ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಮಾ.25 ರಂದು ಲಲಿತ ಮಂಟಪ ಕೃತಿ ಬಿಡುಗಡೆ

ಮಂಗಳೂರು: ಹಿರಿಯ ಲೇಖಕಿ, ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿಅವರು ಬರೆದ ಅಹರ್ನಿಶಿ ಪ್ರಕಾಶನ ಹೊರತಂದಿರುವ ‘ಲಲಿತ ಮಂಟಪ’ ಕೃತಿ ಬಿಡುಗಡೆ ಹಾಗೂ ಅದರ ವಿನೂತನ ರಂಗಪ್ರಯೋಗ ಕಾರ್ಯಕ್ರಮ ಮಾ.೨೫ರಂದು ಸಂಜೆ ೫ಕ್ಕೆ ನಗರದ ಹಂಪನಕಟ್ಟೆಯ ಸಪ್ನ ಬುಕ್ ಹೌಸ್‌ನಲ್ಲಿ ನಡೆಯಲಿದೆ.ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಕೆ. ಚಿನ್ನಪ್ಪ ಗೌಡ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಂದ ನೂತನ ಕೃತಿ ಆಧರಿಸಿದ ವಿನೂತನ ರಂಗಪ್ರಯೋಗ ‘ಗೆಜ್ಜೆ ಬರೆದ ಅಕ್ಷರ’ ಪ್ರಸ್ತುತಿಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಎಸ್‌ಡಿಎಂ ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಪದಗ್ರಹಣ

ಮಂಗಳೂರು : ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ 2026 –28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಹೈಕೋರ್ಟ್ ವಕೀಲ ಪಿ.ಪಿ.ಹೆಗ್ಡೆ ವಿದ್ಯಾರ್ಥಿ ವೇತನ ವಿತರಿಸಿದರು. ಸುಪ್ರೀಂ ಕೋರ್ಟ್ ವಕೀಲ ರೋಹಿತ್ ರಾವ್ ಪೂರ್ವ ವಿದ್ಯಾರ್ಥಿ ಸಂಘದ ಲಾಂಛನ ಅನಾವರಣಗೊಳಿಸಿದರು.ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ಅಧ್ಯಕ್ಷತೆ ವಹಿಸಿದ್ದರು. ಎಂಎಲ್‌ಸಿ ಐವನ್ ಡಿಸೋಜಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್. ವಿ., ಪೂರ್ವ ವಿದ್ಯಾರ್ಥಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಡಾ. ದೇವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಉಮೇಶ್ ಗಟ್ಟಿಜತೆ ಕಾರ್ಯದರ್ಶಿ ಜಯಶ್ರೀ ಹಟ್ಟಿಹಳ್ಳಿ ಸಂಚಾಲಕ ವಿನೋದ್ ಕುಮಾರ್, ಸಂಘದ ಸಂಯೋಜಕಿ ಡಾ.ಅನ್ನಪೂರ್ಣ ಶೇಟ್ ಉಪಸ್ಥಿತರಿದ್ದರು . ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್ ಸ್ವಾಗತಿಸಿ,ಸಂಚಾಲಕ ಅಶ್ವಿನ್ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಡಿವಿಜಿ ಆದರ್ಶದಲ್ಲಿ ಬೆಳೆದ ಪತ್ರಕರ್ತರ ಸಂಘ-ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಮಂಗಳೂರು: ಪ್ರಸಿದ್ಧ ಕವಿ ಡಿ.ವಿ.ಗುಂಡಪ್ಪ (ಡಿವಿಜಿ) ಅವರ ಮಂಕುತಿಮ್ಮನ ಕಗ್ಗದಲ್ಲಿ ಎಲ್ಲ ಧರ್ಮಗಳ ಸಾರ ಅಡಗಿದೆ. ಪತ್ರಕರ್ತರಾಗಿದ್ದ ಡಿವಿಜಿ ಅವರು 1932 ರಲ್ಲಿ ಸ್ಥಾಪಿಸಿದ ಮೈಸೂರು ರಾಜ್ಯ ಪತ್ರಕರ್ತರ ಸಂಘ ಬಳಿಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಸಂಸ್ಥಾಪಕ ಡಿವಿಜಿ ಅವರ ಆದರ್ಶ ಹಾಗೂ ಚಿಂತನೆಗಳಲ್ಲಿ ಬೆಳೆದು ಬಂದಿರುವ ಪತ್ರಕರ್ತರ ಸಂಘ ಹಂತಹಂತವಾಗಿ ಬೆಳದು ಈಗ 1೦ ಸಾವಿರ ಸದಸ್ಯರನ್ನು ಒಳಗೊಂಡಿರುವ ದೇಶದ ಬೃಹತ್ ಸಂಘಟನೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಡಿ.ವಿ.ಜಿ. ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ” ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಘಟಕಗಳ ಆಶ್ರಯಯದಲ್ಲಿ ಡಿ.ವಿ.ಜಿ. ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಸಂಘದ ಉಪಾಧ್ಯಕ್ಷರಾದ ವಿಲ್ಫ್ರೆಡ್ ಡಿಸೋಜಾ, ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಸುರೇಶ್. ಡಿ.ಪಳ್ಳಿ, ಸಿದ್ದಿಕ್ ನೀರಾಜೆ , ಸಮಿತಿ ಸದಸ್ಯರಾದ ದಿವಾಕರ ಪದ್ಮುಂಜ, ಭುವನೇಶ್ವರ.ಜಿ. ಹರೀಶ್ ಆದೂರು, ತಾಲೂಕು ಘಟಕಗಳ ಅಧ್ಯಕ್ಷರಾದ ತುಕಾರಾಮ, ನವೀನ್ ಸಾಲ್ಯಾನ್, ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಾಜಿ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್. ಬಿ.ಎನ್. ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ರಾಜೇಶ್. ಕೆ.ಪೂಜಾರಿ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರಿನ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮಂಗಳೂರು, ಡಿಸೆಂಬರ್ 18, 2025 – ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ ಉತ್ಕೃಷ್ಟ ಕೃತಿಗಳನ್ನು ಆಯ್ದು ಈ ಪುರಸ್ಕಾರ ನೀಡಲಾಗುತ್ತದೆ. ಕೊಂಕಣಿ ಭಾಷೆಯು 1992 ರಿಂದ ಅನುಸೂಚಿತ ಭಾಷೆಯಾಗಿದ್ದು, ಗೋವಾ, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಗುಜರಾತ್ ಐದು ರಾಜ್ಯಗಳಲ್ಲಿ ಪ್ರಚಲಿತವಾಗಿರುವ ಕೊಂಕಣಿ ಭಾಷೆಗೆ 1975 ರಲ್ಲಿ ಸಾಹಿತ್ಯ ಅಕಾಡೆಮಿಯಿಂದ ಮಾನ್ಯತೆ ದೊರಕಿತ್ತು. 1977 ರಿಂದ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷೆಯ ಕೃತಿಗಳಿಗೂ ಪ್ರಶಸ್ತಿ ನೀಡುತ್ತಾ ಬಂದಿದ್ದು, ಈ ಹಿಂದೆ ಮಂಗಳೂರಿನ ಚಾ. ಫ್ರಾ. ದೆಕೊಸ್ತಾ (1992) ಮತ್ತು ಮೆಲ್ವಿನ್ ರೊಡ್ರಿಗಸ್(2011) – ಕವನ ಸಂಕಲನಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದರೆ, 2016 ರಲ್ಲಿ ಎಡ್ವಿನ್ ಜೆ.ಎಫ್.ಡಿ. ಸೊಜಾ ಕಾದಂಬರಿಗಾಗಿ – ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು. ಎಚ್. ಎಂ. ಪೆರ್ನಾಲ್ ಅವರು ಈ ಪರಂಪರೆಯನ್ನು ಮುಂದುವರೆಸುತ್ತಿರುವ ಕರ್ನಾಟಕದ ನಾಲ್ಕನೇ ಕೊಂಕಣಿ ಸಾಹಿತಿಯಾಗಿದ್ದಾರೆ. ಪೆರ್ನಾಲ್ ಅವರ ಪ್ರಸ್ತುತ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ ಕೃತಿಯು ಸಾಹಿತ್ಯ ವಿಮರ್ಶೆ ವಿಭಾಗದಲ್ಲಿ ಪ್ರಶಸ್ತಿ ಪಡೆದ ಮೊದಲ ಕೊಂಕಣಿ ಕೃತಿ ಎಂಬ ಐತಿಹಾಸಿಕ ಮೈಲುಗಲ್ಲನ್ನು ಸೃಷ್ಟಿಸಿದೆ. ಈ ಕೃತಿಗೆ ಮೊದಲು 2021 ರಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಮತ್ತು 2023 ರಲ್ಲಿ ಗೋವಾ ಕೊಂಕಣಿ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಲಭಿಸಿತ್ತು. ಈ ಪುಸ್ತಕಕ್ಕೆ ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ್ ಮೌಜೋ ಅವರ ವಿಸ್ತೃತ ಮುನ್ನುಡಿ ಬರೆದಿದ್ದು, ಮಂಗಳೂರಿನ ಕವಿತಾ ಪಬ್ಲಿಕೇಷನ್ಸ್ ಈ ಪುಸ್ತಕವನ್ನು ಪ್ರಕಟಿಸಿದ್ದಾರೆ. ಉಡುಪಿ ಜಿಲ್ಲೆಯ ಪೆರ್ನಾಲ್ ನಲ್ಲಿ ಹುಟ್ಟಿ, ಶಿರ್ವದ ಹಿಂದೂ ಜೂನಿಯರ್ ಕಾಲೇಜು ಮತ್ತು ಎಂ.ಎಸ್.ಆರ್.ಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ, ಮುಂಬಯಿಯಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿರುವ ಹೆನ್ರಿ ಮೆಂಡೋನ್ಸಾ ವೃತ್ತಿಯಲ್ಲಿ ಕಮರ್ಶಿಯಲ್ ಎಕಾಂವ್ಟೆಂಟ್. ಕನ್ನಡದಲ್ಲಿ – ತರಂಗ, ಸಂಕ್ರಮಣ,ಶೂದ್ರ ಮುಂತಾದ ಪತ್ರಿಕೆಗಳ ಮೂಲಕ ಬರವಣಿಗೆ ಆರಂಭಿಸಿದ ಅವರು 1980 ರ ದಶಕದ ಆರಂಭದಲ್ಲಿ ಯುವಕ್ ಮಾಸಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಕೊಂಕಣಿಗೆ ಪಾದಾರ್ಪಣೆ ಮಾಡಿ ಪ್ರಸ್ತುತ – ಕಥೆಗಾರ, ಕವಿ, ವಿಮರ್ಶಕ, ಸಂಪಾದಕ, ಪ್ರಕಾಶಕರಾಗಿ ತಮ್ಮದೇ ಛಾಪು ಮೂಡಿಸಿರುತ್ತಾರೆ. 2011 ರಲ್ಲಿ ಅವರು ಸ್ಥಾಪಿಸಿದ ಕಿಟಾಳ್ ಸಾಹಿತ್ಯಿಕ ಅಂತರ್ಜಾಲ ಪತ್ರಿಕೆ ಹಿರಿ – ಕಿರಿಯ ಲೇಖಕರನ್ನೊಳಗೊಂಡು ಸತತ ಹದಿನಾಲ್ಕನೇ ವರ್ಷದಲ್ಲಿ ನಿರಂತರವಾಗಿ ಪ್ರಕಟವಾಗುತ್ತಿದ್ದು, ಡಿಜಿಟಲ್ ಕೊಂಕಣಿ ಸಾಹಿತ್ಯ ನಿರ್ಮಿತಿಯಲ್ಲಿ ಮುಂಚೂಣಿಯಲ್ಲಿದೆ. 2013 ರಲ್ಲಿ ಪಾಕ್ಷಿಕವಾಗಿ ಆರಂಭಿಸಿದ ಆರ್ಸೊ ಸಾಹಿತ್ಯ ಪತ್ರಿಕೆ ಪ್ರಸ್ತುತ ಕವಿ ವಿಲ್ಸನ್ ಕಟೀಲ್ ಸಂಪಾದಕತ್ವದಲ್ಲಿ ಮಾಸಪತ್ರಿಕೆಯಾಗಿ ಹನ್ನೆರಡನೇ ವರ್ಷದಲ್ಲಿ ಪ್ರಕಟವಾಗುತ್ತಿದ್ದು, ಆರ್ಸೊ ವಾರ್ಷಿಕ ವಿಶೇಷಾಂಕಗಳಿಗೆ ಸಾಹಿತ್ಯ ವಿಶ್ವದಲ್ಲಿ ವಿಶೇಷ ಮಾನ್ಯತೆಯಿದೆ. ತಮ್ಮದೇ ಕಿಟಾಳ್ ಪ್ರಕಾಶನ ದ ಮೂಲಕ ಈ ವರೆಗೆ 15 ಕ್ಕೂ ಮಿಕ್ಕಿ ಮೌಲಿಕ ಸಾಹಿತ್ಯ ಕೃತಿಗಳನ್ನೂ ಪೆರ್ನಾಲ್ ಪ್ರಕಟಿಸಿದ್ದಾರೆ. ಈ ವರೆಗೆ ಪೆರ್ನಾಲ್ ಅವರ ನಾಲ್ಕು ಕವನ ಸಂಕಲನಗಳು — ಚಲ್ಯಾಂಕ್ ಚತ್ರಾಯ್ (1999), ಕಯ್ದ್ಯಾಚ್ಯೊ ಕವಿತಾ (2004), ಭಾಮುಣಾಂಚೆಂ ಚೆಡುಂ (2006) ಮತ್ತು ಜನೆಲ್ (2025), ಎರಡು ಕಥಾ ಸಂಕಲನಗಳು — ದೆವಾಕ್ ಸೊಡುಲ್ಲೊ ಪಾಡೊ(2002) ಮತ್ತು ಬೀಗ್ ಆನಿ ಬಿಗಾತ್ (2016) ಹಾಗೂ ಪ್ರಶಸ್ತಿ ವಿಜೇತ ಸಾಹಿತ್ಯ ವಿಮರ್ಶೆಯ ಕೃತಿ ಕೊಂಕಣಿ ಕಾವ್ಯೆಂ : ರುಪಾಂ ಆನಿ ರೂಪಕಾಂ (2021) ಪ್ರಕಟವಾಗಿವೆ. ಅವರ ಬೀಗ್ ಆನಿ ಬಿಗಾತ್‌ಕಥಾ ಸಂಕಲನಕ್ಕೆ ವಿಶ್ವ ಕೊಂಕಣಿ ಕೇಂದ್ರದ – ಖ್ಯಾತ ಉದ್ಯಮಿ ಟಿ. ವಿ. ಮೋಹನದಾಸ ಪೈ – ತಾಯಿಯ ಹೆಸರಿನಲ್ಲಿ ಕೊಡಮಾಡುವ ಶ್ರೀಮತಿ ವಿಮಲಾ ವಿ ಪೈ ಅತ್ಯುತ್ತಮ ಸಾಹಿತ್ಯ ಕೃತಿ ಪ್ರಶಸ್ತಿ (2017), ಕೊಂಕಣಿ ಕಾವ್ಯಕ್ಕೆ ನೀಡಿರುವ ಕೊಡುಗೆಗೆ , ಕವಿತಾ ಟ್ರಸ್ಟ್ ನೀಡುವ ಮಥಾಯಸ್ ಕುಟುಂಬ ದತ್ತಿ ಕಾವ್ಯ ಪ್ರಶಸ್ತಿ (2018), ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಕೊಂಕಣಿ ಕಾವ್ಯೆಂ : ರುಪಾಂ ಆನಿ ರೂಪಕಾಂ ಪುಸ್ತಕಕ್ಕೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ (2021), ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಕೊಂಕಣಿ ಸಾಹಿತ್ಯ ಗೌರವ ಪ್ರಶಸ್ತಿ (2022), ಕೊಂಕಣಿ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ (2023) ಮತ್ತು ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ ಪುಸ್ತಕಕ್ಕೆ ಗೋವಾ ಕೊಂಕಣಿ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ (2023) ಲಭಿಸಿರುತ್ತದೆ. 850 ಕ್ಕೂ ಹೆಚ್ಚು ಕವಿತೆಗಳು, 100 + ಕಥೆಗಳು ಮತ್ತು 2,000 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಪೆರ್ನಾಲ್ ಅವರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕೊಂಕಣಿ ಸಾಹಿತ್ಯವನ್ನು ಪೋಷಿಸುತ್ತಾ ಬಂದಿದ್ದು, 2012 ರಿಂದ ಉದಯೋನ್ಮುಖ ಬರಹಗಾರರನ್ನು ಗುರುತಿಸಿ ಪ್ರತೀ ವರ್ಷ ಅಬುದಾಬಿಯ ಉದ್ಯಮಿ, ದಾನಿ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರವನ್ನು ನೀಡುತ್ತಾ ಬಂದಿರುತ್ತಾರೆ. ಈ ಪ್ರಶಸ್ತಿಯು ಸನ್ಮಾನ ಪತ್ರ ಮತ್ತು ರು. 25,000/- ನಗದನ್ನು ಒಳಗೊಂಡಿರುತ್ತದೆ. ಪ್ರಸ್ತುತ ಮೈಕಲ್ ಡಿಸೋಜಾ ವಿಷನ್ ಕೊಂಕಣಿ ಪುಸ್ತಕ ಅನುದಾನ ಯೋಜನೆಯ ಪ್ರಧಾನ ಸಂಪಾದಕರಾಗಿದ್ದು, ಕೊಂಕಣಿ ಲೇಖಕ / ಲೇಖಕಿಯರಿಗೆ ತಮ್ಮ ಕೃತಿಯ ಮುದ್ರಣಕ್ಕಾಗಿ ಪುಸ್ತಕವೊಂದಕ್ಕೆ ರು. 40,000/- ವರೆಗೆ ಅನುದಾನ ನೀಡಲಾಗುತ್ತಿದೆ. ₹ 40 ಲಕ್ಷ ವೆಚ್ಚದ ಈ ಯೋಜನೆಯ ಸಂಪೂರ್ಣ ಖರ್ಚನ್ನು ಅನಿವಾಸಿ ಉದ್ಯಮಿ ಮತ್ತು ಕೊಂಕಣಿ ಭಾಷಾಭಿಮಾನಿ, ಮಹಾದಾನಿ ಶ್ರೀ ಮೈಕಲ್ ಡಿಸೋಜಾ ಪ್ರಾಯೋಜಿಸಿದ್ದು – ವಿಶ್ವ ಕೊಂಕಣಿ ಕೇಂದ್ರದ ಉಸ್ತುವಾರಿಯಲ್ಲಿ 5 ವರ್ಷಗಳ ಅವಧಿಗೆ 100 ಪುಸ್ತಕ ಪ್ರಕಟಣೆಯ ಗುರಿಯನ್ನು ಈ ಯೋಜನೆ ಹೊಂದಿರುತ್ತದೆ. ಕೊಂಕಣಿ ಸಾಹಿತ್ಯ ಸಮುದಾಯದಲ್ಲಿ ಸಮರ್ಪಿತ ನಾಯಕರಾಗಿರುವ ಪೆರ್ನಾಲ್ ಅವರು 2023 ರಲ್ಲಿ ಮಂಗಳೂರಿನಲ್ಲಿ ನಡೆದ ಅಖಿಲ ಭಾರತ ರಜತ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅಖಿಲ ಭಾರತ ಕೊಂಕಣಿ ಪರಿಷತ್‌ನಲ್ಲಿ ಕೋಶಾಧಿಕಾರಿಯಾಗಿದ್ದಾರೆ. ಅವರು ಕೊಂಕಣಿ ಲೇಖಕರ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು ಪ್ರಸ್ತುತ ಸಾಹಿತ್ಯ ಅಕಾಡೆಮಿಯ ಕೊಂಕಣಿ ಭಾಷಾ ಸಲಹಾ ಮಂಡಳಿಯ ಸದಸ್ಯರಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ:

ಸಮಾಜಮುಖಿ ಕಾರ್ಯಕ್ರಮಗಳಿಗೆ ಸ್ಪಂದಿಸುವ, ಮಾನಸಿಕ ಅಸ್ವಸ್ಥರಿಗೆ ಉಭಯಹಸ್ತ ನೀಡಿ ಅಶ್ರಯದಾತರಾಗಿ ಹೆಸರುವಾಸಿಯಾಗಿರುವ “ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆ ಮಂಜೆಶ್ವರ” ಇವರ 17 ವರುಷಗಳ ಸೇವೆಯ ತನ್ನ ವಿವಿಧ ಕಾರ್ಯ ಯೋಜನೆಗಳ ಅನುಷ್ಟಾನಕ್ಕೆ ಸಹಾಯರ್ಥವಾಗಿ ಮಂಗಳೂರಿನ ಪ್ರಖ್ಯಾತ ಸಂಗೀತಗಾರ, ಯುವ ಪ್ರತಿಭೆಯಾಗಿರುವ ಕೆವಿನ್ ಮಿಸ್ಕಿತ್ ಇವರ 54ನೇ ಕೊಂಕಣಿ ಸಂಗೀತ ಸಂಜೆಯನ್ನು ಅಯೋಜಿಸಿದೆ.ಇದೇ ಜೂನ್ 21ನೇ ಭಾನುವಾರ ಸಂಜೆ 6.00 ಘಂಟೆಗೆ ಸರಿಯಾಗಿ ಮಂಗಳೂರಿನ ಟೌನ್ ಹಾಲ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನೆರವೇರಿಸಲಾಗುವುದು. ಈ ಪ್ರಯುಕ್ತ ಪ್ರಚಾರ ಘೊಷಣೆಯ ಪೊಸ್ಟರ್ ಬಿಡುಗಡೆ ಕಾರ್ಯಕ್ರಮ ಸ್ನೇಹಾಲಯ ಸಂಸ್ಥೆಯ ಮಂಗಳೂರಿನ ಪ್ರಧಾನ ಕಛೇರಿಯಲ್ಲಿ ನೆರವೇರಿಸಲಾಯಿತು. ಸಂಸ್ಥೆಯ ಸ್ಥಾಪಕರೂ, ಅಧ್ಯಕ್ಷರು ಆಗಿರುವ ಜೋಸೆಫ್ ಕ್ರಾಸ್ತಾ ಪೊಸ್ಟರ್ ಬಿಡುಗಡೆ ಮಾಡಿ ಸಾರ್ವಜನಿಕರ ಸಂಪೂರ್ಣ ಸಹಕಾರ ಕೋರಿದರು. ಸಭಾರಂಭದಲ್ಲಿ ಸ್ನೇಹಾಲಯದ ಹಲವು ಅಭಿಮಾನಿಗಳ ಉಪಸ್ಥಿಯಲ್ಲಿ ಶ್ರೀಯುತ ಶೆಲ್ಡಾನ್ ಕ್ರಾಸ್ತ, ಸಂಸ್ಥೆಯ ಕಾರ್ಯದರ್ಶಿಗಳಾದ ಒಲಿವಿಯಾ ಕ್ರಾಸ್ತಾ, ಸಂಗೀತಗಾರ ಕೆವಿನ್ ಮಿಸ್ಕಿತ್, ಸಲಹೆಗಾರರಾದ ಜಿಯೋ ಡಿ ಸಿಲ್ವ, ಅಗ್ರಾರ್, ಜಾಕ್ಸನ್ ಕಿನ್ನಿಗೋಳಿ ಹಾಗು ಇತರರು ಹಾಜರಿದ್ದರು.

ಪ್ರಾದೇಶಿಕ ವಾರ್ತೆಗಳು

ಯಕ್ಷಧ್ರುವ ಯಕ್ಷಶಿಕ್ಷಣ. ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ. ಯಕ್ಷ ಶಿಕ್ಷಣ  ಫೌಂಡೇಶನ್ ನ ಅಭಿವೃದ್ದಾತ್ಮಕ ಯೋಜನೆ : ಪಟ್ಲ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ‌ ಸಮಾಲೋಚನಾ‌ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ  ನಡೆಯಿತು.ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿ ಯಕ್ಷಧ್ರುವ ಯಕ್ಷಶಿಕ್ಷಣವು ಪಟ್ಲ ಫೌಂಡೇಶನ್ ನ ಅಭಿವೃದ್ಧಾತ್ಮಕವಾದ ಯೋಜನೆಯಾಗಿದ್ದು ಭವಿತವ್ಯದ ಸುಸಂಸ್ಕೃತ ಪ್ರೇಕ್ಷಕರು ಮತ್ತು ಉತ್ತಮ ಕಲಾವಿದರನ್ನು ತಯಾರುಗೊಳಿಸುವ ನಿಭಾವಣೆಯನ್ನು ಹೊತ್ತ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಯಕ್ಷಗಾನ ಶಿಕ್ಷಕರು ಕರ್ತವ್ಯವನ್ನು ನಿರ್ವಹಿಸುವಲ್ಲಿ ಸಫಲತೆಯನ್ನು ಸಾಧಿಸಬೇಕು ಎಂದರು. ಈ‌ ಸಂದರ್ಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳರು ಕಳೆದ ಶೈಕ್ಷಣಿಕ ವರ್ಷದ ತರಗತಿಯ ಅವಲೋಕನ ಮಾಡಿದರು. ಈ ವೇಳೆ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನೀತಿಸಂಹಿತೆಯನ್ನು ಪ್ರಸ್ತಾಪಿಸಿ ಚರ್ಚಿಸಲಾಯಿತು.ಪ್ರಸಕ್ತ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ತರಗತಿ, ಯಕ್ಷಗಾನ ಶಿಕ್ಷಕರ ಕಾರ್ಯಗಾರ, ಶಾಲಾ ಸಮಿತಿಯ ಸಭೆ ಸಹಿತ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಕೇಂದ್ರೀಯ ಸಮಿತಿಯ ಕಾರ್ಯದರ್ಶಿಗಳಾದ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ CA ಸುದೇಶ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಸಹಿತ ವಿವಿಧ ಪದಾಧಿಕಾರಿಗಳು, ಯಕ್ಷಗಾನ ಶಿಕ್ಷಕರು ಉಪಸ್ಥಿತರಿದ್ದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮಾ.21ರಂದು ಮಂಗಳೂರಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ-ಡಾ.ಎಂ.ಮೋಹನ ಆಳ್ವ

ಮಂಗಳೂರು : ಆಳ್ವಾಸ್ ನುಡಿಸಿರಿ- ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ.21ರಂದು ಸಾಯಂಕಾಲ 6ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ. ನಮ್ಮ ಸಾಂಸ್ಕೃತಿಕ, ಜನಪದ ಹಾಗೂ ಶಾಸ್ತ್ರೀಯ ಕಲೆಗಳನ್ನುಜನಮಾನಸಕ್ಕೆ ತಲುಪಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಸಲಾಗಿದ್ದು, ಅಪಾರ ಜನಮನ್ನಣೆ ಗಳಿಸಿದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 3 ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣದ ಜತೆಗೆ ನುಡಿಸಿರಿ, ವಿರಾಸತ್‌ನಂತಹ ಕಾರ್ಯಕ್ರಮಗಳ ಮೂಲಕ ನಮ್ಮ ನಾಡು,ನುಡಿ,ಕ್ರೀಡೆ ಹಾಗೂ ಕಲೆಗಳಪೋಷಣೆಗೆ ಶ್ರಮಿಸುತ್ತಿದೆ. ನಮ್ಮ ಶಾಸ್ತ್ರೀಯ, ಜನಪದ ಕಲೆಗಳು ಮರೆಯಾಗದಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ಜತೆಗೆ ಸಾಂಸ್ಕೃತಿಕ ಶಿಕ್ಷಣ ನೀಡುವುದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಉದ್ದೇಶವಾಗಿದೆ. ಮಂಗಳೂರಿನಲ್ಲಿ ನಡೆಯಲಿರುವ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಸಮಾನ ಮನಸ್ಕರು ಕೈಜೋಡಿಸಬೇಕು ಎಂದು ಡಾ.ಎಂ.ಮೋಹನ್ ಆಳ್ವ ವಿನಂತಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್ ಮಾತನಾಡಿ ತಮ್ಮ ಹಿರಿಯರ ಆದರ್ಶದಲ್ಲಿ ನಡೆದು ಬಂದ ಡಾ.ಎಂ. ಮೋಹನ್ ಆಳ್ವರು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಎಂದು ಮರೆತವರಲ್ಲ. ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಂಡು ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿರುವಡಾ.ಆಳ್ವ ಅವರು ಮೂಡುಬಿದಿರೆಯನ್ನು ಸಾಂಸ್ಕೃತಿಕ ಕೇಂದ್ರವಾಗಿಸಿ ಹೊಸ ಕ್ರಾಂತಿ ಮಾಡಿದ್ದಾರೆ ಎಂದರು.ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಪ್ರಮುಖರಾದ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ, ಪದ್ಮರಾಜ್ ಆರ್. ಪೂಜಾರಿ, ಡಾ.ಆಶಾ ಜ್ಯೋತಿ ರೈ, ಭಾಸ್ಕರ ರೈ ಕುಕ್ಕುವಳ್ಳಿ, ರತ್ನಾಕರ ಜೈನ್, ಲೀಲಾಕ್ಷ ಕರ್ಕೇರ, ಕದ್ರಿ ನವನೀತ ಶೆಟ್ಟಿ, ವಿದುಷಿ ರಾಜಶ್ರೀ ಉಳ್ಳಾಲ್, ಯುವಜನ ಕ್ರೀಡಾಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ರೈ ಕಲ್ಲಿಮಾರ್, ಖಜಾಂಚಿ ಶಶಿರಾಜ್ ರಾವ್ ಕಾವೂರು ಉಪಸ್ಥಿತರಿದ್ದರು. ಉಪನ್ಯಾಸಕ ಡಾ.ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಅಭಾಸಾಪ ದ.ಕ.ಜಿಲ್ಲಾ ಅದ್ಯಕ್ಷೆಯಾಗಿ ವೀಣಾ.ಟಿ.ಶೆಟ್ಟಿ ಆಯ್ಕೆ

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ದ.ಕ.ಜಿಲ್ಲಾ ಘಟಕದ ಅಧ್ಯಕ್ಷೆಯಾಗಿ ವೀಣಾ. ಟಿ .ಶೆಟ್ಟಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿಯಾಗಿ ಲತೇಶ ಬಾಕ್ರಬೈಲ್ , ಜತೆ ಕಾರ್ಯದರ್ಶಿಗಳಾಗಿ ಗೀತಾ ಲಕ್ಷ್ಮೀಶ, ಶ್ರೀಲಕ್ಷ್ಮೀ ಮಠದಮೂಲೆ, ಕೋಶಾಧಿಕಾರಿಯಾಗಿ ರತ್ನಾವತಿ ಬೈಕಾಡಿ.ಮಾಧ್ಯಮ ಪ್ರಮುಖರಾಗಿ ಚಂದ್ರಶೇಖರ ಕುಳವರ್ಮ,ಮಹಿಳಾ ಪ್ರಕಾರ ಪ್ರಮುಖರಾಗಿ ಸುಮಂಗಲ ರತ್ನಾಕರ , ಮಕ್ಕಳ ಪ್ರಕಾರ ಪ್ರಮುಖರಾಗಿ ರಮೇಶ ಮಯ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಿ.ಬಿ. ಹರೀಶ್ ರೈ , ಡಾ.ಸುರೇಶ ನೆಗಳಗುಳಿಪ್ರಕಾಶ ನಾರಾಯಣ ಚಾರ್ಮಾಡಿ , ರವೀಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಮಾಹೆಯ ಉಪ ಕುಲಪತಿಯಾಗಿ ಡಾ.ಶರತ್ ಕುಮಾರ್ ರಾವ್

ಮಣಿಪಾಲ-ಮಣಿಪಾಲ ಕೆಎಂಸಿ ಆಸ್ಪತ್ರೆಯ ಖ್ಯಾತ ಮತ್ತು ಯಶಸ್ವಿ ಮೂಳೆ ಶಸ್ತ್ರ ಚಿಕಿತ್ಸಕ, ಮೂಳೆ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಶರತ್ ಕುಮಾರ್ ರಾವ್ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಾಹೆಯ ಉಪ ಕುಲಪತಿಯಾಗಿ ನೇಮಕಗೊಂಡಿದ್ದಾರೆ. ಅವರಿಗೆ Mp mla’s news ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ. ಎನ್ ಅವರು ಶುಭ ಹಾರೈಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಸಾಲದ ಹೊರೆ ಹೆಚ್ಚಿಸಿದ ಬಜೆಟ್-ನಳಿನ್ ಕುಮಾರ್ ಕಟೀಲ್

ಮಂಗಳೂರು ‌: ಸಿದ್ದರಾಮಯ್ಯ ಅವರ ಈ ಹಿಂದಿನ‌ ಬಜೆಟ್‌ನಂತೆ ಈ ಬಜೆಟ್ ಕೂಡಾ ಕೇವಲ ಘೋಷಣೆಗೆ ಸೀಮಿತವಾದ ಹಾಗಿದೆ. ಬಜೆಟ್ ಗಾತ್ರ ಹಿಗ್ಗಿದೆ. ಜತೆಗೆ ಸಾಲದ ಹೊರೆಯೂ ಇಮ್ಮಡಿಯಾಗಿದೆ. ಅಬಕಾರಿ ಇಲಾಖೆ ಮೂಲಕ ಸರ್ಕಾರ ಹೆಚ್ಚಿನ ರಾಜಸ್ವ ನಿರೀಕ್ಷಿಸಿರುವುದು ರಾಜ್ಯದ ಜನತೆಯ ದುರಂತ.ಸಾಲದಲ್ಲಿ ಮುಳುಗಿರುವ ಈ ಸರ್ಕಾರ ಬಜೆಟ್ ನ ಶೇ. 25ರಷ್ಟು ಘೋಷಣೆಗಳನ್ನು ಕೂಡಾ ಕಾರ್ಯಗತ ಮಾಡುವುದು ಸಾಧ್ಯವಿಲ್ಲ.ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿರುವುದೇ ಬಜೆಟ್ ನ ದೊಡ್ಡ ಸಾಧನೆ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಪುತ್ತೂರು ಮೆಡಿಕಲ್ ಕಾಲೇಜ್ ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ನಿರಾಶಾದಾಯಕ ಬಜೆಟ್.-ನಳಿನ್ ಕುಮಾರ್ ಕಟೀಲುಮಾಜಿ ಸಂಸದರು, ದ.ಕ.

Scroll to Top