Author name: editor

ಪ್ರಾದೇಶಿಕ ವಾರ್ತೆಗಳು

ಡಾ. ಎಂ. ಎನ್. ರಾಜೇಂದ್ರ ಕುಮಾರ್ ನಿರ್ಮಾಣದ ವಾದಿರಾಜ ವಾಲಗ ಮಂಡಳಿ ಚಲನಚಿತ್ರಕ್ಕೆ ಮುಹೂರ್ತ

ಮಂಗಳೂರು: ಎಂ.ಎನ್.ಆರ್. ಪ್ರೊಡಕ್ಷನ್ ಲಾಂಛನದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನಿರ್ಮಾಣದ “ವಾದಿರಾಜ ವಾಲಗ ಮಂಡಳಿ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಾಳೆ ಬೆಳಿಗ್ಗೆ 9 ಗಂಟೆಗೆ ಉರ್ವಾ ಮಾರಿಯಮ್ಮ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕರಾದ ಎಂ. ಎನ್. ರಾಜೇಂದ್ರ ಕುಮಾರ್ ಅವರು ಪತ್ರಿಕಾಗೋಷ್ಠಿ ಹೇಳಿದರುಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಜೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ವಿನು ಬಳಂಜ ಅವರ ನಿರ್ದೇಶನದಲ್ಲಿ ಸುಮಾರು 600 ಕಂತುಗಳಲ್ಲಿ “ಕನ್ನಡ” ವಾಹಿನಿಯಲ್ಲಿ ಪ್ರಸಾರಗೊಂಡ ಈ ಧಾರಾವಾಹಿಯು ಜನಮೆಚ್ಚುಗೆಯನ್ನು ಪಡೆದಿರುತ್ತದೆ. ಹಾಗೇ ಪ್ರತಿಭಾವಂತ ನಿರ್ದೇಶಕ ಎಂ.ಡಿ.ಶ್ರೀಧರ್ ಅವರ ನಿರ್ದೇಶನದಲ್ಲಿ “ಗಲಾಟೆ” ಎಂಬ ಸಿನೆಮಾ ನಟ ಪ್ರಜ್ವಲ್ ದೇವರಾಜ್ ಹಾಗೂ ಬಹುತಾರಾಗಣದಲ್ಲಿ ನಿರ್ಮಾಣವಾಗಿದ್ದು, ಇದು ಬಹುಪಾಲು ವಿದೇಶದಲ್ಲಿ ಚಿತ್ರೀಕರಣಗೊಂಡಿದೆ. ಈ “ಗಲಾಟೆ” ಚಲನಚಿತ್ರ “ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆಯ ಮೊದಲ ಚಲನಚಿತ್ರವಾಗಿದೆ. ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆ ತುಳುನಾಡಿನ ಸಂಸ್ಥೆಯಾಗಿರುವುದರಿಂದ ತುಳುಭಾಷೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ “ಡಾಕ್ಟ್ರಾ..ಭಟ್ರಾ?” ಎನ್ನುವ ತುಳು ಸಿನೆಮಾ ಮುಹೂರ್ತ ಮಾಡಲಾಗಿದ್ದು, ಈ ಸಿನೆಮಾ ಮುಂದಿನ ವರ್ಷ ತೆರೆಕಾಣಲಿದೆ ಎಂದರು.ಈ ಮಧ್ಯೆ ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ನಿರ್ದೇಶಕ, ಕಾಂತಾರ ಸಿನೆಮಾದ “ವರಾಹ ರೂಪಂ” “ಕಾಂತಾರ-I” ರ “ಗೊತ್ತಿಲ್ಲಾ ಶಿವನೇ ಭಕ್ತಿ ದಾರಿಯು” ಹಾಡುಗಳನ್ನು ರಚಿಸಿರುವ ಶಶಿರಾಜ್ ರಾವ್ ಕಾವೂರು ರಚಿಸಿರುವ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಇರುವ “ವಾದಿರಾಜ ವಾಲಗ ಮಂಡಳಿ” ಎಂಬ ಕನ್ನಡ ಸಿನೆಮಾವನ್ನು ತೆರೆಗೆ ಸಿದ್ಧಪಡಿಸುತ್ತಿದ್ದೇವೆ.ಈ ಸಿನೆಮಾ ಉತ್ತಮ ಕಥಾ ಹಂದರದಿಂದ ಸಂಪೂರ್ಣ ಹಾಸ್ಯ ಪ್ರಧಾನವಾಗಿದ್ದು, ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಕೂಡಾ ನೀಡುತ್ತದೆ. ಸಿನೆಮಾದಲ್ಲಿ ನವೀನ್ ಡಿ ಪಡೀಲ್, ಲಕ್ಷ್ಮಣ ಕುಮಾರ್ ಮಲ್ಲೂರು, ಪ್ರಕಾಶ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳೂರ್, ಮೈಮ್ ರಾಮದಾಸ್, ಶೋಭರಾಜ್ ಪಾವೂರು, ತನ್ವಿ ರಾವ್, ವೇನ್ಯ ರೈ, ಚೈತ್ರಾ ಶೆಟ್ಟಿ, ಕೀರ್ತನಾ ಮುಂತಾದವರು ನಟಿಸಲಿದ್ದಾರೆ.ಚಿತ್ರಕ್ಕೆ ಎಸ್. ಚಂದ್ರಶೇಖರನ್ ಅವರ ಛಾಯಾಗ್ರಹಣ, ಮಣಿಕಾಂತ್ ಕದ್ರಿಯವರ ಸಂಗೀತ ನಿರ್ದೇಶನ, ಸಹ ನಿರ್ಮಾಪರಾಗಿ ಜಯಪ್ರಕಾಶ್ ತುಂಬೆ, ಕಾರ್ಯಕಾರಿ ನಿರ್ಮಾಪಕರಾಗಿ ಸಂತೋಷ್ ಶೆಟ್ಟಿ, ಸಹಕರಿಸಲಿದ್ದಾರೆ, ಕಾಸರಗೋಡು, ಮಂಗಳೂರು, ಉಡುಪಿ, ಕುಂದಾಪುರ ಮುಂತಾದ ಕಡೆ 40 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಶಶಿರಾಜ್ ಕಾವೂರ್, ಗೋಪಿನಾಥ್ ಭಟ್,ಎಸ್. ಚಂದ್ರಶೇಖರ್, ಜಯಪ್ರಕಾಶ್ ತುಂಬೆ, ಲಕ್ಷ್ಮಣ್ ಕುಮಾರ್ ಮಲ್ಲೂರು, ಸಂತೋಷ್ ಶೆಟ್ಟಿ, ಸುನೀಲ್ ಬಜಗೋಳಿ,ಉಪಸ್ಥಿತರಿದ್ದರು.ಚಿತ್ರಗಳು-ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಶಾಸಕ ವೇದವ್ಯಾಸ ಕಾಮತ್ ರವರು ಇಂದು ಅಟಲ್ ಸೇವಾ ಕೇಂದ್ರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯ ವಿವರಗಳು.

1.ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದು ಜನಸಾಮಾನ್ಯರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಖಂಡನೀಯ. ನಗರದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಜನರಿಗೆ ನೀರಿಲ್ಲದ ವಾತಾವರಣ ಸೃಷ್ಟಿಯಾಗಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದಂತೂ ಈ ಸರ್ಕಾರದ ಬೇಜವಾಬ್ದಾರಿಯ ಪರಮಾವಧಿಯಾಗಿದೆ. 2.ಮಂಗಳೂರು ಆಯುಷ್ ನಲ್ಲಿ ಔಷಧ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದ್ದು, ಅಧಿಕಾರಿಗಳು ಹಣದ ಆಸೆಗೆ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡಿದ್ದು ತಿಳಿದ ಕೂಡಲೇ ದಾಖಲೆಗಳ ಸಮೇತ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಿದ್ದೇನೆ. ಇದು ಸಾರ್ವಜನಿಕರ ಆರೋಗ್ಯದ ವಿಷಯವಾಗಿದ್ದರೂ ಗಂಭೀರವಾಗಿ ಪರಿಗಣಿಸದ ಇಲಾಖೆಯ ನಿರ್ಲಕ್ಷ್ಯ ಖಂಡನೀಯ. ಯಾರನ್ನು ರಕ್ಷಿಸಲು ಇಲ್ಲಿ ಹುನ್ನಾರ ನಡೆಯುತ್ತಿದೆ? ಇದರ ಹಿಂದೆ ಯಾರಿದ್ದಾರೆ? ಯು.ಟಿ ಖಾದರ್, ಐವನ್ ಡಿಸೋಜ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಜನಪ್ರತಿನಿಧಿಗಳ ಮೇಲೆಯೇ ಸಾರ್ವಜನಿಕರ ಸಂಶಯ ಮೂಡುವಂತಾಗಿದೆ. ಇದೀಗ ಅಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು ಆರೋಪಕ್ಕೆ ಪೂರಕವಾಗಿ ಕೆಲವು ದಾಖಲೆಗಳು ಲಭಿಸಿದೆ ಎಂದು ವರದಿಯಾಗಿದ್ದು, ಯಾವುದೇ ಒತ್ತಡಕ್ಕೆ ಒಳಗಾಗದೇ ಸೂಕ್ತ ತನಿಖೆ ಮುಂದುವರಿದರೆ ಮತ್ತಷ್ಟು ವಿಷಯಗಳು, ಕಾಣದ ಕೈಗಳು ಹೊರಗೆ ಬರುವ ನಿರೀಕ್ಷೆ ಇದೆ. 3.ಯಕ್ಷಗಾನ ಕಲಾವಿದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರ ಕ್ಷಮೆ ಮಾತ್ರವಲ್ಲ, ಈ ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಅವರನ್ನು ಆ ಸ್ಥಾನದಿಂದಲೇ ಕಿತ್ತೆಸೆಯಬೇಕು. ಕರಾವಳಿ ಕರ್ನಾಟಕದ ಗಂಡು ಕಲೆಯಾದ ಯಕ್ಷಗಾನವು ಇಲ್ಲಿನ ಜನರ ಭಕ್ತಿ ಭಾವದಿಂದ ಕೂಡಿದ ಸಂಸ್ಕೃತಿಯ ಭಾಗವಾಗಿದೆ. ಯಕ್ಷಗಾನ ಕಲಾವಿದರನ್ನು ಗೌರವಯುತವಾಗಿ ಕಾಣುವ ಸಮಾಜ ನಮ್ಮದು. ಅಂತಹ ಪರಂಪರೆಗೆ ಎಡಪಂಥೀಯ ಬುದ್ದಿಜೀವಿಗಳು ಅವಮಾನ ಮಾಡುವ ಮೂಲಕ ಇಡೀ ಹಿಂದೂ ಸಮಾಜಕ್ಕೆ ನೋವಾಗಿದೆ. ಸದಾ ಕಾಲ ಹಿಂದೂ ಧರ್ಮದ ವಿರುದ್ಧ ದ್ವೇಷ ಕಾರುವವರನ್ನೇ ಹುಡುಕಿ ಪ್ರಮುಖ ಸ್ಥಾನದಲ್ಲಿ ಕೂರಿಸುವ ಕಾಂಗ್ರೆಸ್ಸಿನ ಹೀನ ಚಾಳಿ ಇನ್ನಾದರೂ ಬದಲಾಗಬೇಕು. 4.ನಗರದ ಕದ್ರಿ ಪಾರ್ಕ್ ರಸ್ತೆಯಲ್ಲಿ ಜನವರಿಯಿಂದ ವಾಹನಗಳಿಗೆ ಟೋಲ್‌ ವಿಧಿಸಲು ಚಿಂತನೆ ನಡೆಸಿರುವುದು ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಹೊರೆಯಾಗಿ ಪರಿಣಮಿಸಲಿದ್ದು ಇದಕ್ಕೆ ನಮ್ಮ ಆಕ್ಷೇಪವಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಇಲ್ಲಿನ ರಸ್ತೆಯ ನಿರ್ವಹಣೆಯ ಜವಾಬ್ದಾರಿಯನ್ನು ಪಾಲಿಕೆಗೆ ವಹಿಸಲಾಗಿತ್ತು. ಇದೀಗ ಪಾಲಿಕೆಯಲ್ಲಿ ಬಿಜೆಪಿ ಆಡಳಿತದ ಅವಧಿ ಅಂತ್ಯವಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ಮೂಲಕ ಆಡಳಿತ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕದ್ರಿ ಪಾರ್ಕ್ ರಸ್ತೆಗೆ ಟೋಲ್‌ ಕಡ್ಡಾಯ ಮಾಡಲಾಗುತ್ತಿದೆ.ಈಗಾಗಲೇ ರಾಜ್ಯದಲ್ಲಿ ಜನಸಾಮಾನ್ಯರು ಬೆಲೆ ಏರಿಕೆ ಯಿಂದ ತತ್ತರಿಸಿ ಹೋಗಿದ್ದಾರೆ. ಇದೀಗ ಈ ವ್ಯವಸ್ಥೆಯೂ ಸಹ ಜಾರಿಗೆ ಬಂದರೆ ಇಲ್ಲಿನ ಜನರು ರೊಚ್ಚಿಗೇಳುವುದು ಗ್ಯಾರಂಟಿ. 5.ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಕದ್ರಿ ಪಾರ್ಕ್ ಬಳಿಯ ಗೂಡಂಗಡಿಗಳಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಇದೀಗ ಕಾಂಗ್ರೆಸ್ ನೇತೃತ್ವದ ಪಾಲಿಕೆಯು ಇಲ್ಲಿನ ದುಡಿಯುವ ವರ್ಗದ ಜನತೆಗೆ ನಾವು ಯಾವುದೇ ತೊಂದರೆ ಮಾಡುವುದಿಲ್ಲ ಎನ್ನುತ್ತಲೇ, ಪರ್ಯಾಯ ವ್ಯವಸ್ಥೆ ಕೂಡಾ ಮಾಡದೇ, ಏಕಾಏಕಿ ಗೂಡಂಗಡಿಗಳನ್ನು ತೆರವುಗೊಳಿಸಿದ್ದು ದುಡಿಯುವ ವರ್ಗದ ಮೇಲಿನ ಪ್ರಹಾರವಾಗಿದ್ದು ಖಂಡನೀಯವಾಗಿದೆ. 6.ನಗರದ ಜೈಲ್ ಜಾಮರ್ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರೊಂದಿಗೆ ಪ್ರತಿಭಟನೆ ನಡೆಸಿ ಆಯ್ತು, ಸಚಿವರ ಗಮನಕ್ಕೆ ತಂದೂ ಆಯ್ತು, ಕೊನೆಗೆ ಅನಿವಾರ್ಯವಾಗಿ ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲಾಯಿತು. ಆದರೂ ಇಲ್ಲಿನ ಜನರ ಸಮಸ್ಯೆಗೆ ಮುಕ್ತಿ ಸಿಕ್ಕಿರಲಿಲ್ಲ. ಇದೀಗ ಇಲ್ಲಿನ ವಕೀಲರ ಮೂಲಕ ಸ್ವತಃ ರಾಜ್ಯ ಹೈಕೋರ್ಟ್ ಮಧ್ಯ ಪ್ರವೇಶಿಸಿದ್ದು, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶ ನೀಡಿದೆ. ಇನ್ನಾದರೂ ಈ ದಪ್ಪ ಚರ್ಮದ ಸರ್ಕಾರ ಎಚ್ಚೆತ್ತುಕೊಳ್ಳಲಿ. 7.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ–ಖಾತಾಕ್ಕಾಗಿ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆ ಮುಂದುವರಿದಿದ್ದು ಇನ್ನೂ ಸಹ ಅದನ್ನು ಸರಿಪಡಿಸುವ ಗೋಜಿಗೆ ಹೋಗದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಖಂಡನೀಯ. ಮೊನ್ನೆಯವರೆಗೆ ಇದ್ದ ಬದ್ದ ಅಧಿಕಾರಿಗಳನ್ನೆಲ್ಲಾ ಅವೈಜ್ಞಾನಿಕ ಸಮೀಕ್ಷೆಗೆ ನಿಯೋಜಿಸಿಕೊಂಡ ಪರಿಣಾಮ ಎಷ್ಟೇ ತುರ್ತು ಪರಿಸ್ಥಿತಿಯಿದ್ದರೂ ಸಾರ್ವಜನಿಕರಿಗೆ ಇ-ಖಾತಾ ಲಭಿಸಿರಲಿಲ್ಲ. ಇದೀಗ ಸಮೀಕ್ಷೆ ಮುಗಿದು ಅಧಿಕಾರಿಗಳು ಬಂದಿದ್ದಾರೆ. ಆದರೆ ಸರ್ವರ್ ಇಲ್ಲ. ಹೀಗಾದರೆ ಸಾರ್ವಜನಿಕರ ತಾಳ್ಮೆಯ ಕಟ್ಟೆಯೊಡೆಯುತ್ತದೆ. ಕಳೆದ ಎರಡು ವರ್ಷಗಳಿಂದಲೂ ಇರುವ ಈ ಸಮಸ್ಯೆಯ ಬಗ್ಗೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದೇನೆ, ಸಂಬಂಧಪಟ್ಟ ಸಚಿವರಿಗೂ ಮನವಿ ಮಾಡಿದ್ದೇನೆ. ಆದರೂ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ನಾಗರಿಕರಿಗೆ ತೊಂದರೆ ತಪ್ಪಿಲ್ಲ. 8.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಅನೇಕ ಪ್ರಕರಣಗಳು ನಡೆದಿದೆ. ಆದರೂ ಆಳುವ ಸರ್ಕಾರ ದುರಸ್ಥಿಗೆ ಅನುದಾನ ನೀಡದೇ ಕಣ್ಣು ಮುಚ್ಚಿ ಕೂತಿದೆ. ನಗರದಲ್ಲಿ ಕಸದ ಸಮಸ್ಯೆಯಂತೂ ಹೇಳತೀರದಾಗಿದ್ದು ಗಾಂಧಿನಗರದ ಶಾಲೆಯ ಹತ್ತಿರ, ಮರೋಳಿಯ ಬಸ್ ನಿಲ್ದಾಣ, ಹೀಗೆ ಅನೇಕ ಕಡೆಗಳಿಂದ ದೂರುಗಳು ಬರುತ್ತಿವೆ. ಒಂದು ಕಾಲದಲ್ಲಿ ಇಡೀ ದೇಶಕ್ಕೆ ಸ್ವಚ್ಛತೆಗೆ ಬ್ರಾಂಡ್ ಆಗಿದ್ದ ಮಂಗಳೂರಿನಲ್ಲೇ ಇಂದು ರಸ್ತೆಗಳ ಎಲ್ಲೆಡೆ ಕಸ ಬಿದ್ದಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದರೂ ಅದನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. 9.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಭಿವೃದ್ಧಿ ವಿಷಯಗಳು ಪಾತಾಳಕ್ಕಿಳಿದಿದ್ದರೂ, ಬೆಲೆ ಏರಿಕೆ, ಭ್ರಷ್ಟಾಚಾರಗಳು ಮಾತ್ರ ನಿರಂತರವಾಗಿ ಎಗ್ಗಿಲ್ಲದೇ ನಡೆಯುತ್ತಿದೆ. ಮಂಗಳೂರು ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಅನುದಾನ, ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಸೇರಿದಂತೆ ಯಾವುದೇ ಅನುದಾನಗಳು ಬರುತ್ತಿಲ್ಲ. ಹೀಗಾದರೆ ಕ್ಷೇತ್ರದಲ್ಲಿ ಆಗಬೇಕಿರುವ ತುರ್ತು ಕಾಮಗಾರಿಗಳು, ಅಭಿವೃದ್ಧಿ ಕಾರ್ಯಗಳು ನಡೆಯುವುದಾದರೂ ಹೇಗೆ?ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದಲ್ಲಿ ವೈಫಲ್ಯ ಅನುಭವಿಸಿದ್ದು ಮಾತ್ರವಲ್ಲದೇ ನಮ್ಮ ಮಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿರುವುದು ಅಕ್ಷಮ್ಯವಾಗಿದೆ. ಮಂತ್ರಿಗಳು ಜಿಲ್ಲೆಗೆ ಬಂದಾಗ ಕಾಟಾಚಾರಕ್ಕೆ ಕೋಟಿ ಕೋಟಿ ರೂ. ಗಳನ್ನು ಘೋಷಣೆ ಮಾಡಿ ಹೋಗುತ್ತಾರೆ. ಆ ನಂತರ ಅದು ಕಾರ್ಯರೂಪಕ್ಕೆ ಬರುವುದೇ ಇಲ್ಲ. ಕೇವಲ ಪತ್ರಿಕಾ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿರುವ ಸುಳ್ಳು ಘೋಷಣೆಗಳು, ಸುಳ್ಳು ಭರವಸೆಗಳು ನಮ್ಮ ಕ್ಷೇತ್ರಕ್ಕೆ ಜಿಲ್ಲೆಗೆ ಅಗತ್ಯವಿಲ್ಲ. ಪತ್ರಿಕಾಗೋಷ್ಠಿಯಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಸಂಯೋಜನೆಯಲ್ಲಿ ನಡೆದ ಸ್ವಚ್ಚ ಭಾರತ್ ಅಭಿಯಾನಕ್ಕೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಜೈ ಶಂಕರ್ ಉದ್ಘಾಟಿಸಿ ಮಾತನಾಡಿದರು. ಸ್ವಚ್ಚತೆ ಪ್ರತೀ ನಾಗರಿಕನ ಕರ್ತವ್ಯ : ಜೈ ಶಂಕರ್

ಮೂಲ್ಕಿ: ಸ್ವಚ್ಚತೆ ಪ್ರತೀ ನಾಗರಿಕನ ಕರ್ತವ್ಯವಾಗಿದೆ. ಪರಿಸರವನ್ನು ಸ್ವಚ್ಚವಾಗಿಟ್ಟಲ್ಲಿ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು, ಪ್ಲಾಸ್ಟಿಕ್ ವಸ್ತುಗಳನ್ನು ದೂರಮಾಡಿಕೊಂಡು ಪರಿಸರ ಸ್ನೇಹಿಯಾಗಿ ಬಾಳೋಣ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಜೈ ಶಂಕರ್ ಹೇಳಿದರು. ಅವರು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಸಂಯೋಜನೆಯಲ್ಲಿ ನಡೆದ ಸ್ವಚ್ಚ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾ ಸಂಜೀವಿನಿ ಆಸ್ಪತ್ರೆಯಿಂದ ಕಟೀಲು ದೇವಸ್ಥಾನದವರೆಗೆ ಕಟೀಲು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕಟೀಲು ಬಸ್ ನಿಲ್ದಾಣದಲ್ಲಿ ಬೀದಿ ನಾಟಕ, ಕಿನ್ನಿಗೋಳಿ ಸಂತೆ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮತ್ತು ಉಚಿತ ಬಟ್ಟೆಯ ಕೈಚೀಲಗಳನ್ನು ವಿತರಿಸಲಾಯಿತು.ಆರೋಗ್ಯಾಧಿಕಾರಿ ಬ್ರಹ್ಮಾನಂದ, ಕಂದಾಯ ನಿರೀಕ್ಷಕ ರಾಘವೇಂದ್ರ, ಇಂಜಿನಿಯರಿಂಗ್ ವಿಭಾಗದ ಪವನ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ, ಪ್ರಮುಖರಾದ ಈಶ್ವರ್ ಕಟೀಲ್, ಪ್ರಕಾಶ್ ಆಚಾರ್ಯ, ಪ್ರೇಮ್‌ರಾಜ್ ಶೆಟ್ಟಿ, ಕಾರ್ಯಕ್ರಮದ ಸಹ ಸಂಯೋಜನೆಯ ಮೂಲ್ಕಿ ಸುಧಾಮ ಫೌಂಡೇಶನ್‌ನ ಶೈಲೇಶ್ ಕುಮಾರ್, ನವೀನ್ ರಾಜ್, ವೀರಣ್ಣ, ರಮೇಶ್, ಶಿಕ್ಷಣ ಸಂಸ್ಥೆಯ ಪ್ರಮುಖರು, ಮತ್ತಿತರರು ಇದ್ದರು.

ಪ್ರಾದೇಶಿಕ ವಾರ್ತೆಗಳು

ಸಹಕಾರ ರತ್ನ ಡಾ| ಅಗರಿ ನವೀನ್ ಭಂಡಾರಿಯವರಿಗೆ ‘ಪ್ರೈಡ್ ಆಫ್ ಕರ್ನಾಟಕ’ ಅವಾರ್ಡ್

ಭಾರತೀಯ ವ್ಯಾಪಾರ ನಿಯತಕಾಲಿಕದ ಐಕಾನ್‌ಗಳು ವತಿಯಿಂದ ೩೭ ನೇ ಆವೃತ್ತಿಯ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ ೨೦೨೫ ಅನ್ನು ಅತ್ಯುತ್ತಮ ಸಾಮಾಜಿಕ ಸೇವೆಗಳಿಗಾಗಿ ಸಹಕಾರ ರತ್ನ ಡಾ| ಅಗರಿ ನವೀನ್ ಭಂಡಾರಿಯವರಿಗೆ ಪ್ರಧಾನ ಮಾಡಲಾಯಿತು. ಅಗರಿ ನವೀನ್ ಭಂಡಾರಿಯವರು ಆರ್‌ಬಿಐಯ ಉತ್ತರ ವಲಯದ ಮಾಜಿ ನಿರ್ದೇಶಕರಾಗಿದ್ದು, ಬೆಂಗಳೂರು ಸುಂದರ್ ರಾಮ್ ಶೆಟ್ಟಿ ನಗರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ವರದಿ: ಉಮಾಪ್ರಸಾದ್ ರೈ

ಪ್ರಾದೇಶಿಕ ವಾರ್ತೆಗಳು

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ರಂಗದ ಸಾಧಕ ಪುರಸ್ಕಾರ

ಮಂಗಳೂರು,ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕ, ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ರಂಗದ ಸಾಧಕ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ನಡೆಯಿತು..ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕೆ ಎಂ ಎಫ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಕಾಪು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿ ಕುಮಾರ್ ರೈ ಬಲ್ಯೊಟ್ಟು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಬಿಹಾರ ಚುನಾವಣೆ ಎನ್ ಡಿ ಎ ಮೈತ್ರಿಕೂಟಕ್ಕೆ ಪ್ರಚಂಡ ಗೆಲುವು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಸಂದ ಜಯ: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು, ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವೋಟ್ ಚೋರಿ ಸುಳ್ಳು ಆರೋಪಕ್ಕೆ ಬಿಹಾರ ರಾಜ್ಯದ ಜನತೆ ತಕ್ಕ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯವನ್ನು ಜನರು ನೆಚ್ಚಿಕೊಂಡಿದ್ದಾರೆ. ಹೀಗಾಗಿ ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಕ್ಕಿದೆ ಎಂದು ಹೇಳಿದರು.ದೇಶದಲ್ಲಿ ಪಕ್ಷ ಇನ್ನೂ ಬಲಿಷ್ಠ ವಾಗಿ ಸಂಘಟನೆ ಯಾಗಲಿದೆ ಎಂದು ಹೇಳಿದರು. ಈ ಚುನಾವಣಾ ಫಲಿತಾಂಶ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೂ ಧಕ್ಕೆ ತರಲಿದೆ ಎಂದು ಅಭಿಪ್ರಾಯ ಪಟ್ಟರು.

Scroll to Top