದ ಅಭಿವೃದ್ಧಿಗೆ, ಜನರ ಕಷ್ಟ, ನೋವು, ದುಖಃಗಳ ಪರಿಹಾರಕ್ಕಾಗಿ ಕ್ಷೇತ್ರದ ಪ್ರತಿನಿಧಿಯಾಗಿ ಸಂಸತ್‌ನಲ್ಲಿ ಧ್ವನಿ ಎತ್ತಲಿದ್ದಾರೆ. ಎಲ್ಲರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ನೂತನ ಕಚೇರಿ ಕೆಲಸ ಮಾಡಲಿ. ಪ್ರಾಮಾಣಿಕವಾಗಿ ಯೋಧನ ಹಾಗೆ ಸಮರ್ಪಣಾ ಭಾವದಿಂದ ಬ್ರಿಜೇಶ್ ಚೌಟ ಅವರು ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.ಸಂಸದ ಬ್ರಿಜೇಶ್ ಚೌಟ ಮಾತನಾಡಿ, ನೂತನ ಕಚೇರಿ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುವುದು. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ಒದಗಿಸುವ, ಅವಕಾಶ ಕಲ್ಪಿಸುವ ಕೆಲಸವನ್ನು ಪಕ್ಷ ಮಾಡಿಕೊಂಡು ಬಂದಿದೆ. ಅದನ್ನೇ ನಾನು ಮುಂದುವರೆಸುತ್ತೇನೆ. ಕಾರ್ಯಕರ್ತರ, ಹಿಂದುತ್ವದ ಧ್ವನಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಹಿಂದುತ್ವಕ್ಕೆ ಬದ್ದತೆ, ಅಭಿವೃದ್ಧಿಗೆ ಆದ್ಯತೆ ನೀಡಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕೆ ಪೂರಕವಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣಕ್ಕೆ ಎಲ್ಲರ ಸಹಕಾರ ಪಡೆದು ಕೆಲಸ ಮಾಡಲಾಗುವುದು ಎಂದರು.ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಳೆದ ಮೂರು ದಶಕಗಳಿಂದ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಸಂಸದರು ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಬ್ರಿಜೇಶ್ ಚೌಟ ಅವರೂ ನೂತನ ಕಚೇರಿ ಮೂಲಕ ಜಿಲ್ಲೆಯ ಜನತೆ, ಕಾರ್ಯಕರ್ತರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವ ವಿಶ್ವಾಸವಿದೆ. ಕ್ರಿಯಾಶೀಲರಾಗಿರುವ ನೂತನ ಸಂಸದರಿಂದ ಜಿಲ್ಲೆಯ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯಲಿ ಎಂದರು.ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ನೂತನ ಕಚೇರಿ ಮೂಲಕ ಜಿಲ್ಲೆಯ ಜನರ ಕುಂದುಕೊರತೆಗೆ ಪರಿಹಾರ ದೊರೆಯಲಿ. ಇನ್ನಷ್ಟು ಒಂದಾಗಿ ಜಿಲ್ಲೆಯ ಅಭಿವೃದ್ಧಿಗೆ ನಾವೆಲ್ಲರೂ ಶ್ರಮಿಸಲಿದ್ದೇವೆ. ಬಿಜೆಪಿಯನ್ನು ಸಂಘಟಿತವಾಗಿ ಇನ್ನಷ್ಟು ಬಲಗೊಳಿಸಲು ಬದ್ದರಿದ್ದೇವೆ. ಇದಕ್ಕಾಗಿ ನೂತನ ಸಂಸದರಿಗೆ ಎಲ್ಲರ ಸಹಕಾರ ದೊರೆಯಲಿ ಎಂದು ಹೇಳಿದರು.ಶಾಸಕ ಡಾ. ವೈ. ಭರತ್ ಶೆಟ್ಟಿ ಮಾತನಾಡಿ, ಜಿಲ್ಲೆಯ ಅವಕಾಶ ವಂಚಿತರಿಗೆ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ದ.ಕ. ಕ್ಷೇತ್ರದ ಯುವ ಸಂಸದರು ಯಶಸ್ವಿಯಾಗಿ ಕೆಲಸ ನಿರ್ವಹಿಸಲಿ. ಸಾರ್ವಜನಿಕರು ನೂತನ ಕಚೇರಿಯ ಸದುಪಯೋಗ ಪಡೆದುಕೊಳ್ಳಿ ಎಂದರು.ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಪ್ರತಾಪ ಸಿಂಹ ನಾಯಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಮಾಜಿ ಶಾಸಕರಾದ ಯೋಗೀಶ್ ಭಟ್, ಮಲ್ಲಿಕಾ ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಬಾಲಕೃಷ್ಣ ಭಟ್, ಮೋನಪ್ಪ ಭಂಡಾರಿ, ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಮೇಯರ್‌ಗಳಾದ ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಜಯಾನಂದ ಅಂಚನ್, ಪಕ್ಷದ ಪದಾಧಿಕಾರಿಗಳು, ಮನಪಾ ಸದಸ್ಯರು, ಕಾರ್ಯಕರ್ತರು ಶುಭ ಹಾರೈಸಿದರು.

ಪ್ರಾದೇಶಿಕ ವಾರ್ತೆಗಳು

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11.00 ರಿಂದ ಮಧ್ಯಾಹ್ನ 02.00 ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ, ಈ ವಿಲೀನದಿಂದ ರೈಲ್ವೆ ಮೂಲಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ. ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಉನ್ನತೀಕರಣ: ಶಿರಾಡಿ ಘಾಟ್ ಭಾಗದ ಕಾರ್ಯಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ-ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.ಈ ಸಭೆಯು ದಕ್ಷಿಣ ಕನ್ನಡದ ರೈಲ್ವೆ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ.ಈ ಮಹತ್ವದ ಸಭೆಯು ದಕ್ಷಿಣ ಕನ್ನಡದ ರೈಲು ಸೇವೆಗಳ ಸುಧಾರಣೆ ಮತ್ತು ಭವಿಷ್ಯದ ಅಭಿವೃದ್ಧಿಗೆ ಮೈಲುಗಲ್ಲಾಗಲಿದೆ.

ಪ್ರಾದೇಶಿಕ ವಾರ್ತೆಗಳು

ಜುಲೈ 14 ರಂದು ಚೆನ್ನೈ ಯಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ

ಮಂಗಳೂರು, ಜುಲೈ 12,ಚೆನ್ನೈ ನಗರದ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಶ್ರೀ ಜೆ. ಎಸ್. ಪ್ರಭು ಹಾಗೂ ಶ್ರೀಮತಿ ರಮಾಬಾಯಿ ಪ್ರಭು ಸ್ಮರಣಾರ್ಥ ಸಂಗೀತ ಕಾರ್ಯಕ್ರಮ ಜುಲೈ 14 ಭಾನುವಾರ ದಂದು ಸಂಜೆ 6 ಗಂಟೆಯಿಂದ 7.45 ರ ವರೆಗೆ ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ನಡೆಯಲಿದೆ.ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಲಾವಿದೆ ವಿಭಾ ಶ್ರೀನಿವಾಸ್ ನಾಯಕ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ ಹಾಗೂ ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲ ದಲ್ಲಿ ಸಾಥ್ ನೀಡಲಿದ್ದಾರೆ.ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಬೃಹತ್ ಹಲಸು ಹಬ್ಬ ಹಾಗೂ ಆಹಾರೋತ್ಪನಗಳ ಮಹಾಮೇಳದ ಪ್ರಚಾರ ಪತ್ರ ಬಿಡುಗಡೆ

ಮಂಗಳೂರು :ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಗಸ್ಟ್ 3,4 ರಂದು ಏರ್ಪಡಿಸಲಾದ ಬಂಟ್ವಾಳ ಬೃಹತ್ ಹಲಸು ಹಬ್ಬ-ಹಣ್ಣುಗಳ ವಿವಿಧ ಆಹಾರೋತ್ಪನ್ನಗಳ ಮಹಾಮೇಳ ಹಾಗೂ ಪ್ರದರ್ಶನ ಮತ್ತು ಮಾರಾಟದ ಪ್ರಚಾರ ಪತ್ರವನ್ನು ರಾಜ್ಯ ಸಭಾ‌ ಸದಸ್ಯರಾದ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನೇಶನಲ್ ಸಂಸ್ಥೆಯ ಬಂಟ್ವಾಳ ನೇತ್ರಾವತಿ ಸಂಗಮದ‌ ಅಧ್ಯಕ್ಷ ಆದಿರಾಜ ಜೈನ್ ಮೇಳದ ಬಗ್ಗೆ ಪ್ರಸ್ತಾವನೆ ಗೈದರು. ಪದ್ಮಶೇಖರ ಜೈನ್, ಭರತ್ ಕುಮಾರ್ ಬಲ್ಲೋಡಿಗುತ್ತು, ಮಾಯಿಲಪ್ಪ ಸಾಲಿಯಾನ್, ಶ್ರೇಯಾಂಶ ಕುಮಾರ್, ಮಾಣಿಕ್ಯ ರಾಜ್ ಜೈನ್, ಶಾಂತಿ ಪ್ರಸಾದ್ ಜೈನ್, ಸತೀಶ ಕುಮಾರ್ ಪಿಲಿಂಗಾಲು, ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಗಲಾಟೆ ಸಂಸಾರ ಕನ್ನಡ ವೆಬ್ ಸರಣಿಯ ಶೀರ್ಷಿಕೆಯ ಅನಾವರಣಗ್ರಾಮೀಣ ಕಲಾವಿದರ ಕೌಶಲ್ಯಕ್ಕೆ ವೇದಿಕೆ ನೀಡಿ : ಶ್ರೀ ಚಂದ್ರಶೇಖರ ಸ್ವಾಮೀಜಿ

ಮೂಲ್ಕಿ : ತುಳುನಾಡಿನ ಗ್ರಾಮೀಣ ಭಾಗದ ಕಲಾವಿದರ ಕೌಶಲ್ಯಕ್ಕೆ ಸೂಕ್ತ ವೇದಿಕೆ ನೀಡಿ ಅವರನ್ನು ಪ್ರೋತ್ಸಾಹಿಸಬೇಕು, ಸಾಮಾಜಿಕ ಜಾಲತಾಣದಲ್ಲಿ ಇರುವ ಅವಕಾಶವನ್ನು ಪಡೆದುಕೊಂಡು ಕಲಾ ಚತುರತೆಯನ್ನು ಪ್ರದರ್ಶಿಸುವ ವಿಫುಲ ಅವಕಾಶವಿದೆ. ಕಿರುತೆರೆಯಲ್ಲಿ ಯುವ ಸಮುದಾಯವು ತಮ್ಮ ಪ್ರತಿಭಾ ಸಾಮರ್ಥ್ಯ ಪ್ರದರ್ಶಿಸಿ ಸಿನಿಮಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿರಿ ಎಂದು ಅಂತಾರಾಷ್ಟ್ರೀಯ ವಾಸ್ತುತಜ್ಞರು, ಜ್ಯೋತಿಷ್ಯರು, ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.ಅವರು ಮೂಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದಲ್ಲಿ ನಡೆದ ಮಂಗಳೂರಿನ ಶ್ರೀಗುರುನಮನಸಂತೃಪ್ತಿ ಫಿಲ್ಮ್ಸ್‌ನ ಗಲಾಟೆ ಸಂಸಾರ ಕನ್ನಡ ವೆಬ್ ಸೀರೀಸ್ ಶೀರ್ಷಿಕೆಯನ್ನು ಅನಾವರಣಗೊಳಿಸಿ ಆಶೀರ್ವಚನ ನೀಡಿದರು.ಶ್ರೀ ಚಂದ್ರಶೇಖರ ಸೇವಾಶ್ರಮದ ನಿರ್ದೇಶಕಿ ರಜನಿ ಸಿ. ಭಟ್ ಅವರು ಗಲಾಟೆ ಸಂಸಾರ ಶೀರ್ಷಿಕೆಯೊಂದಿಗೆ ಉತ್ತಮವಾಗಿ ಧಾರವಾಹಿ ಮೂಡಿಬರಲಿ ಎಂದು ಶುಭ ಹಾರೈಸಿದರು.ಧಾರವಾಹಿಯ ನಿರ್ದೇಶಕ ದೇವಿಪ್ರಕಾಶ್ ಮಂಗಳೂರು ಸ್ವಾಗತಿಸಿ, ಪ್ರಸ್ತಾವನೆಗೈದರು, ಛಾಯಾಗ್ರಾಹಕ ಹರೀಶ್ ಪಿ. ಕೋಟ್ಯಾನ್ ಪಡುಪಣಂಬೂರು ವಂದಿಸಿದರು, ಪತ್ರಕರ್ತ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ರೋಟರಿ ಜಿಲ್ಲೆ 3181’ರ ವಲಯ -1ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ, ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆ.

ಮಂಗಳೂರು: ರೋಟರಿ ಜಿಲ್ಲೆ 3181 ರ ವಲಯ -1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ, ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ರಂಗ ನಟ, ಯಕ್ಷಗಾನ ಕಲಾವಿದ, ಕಳೆದ 26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆಯನ್ನು ಮುನ್ನಡೆಸುತ್ತಿದ್ದು, ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹುಟ್ಟೂರು ಸಂಕಲಕರಿಯ ವಿಜಯಾ ಯುವಕ ಸಂಘ, ಸಂಕಲಕರಿಯ ಹಾಲು ಉತ್ಪಾದಕರ ಸಂಘ, ಮುಲ್ಕಿ ವಲಯ ಪತ್ರಕರ್ತರ ಸಂಘ, ಕಿನ್ನಿಗೋಳಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಐಕಳ ಪೊಂಪೈ ಕಾಲೇಜು ಹಳೆ ವಿದ್ಯಾರ್ಥಿ ಸಂಘ, ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘ, ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜು ವಿದ್ಯಾರ್ಥಿ ಸಂಘ, ಕಿನ್ನಿಗೋಳಿ ರೋಟರಾಕ್ಟ್ ಗಳಲ್ಲಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಉತ್ತಮ ಕಾರ್ಯಕ್ರಮ ನಿರೂಪಕರಾಗಿ, ಸಮಾಜ ಸೇವಕರಾಗಿರುವ ಇವರಿಗೆ Mp mla’s ನ್ಯೂಸ್ ಶುಭ ಹಾರೈಸುತ್ತದೆ.

Scroll to Top