ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಆರ್ಯಭಟ ಇಂಟರ್‌ನ್ಯಾಷನಲ್ ಅವಾರ್ಡ್ ಗೆ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಆಯ್ಕೆ.

ಮಂಗಳೂರು: ಅಬುಧಾಬಿಯಲ್ಲಿರುವ ಪ್ರತಿಷ್ಠಿತ ಇಂಡಿಯಾ ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್‌ನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಇವರು ಪ್ರತಿಷ್ಠಿತ ‘ಆರ್ಯಭಟ ಇಂಟರ್‌ನ್ಯಾಷನಲ್ ಅವಾರ್ಡ್-2024’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.ಜಯರಾಮ ರೈಯವರು ಮಾಡುತ್ತಿರುವ ಸಮಾಜ ಸೇವೆ ಮತ್ತು ಸಾಂಸ್ಕೃತಿಕ, ಸಾಹಿತ್ಯಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ, ಆರ್ಯಭಟ ಕಲ್ಚರಲ್ ಆರ್ಗನೈಸೇಷನ್ ಬೆಂಗಳೂರು ಇವರು ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಜೂ. 23 ರಂದು ಬೆಂಗಳೂರು ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ಇಂಡಿಯಾ ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡ ಸಂಘಟನೆಯಾಗಿದೆ. ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಮಿತ್ರಂಪಾಡಿ ಜಯರಾಮ ರೈಯವರು ಮೇ 13ರಂದು ನಡೆದ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾಗಿದ್ದರು. ಪ್ರಸ್ತುತ ಅಬುಧಾಬಿಯಲ್ಲಿರುವ ಬಿನ್ ಫರ್ದನ್ ಸಂಸ್ಥೆಯ ಸಿಎಫ್‌ಓ ಆಗಿ ಯಶಸ್ವಿ ಉದ್ಯಮಿಯಾಗಿರುವ ಮಿತ್ರಂಪಾಡಿ ಜಯರಾಮ ರೈಯವರು ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ದಿ. ಮಿತ್ರಂಪಾಡಿ ಚೆನ್ನಪ್ಪ ರೈ ಮತ್ತು ಡಿಂಬ್ರಿಗುತ್ತು ಸರಸ್ವತಿ ರೈ ಅವರ ಪುತ್ರ.ಧಾರ್ಮಿಕ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಇವರು ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿಯನ್ನು ಮೂಡಿಸಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಅವರನ್ನೂ ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ನಡೆಸಲ್ಪಡುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಎಂಬ ಘೋಷ ವಾಕ್ಯದಲ್ಲಿ 22 ಗ್ರಾಮ ಪಂಚಾಯತ್ ವ್ಯಾಪ್ತಿಯ 32 ಗ್ರಾಮಗಳಲ್ಲಿ ಪ್ರತಿ ತಿಂಗಳು ನಡೆಯುವ ಸಾಹಿತ್ಯ ಸಂಭ್ರಮದ ಕಾರ್ಯಕ್ರಮದ ಮಹಾಪೋಷಕರಾಗಿದ್ದಾರೆಈ ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ‘ಕನ್ನಡದಲ್ಲೂ ಐಎಎಸ್ ಬರೆಯಿರಿ’ ಅಭಿಯಾನ, ಕವಿಗೋಷ್ಠಿ ಕಥಾಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಉಪನ್ಯಾಸ, ಸಾಧಕರಿಗೆ ಸನ್ಮಾನ ನಡೆಯುತ್ತಿದ್ದು, ಈಗಾಗಲೇ ಸುಮಾರು 5 ಸಾವಿರ ಪುಟಾಣಿ ಸಾಹಿತಿಗಳಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟ ಗೌರವ ಹಾಗೂ 50 ಸಾವಿರಕ್ಕೂ ಅಧಿಕ ಪ್ರೇಕ್ಷಕ ವರ್ಗ ವೀಕ್ಷಿಸಿ, ಆನಂದಿಸಿದ ಗೌರವ ಇವರಿಗೂ ಸಲ್ಲುತ್ತದೆ. ಕಳೆದ 25 ವರ್ಷಗಳಿಂದ ಅರಬ್ ರಾಷ್ಟ್ರದಲ್ಲೂ ಕನ್ನಡ ಸೇವೆ ಹಾಗೂ ಕನ್ನಡಿಗರ ಸೇವೆ ಮಾಡುತ್ತಿರುವ ಇವರು ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟಿನಲ್ಲಿ ಅನೇಕ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುವ ವಿಶ್ವಕನ್ನಡ ಸಮ್ಮೇಳನ, ವಿಶ್ವ ತುಳು ಸಮ್ಮೇಳನ, ಕವಿ ಸಮ್ಮೇಳನ, ನಾಟಕ ಯಕ್ಷಗಾನ, ಸಂಗೀತ ರಸಮಂಜರಿ, ಇನ್ನಿತರ ಸಾಮಾಜಿಕ ಚಟುವಟಿಕೆಗಳಿಗೆ ನಿರಂತರ ಬೆಂಬಲ, ಪ್ರೋತ್ಸಾಹ ನೀಡುತ್ತಿದ್ದಾರೆ.ಜಯರಾಮ ರೈಯವರು ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಇದೀಗ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರು ಇಂಡಿಯಾ ಸೋಷಿಯಲ್ ಸೆಂಟರ್ ಟೋಸ್ಟ್ ಮಾಸ್ಟರ್ ಇಂಟಕ್ ನ್ಯಾಷನಲ್ ಅಬಧಾಬಿ ಇದರ ಸ್ಥಾಪಕಾಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಸೃಜನಶೀಲ ಬರಹಗಳು ಶಾಶ್ವತ ದಾಖಲೆಯಾಗಲಿ-ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ

ಮಂಗಳೂರು : ಪತ್ರಕರ್ತರು ತಮ್ಮ ಸೃಜನಶೀಲ ಬರಹಗಳನ್ನು ಪತ್ರಿಕೆಗಳಲ್ಲಿ ಪ್ರಕಟಗೊಳಿಸುವುದಕ್ಕೆ ಮಾತ್ರ ಸೀಮಿತಗೊಳಿಸದೆ ಅವುಗಳ ಸಂಗ್ರಹವನ್ನು ಪುಸ್ತಕ ರೂಪದಲ್ಲಿ ಹೊರತಂದರೆ ಶಾಶ್ವತ ದಾಖಲೆಯಾಗಿ ಉಳಿಯುತ್ತದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ‘ ಇ-ಪೇಪರ್ ಇದರ ದ್ವಿತೀಯ ಸಂಚಿಕೆಯನ್ನು ಗುರುವಾರ ನಗರದ ಪತ್ರಿಕಾ ಭವನದಲ್ಲಿ ಅನಾವರಣಗೊಳಿಸಿ ಮಾತನಾಡಿದ ಅವರು ‘ ಪತ್ರಕರ್ತರ ಬರಹಗಳ ದಾಖಲೀಕರಣ ಯುವ ಬರಹಗಾರರಿಗೆ ಸ್ಪೂರ್ತಿಯ ಸೆಲೆಯಾಗಲು ಸಾಧ್ಯ ಎಂದರು.ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್‌ನ ಚಟುವಟಿಕೆಗಳನ್ನು ದಾಖಲಿಸುವ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ ಪತ್ರಿಕೆ ಒಂದು ಉತ್ತಮ ಪ್ರಯೋಗವಾಗಿದ್ದು , ಇದರಲ್ಲಿ ಪತ್ರಕರ್ತರಿಗೆ ಉಪಯುಕ್ತವಾಗುವ ಲೇಖನಗಳು ಕೂಡಾ ಪ್ರಕಟವಾಗಲಿ ಎಂದು ಅವರು ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿದ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ ಜನತೆಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಆಡಳಿತ ವ್ಯವಸ್ಥೆಯ ಗಮನ ಸೆಳೆಯುವ ಕಾರ್ಯವನ್ನು ಪತ್ರಿಕೆಗಳು ಮಾಡುತ್ತಿರುವುದು ನಾಡಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು. ಫೋಟೋ : ಪ್ರೆಸ್‌ಕ್ಲಬ್

ಪ್ರಾದೇಶಿಕ ವಾರ್ತೆಗಳು

“ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರಿಗೆ ಮತದಾನದ ಹಕ್ಕಿನಿಂದ ವಂಚನೆ”-ಭಾಸ್ಕರ್ ಶೆಟ್ಟಿ ಟಿ.

ಮಂಗಳೂರು: “ನೈರುತ್ಯ ಶಿಕ್ಷಕರ ಕ್ಷೇತ್ರಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅನೇಕ ಶಿಕ್ಷಕರು ಮತ ಹಾಕಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಲಾಗಿದೆ. ನವೀಕರಣದ ಹೆಸರಲ್ಲಿ ಶಿಕ್ಷಕರ ಗಮನಕ್ಕೆ ಬಾರದೆ ಮತದಾನದ ಹಕ್ಕಿಗೆ ಕತ್ತರಿ ಹಾಕಲಾಗಿದೆ. ಇದನ್ನು ಚುನಾವಣೆ ಆಯೋಗದ ತಪ್ಪು ಎಂದು ಹೇಳಲಾಗುವುದಿಲ್ಲ. ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರ ಇರುವುದು ಸ್ಪಷ್ಟ. ಅನೇಕ ಮಂದಿ ಶಿಕ್ಷಕರು ಈ ಬಗ್ಗೆ ನಮ್ಮಲ್ಲಿ ದೂರು ನೀಡಿದ್ದಾರೆ. ಅನೇಕ ಮಂದಿ ಹೊಸದಾಗಿ ಆರ್ಜಿ ಹಾಕಿದ್ದರೂ ಚುನಾವಣಾ ಆಯೋಗ ಅದನ್ನು ಗಮನಿಸಿಲ್ಲ” ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸಿರುವ ಭಾಸ್ಕರ್ ಶೆಟ್ಟಿ ಟಿ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಹೆಸರು ಮಾತ್ರ ಶಿಕ್ಷಕರ ಕ್ಷೇತ್ರ ಎಂದಾಗಿದ್ದು ಈ ಕ್ಷೇತ್ರವನ್ನು ಆಳುವವರು ಮಾತ್ರ ಬೇರೆಯೇ ಆಗಿದ್ದಾರೆ. ಈ ಕಾರಣಕ್ಕಾಗಿ ಓರ್ವ ಶಿಕ್ಷಕನಾಗಿ ಈ ಕ್ಷೇತ್ರದ ಆಳ ಅರಿವು ಬಲ್ಲ ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಈಗಾಗಲೇ ಕರ್ನಾಟಕ ಚುನಾವಣೆ ಆಯೋಗದ ಮುಖ್ಯಸ್ಥರಿಗೆ ದೂರು ನೀಡಲಾಗಿದೆ. ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ನಾವು ಹೈಕೋರ್ಟ್ ಮೊರೆ ಹೋಗಿದ್ದೇವೆ. ನೈರುತ್ಯ ಕ್ಷೇತ್ರದ ಚುನಾವಣೆ ಪ್ರಕ್ರಿಯೆಯನ್ನು ನಿಲ್ಲಿಸಿ ಮತದಾನದಿಂದ ವಂಚಿತರಾಗಿರುವ ಶಿಕ್ಷಕರಿಗೆ ತಕ್ಷಣವೇ ಅವಕಾಶ ನೀಡಬೇಕು. ನಂತರ ಚುನಾವಣೆ ಪ್ರಕ್ರಿಯೆಯನ್ನು ಶುರು ಮಾಡಬೇಕು. ಯಾವುದೇ ಶಿಕ್ಷಕರು ತಮ್ಮ ಸಮಸ್ಯೆ ಹೇಳಿಕೊಳ್ಳಬೇಕಿದ್ದಲ್ಲಿ 7022862057 ನಂಬರಿಗೆ ಕರೆ ಮಾಡಿ” ಎಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಪ್ರೊ. ವಸಂತರಾಜ್ ಶೆಟ್ಟಿ, ವಕೀಲ ಮಂಜುನಾಥ್, ಪ್ರೊ. ಸುಬ್ಬಣ್ಣ ಶೆಟ್ಟಿ, ಉದ್ಯಮಿ ರತ್ನಾಕರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ರಮೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಚಿತ್ರಗಳು : ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಬಂಟ ಸಮಾಜದ ಅಮೂಲ್ಯ ಬಂಟ ರತ್ನ ವಸಂತ ಶೆಟ್ಟಿ. ಇದೀಗ ಜೆಪ್ಪು ಬಂಟರ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ.

ವಿಶೇಷ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್. ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಪ್ರಧಾನ ಕಾರ‍್ಯದರ್ಶಿಯಾಗಿ ಶ್ಲಾಘನೀಯ ಸೇವೆ ಸಲ್ಲಿಸಿದ್ದ, ಹಿರಿಯ, ಅನುಭವೀ ಮುಖಂಡ, ಯಶಸ್ವೀ ಸಂಘಟಕ ವಸಂತ ಶೆಟ್ಟಿಯವರು ಜೆಪ್ಪು ಬಂಟರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಬಂಟ ಸಮಾಜಕ್ಕೆ ಸಂತಸದ ಸಂಗತಿಯಾಗಿದೆ. ಮಾಲಾಡಿ ಅಜಿತ್ ಕುಮಾರ್ ರೈಯವರು ಅಧ್ಯಕ್ಷರಾಗಿರುವ ಪ್ರತಿಷ್ಠಿತ ಬಂಟರ ಯಾನೆ ನಾಡವರ ಮಾತೃ ಸಂಘದಲ್ಲಿ 2016 ರಿಂದ 2019ರವರೆಗೆ ಪ್ರಧಾನ ಕಾರ‍್ಯದರ್ಶಿಯಾಗಿ ಬಂಟ ಸಮಾಜದ ಶ್ರೇಯೋಭಿವೃದ್ಧಿಗಾಗಿ ದುಡಿದಿದ್ದ ವಸಂತ ಶೆಟ್ಟಿಯವರು ಬಂಟ ಸಮಾಜದ ಹೆಮ್ಮೆಯ ಸುಪುತ್ರರಾಗಿದ್ದಾರೆ.ಸಮಾಜಸೇವಕರಾಗಿ, ಸಂಘಟಕರಾಗಿ ಇವರ ಸೇವೆ ಅನನ್ಯ. ಪರರ ಕಷ್ಟಗಳಿಗೆ ಸದಾ ಸ್ಪಂದಿಸುವ ಇವರು ನಿಸ್ವಾರ್ಥಿ ಮತ್ತು ನೇರ ನಡೆನುಡಿಯ ಬಂಟನಾಯಕರಾಗಿದ್ದಾರೆ.ಎಲ್ಲೂರು ಮಾಣೇರು ದಿ. ಬಾಬು ಶೆಟ್ಟಿ ಮತ್ತು ಕಾಪು ಕಲ್ಯ ದೇವಸ್ಯ ಗೋಪಿ ಶೆಟ್ಟಿಯವರ ಮಗನಾಗಿ ನವೆಂಬರ್ 26,, 1956 ರಲ್ಲಿ ಜನಿಸಿದ ವಸಂತ ಶೆಟ್ಟಿಯವರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಅದಮಾರಿನಲ್ಲಿ ಹೈಸ್ಕೂಲ್ ಮತ್ತು ಪಿಯುಸಿ ಶಿಕ್ಷಣವನ್ನು ಓದಿದರು. ಮುಲ್ಕಿ ವಿಜಯ ಕಾಲೇಜಿನಲ್ಲಿ ಬಿ.ಕಾಂ. ಪದವಿಯನ್ನು ಪಡೆದ ಅವರು ಧಾರವಾಡ ವಿಶ್ವವಿದ್ಯಾನಿಲಯದಲ್ಲಿ ಎಂ.ಕಾಂ. ಸ್ನಾತಕೋತ್ತರ ಪದವಿಯನ್ನು ಪಡೆದರು.ತದನಂತರ, ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಎಕೌಂಟ್ಸ್ ಆಫ್ ಇಂಡಿಯಾದಲ್ಲಿ ಮೂರು ವರ್ಷದ ಆರ್ಟಿಕಲ್ ಶಿಪ್ ಪೂರೈಸಿ ಎರಡು ವರ್ಷಗಳ ಕಾಲ ಎರ್ಮಾಳ್ ಪಡುಬಿದ್ರಿ, ಮೂಲ್ಕಿ ಸರಕಾರಿ ಜ್ಯೂನಿಯರ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗಳಲ್ಲಿ ವಿವಿಧ ಮಹತ್ವದ ಹುದ್ದೆಗಳನ್ನು ಅಲಂಕರಿಸಿ ಅಧಿಕಾರಿಯಾಗಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿ, ಬಳಿಕ ನಿವೃತ್ತರಾಗಿದ್ದಾರೆ.ಲಯನ್ಸ್ ಇಂಟರ್‌ನ್ಯಾಷನಲ್, 317-ಸಿ.ಯ ಲಯನ್ಸ್ ಕ್ಲಬ್ ಮುದರಂಗಡಿಯ ಅಧ್ಯಕ್ಷರಾಗಿ 317 ಸಿ.ಯ ವಲಯಾಧ್ಯಕ್ಷರಾಗಿ, ಸಂಪುಟ ಸದಸ್ಯರಾಗಿ ಎಂಜೆಎಫ್ ಮತ್ತು ಪಿಎಮ್‌ಜೆಎಫ್ ಪ್ರಶಸ್ತಿ ಪಡೆದ ಹೆಗ್ಗಳಿಕೆ ಇವರದು.ಇದಕ್ಕೆ ಮೊದಲು ಪಡುಬಿದ್ರೆ ಜ್ಯೂನಿಯರ್ ಚೇಂಬರ್ ಆಫ್ ಇಂಟರ್‌ನ್ಯಾಷನಲ್ ಪಡುಬಿದ್ರಿ ಕ್ಲಬ್‌ನ ಅಧ್ಯಕ್ಷರಾಗಿ ಜನಪರ, ಸಮಾಜಮುಖಿ ಸೇವೆ ಗೈದ ಸಾಧನೆ, ಹಿರಿಮೆ ಇವರಿಗೆ ಸಲ್ಲುತ್ತದೆ. ಪ್ರಸ್ತುತ, ಬಂಟರ ಯಾನೆ ನಾಡವರ ಮಾತೃ ಸಂಘದಲ್ಲಿ ಕಾರ‍್ಯಕಾರಿ ಸಮಿತಿ ಸದಸ್ಯರಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಸಂಚಾಲಕರಾಗಿ ಜವಾಬ್ದಾರಿ ಹೊತ್ತಿರುವ ಜೊತೆಗೆ, ಜೆಪ್ಪು ಬಂಟರ ಸಂಘದ ಅಧ್ಯಕ್ಷರಾಗಿ ಸದ್ರಿ ಸಂಘವನ್ನು ಅಭಿವೃದ್ಧಿ ಪಥದಲ್ಲಿ ಮಾದರಿ ಬಂಟರ ಸಂಘವಾಗಿ ಮುನ್ನಡೆಸುವ ಹೊಣೆಗಾರಿಕೆ ಹೊತ್ತಿದ್ದಾರೆ.ನಂದಿಗುಡ್ಡೆ ಸ್ಮಶಾನದ ಅಭಿವೃದ್ಧಿಗಾಗಿ ಶ್ರಮಿಸಿರುವ ಇವರು ಹಿಂದೂ ರುದ್ರಭೂಮಿ ಸಂರಕ್ಷಣಾ ವೇದಿಕೆ (ರಿ)ಯ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಜೊತೆಗೆ, ಹಿಂದೂ ಜಾಗರಣಾ ವೇದಿಕೆ ಮಂಗಳೂರು ಘಟಕದ ಗೌರವ ಅಧ್ಯಕ್ಷರಾಗಿದ್ದಾರೆ.ಮಂಗಳಾದೇವಿ ಮತ್ತು ಬೋಳಾರ ಘಟಕದ ಶನಿ ಪೂಜಾ ಸಮಿತಿಯ ಗೌರವ ಅಧ್ಯಕ್ಷರಾಗಿ, ಮಂಗಳೂರು ಬೋಳಾರ ಹಳೇಕೋಟೆ, ಮುಖ್ಯಪ್ರಾಣ ದೇವಸ್ಥಾನದ ಆಡಳಿತ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.ಎಲ್ಲೂರು ಯುವಕ ಮಂಡಲ, ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಸಕ್ರಿಯರಾಗಿರುವ ಇವರು ಮಂಗಳೂರಿನ ಜಯಾಂಬಿಕಾ ಚಿಟ್ ಪ್ರೈ.ಲಿ.ನ ಆಡಳಿತ ನಿರ್ದೇಶಕರಾಗಿದ್ದಾರೆ. ಇವರ ಧರ್ಮಪತ್ನಿ ಶ್ರೀಮತಿ ಶಾಂತಾ ವಿ.ಶೆಟ್ಟಿ, ಸುಪುತ್ರಿ ಆಶ್ರಯ, ಸುಪುತ್ರ ಸಿ.ಎ. ಅಕ್ಷಯ ಶೆಟ್ಟಿ.ಇವರ ಮಗಳು ಆಶ್ರಯ ಅವರು ಇಂಟೆಲ್ ಸಾಫ್ಟ್ವೇರ್ ಕಂಪೆನಿಯಲ್ಲಿ ಕರ್ತವ್ಯದಲ್ಲಿದ್ದು, ಅಳಿಯ ಚಿರಾಗ್ ಜಿ. ಶೆಟ್ಟಿಯವರು ಅಮೇರಿಕಾದ ಆಲ್ ಸ್ಟೇಟ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದಾರೆ. ವಸಂತ್ ಶೆಟ್ಟಿಯವರ ಮೊಮ್ಮಗ ಧ್ರುವ ಶೆಟ್ಟಿ. ಮಗ ಅಕ್ಷಯ ಶೆಟ್ಟಿಯವರು ಸಿ.ಎ. ಆಗಿದ್ದು,ಲೆಕ್ಕ ಪರಿಶೋಧಕರಾಗಿ ಕಾಮತ್ & ರಾವ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.ಸೊಸೆ ಡಾ. ಪವಿತ್ರಾ ಅಕ್ಷಯ ಶೆಟ್ಟಿಯವರು ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್ ನಲ್ಲಿ ಉನ್ನತ ವೈದ್ಯಕಿಯ ಶಿಕ್ಷಣ ಪಡೆಯುತ್ತಿದ್ದಾರೆ.ಬಂಟ ಸಮಾಜ ಕಂಡಿರುವ ಅಪೂರ್ವ ಸಮಾಜಸೇವಕ ವಸಂತ ಶೆಟ್ಟಿಯವರು ಬಂಟ ಸಮಾಜದ ಅಮೂಲ್ಯ ಬಂಟ ರತ್ನರಾಗಿದ್ದಾರೆ ಎಂಬುವುದು ಜನಮಾನಸದಲ್ಲಿ ಕೇಳಿಬರುತ್ತಿರುವ ಸುದ್ಧಿ. 47 ವರ್ಷಗಳ ಇತಿಹಾಸ ಹೊಂದಿರುವ ಜೆಪ್ಪು ಬಂಟರ ಸಂಘವು ಇವರ ಅಧ್ಯಕ್ಷತೆಯ ಅಧಿಕಾರ ಅವಧಿಯಲ್ಲಿ ಮಾದರಿ ಬಂಟರ ಸಂಘವಾಗಿ ರೂಪುಗೊಳ್ಳಲಿಲೆಂದು Mp mla’s ನ್ಯೂಸ್ ಶುಭ ಹಾರೈಸುತ್ತದೆ

ಪ್ರಾದೇಶಿಕ ವಾರ್ತೆಗಳು

ಸಾಹಿತಿ ನಳಿನಾಕ್ಷಿ ಉದಯರಾಜ್ ಅವರ ‘ಬದುಕಿನ ಸತ್ಯಗಳು’, ‘ಸ್ವಾತಿಮತ್ತು’ ಕೃತಿಗಳ ಬಿಡುಗಡೆ

ಮಂಗಳೂರು: ಸಾಹಿತಿ ನಳಿನಾಕ್ಷಿ ಉದಯರಾಜ್ ಅವರ ‘ಬದುಕಿನ ಸತ್ಯಗಳು’ ಸಮಕಾಲೀನ ಚಿಂತನೆಗಳ ಸಂಕಲನ ಮತ್ತು ‘ಸ್ವಾತಿಮುತ್ತು ’ಚುಟುಕು ಸಂಕಲನ ಶನಿವಾರ ನಗರದ ಮಹಿಳಾ ಸಭಾದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು.ಕರಾವಳಿ ಲೇಖಕಿಯರ – ವಾಚಕೀಯರ ಸಂಘ ಹಾಗೂ ಸುಶಾಂತ ಪ್ರಕಾಶನ ವಸಂತಪುರ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿದ ಹಿರಿಯ ಸಾಹಿತಿ ಮುದ್ದು ಮೂಡುಬೆಳ್ಳೆ ಮಾತನಾಡಿ ‘ಲೇಖಕಿ ನಳಿನಾಕ್ಷಿ ಉದಯರಾಜ್ ಅವರು ಎರಡೂ ಕೃತಿಗಳು ಬದುಕಿನ ಸತ್ಯಗಳೊಂದಿಗೆ ಸಾರ್ವಕಾಲಿಕ ಸತ್ಯಗಳನ್ನು ಅನಾವರಣಗೊಳಿಸಿವೆ. ಅಂಕಣ ಬರಹಗಳನ್ನು ಈ ರೀತಿಯಾಗಿ ಕೃತಿ ರೂಪದಲ್ಲಿ ಕಟ್ಟಿಕೊಟ್ಟಾಗ ಅದು ಎಲ್ಲರಿಗೂ ಓದುವ ಆಸಕ್ತಿಯನ್ನು ಮೂಡಿಸುವುದರೊಂದಿಗೆ ಜೀವನಾನುಭವಗಳನ್ನು ನೀಡುವ ಸಂದೇಶಗಳಾಗಿ ಜನಸಾಮಾನ್ಯರಿಗೆ ತಲುಪಲು ಸಾಧ್ಯ ಎಂದರು.ಕರಾವಳಿ ಲೇಖಕಿಯರ -ವಾಚಕಿಯರ ಸಂಘದ ಅಧ್ಯಕ್ಷೆ ಡಾ. ಜ್ಯೋತಿ ಚೇಳ್ಯಾರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ನಳಿನಾಕ್ಷಿ ಉದಯರಾಜ್ ಅವರ ‘ಬದುಕಿನ ಸತ್ಯಗಳು’ ಕೃತಿಯನ್ನು ಹಿರಿಯ ಲೇಖಕಿ ಬಿ.ಎಂ ರೋಹಿಣಿ ಮತ್ತು ‘ಸ್ವಾತಿಮುತ್ತು’ ಚುಟುಕು ಸಂಕಲನವನ್ನು ಹಿರಿಯ ಲೇಖಕ ಸದಾನಂದ ನಾರಾವಿ ಅನಾವರಣಗೊಳಿಸಿದರು. ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಮತ್ತು ಕವಿ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಕೃತಿಗಳನ್ನು ಪರಿಚಯಿಸಿದರು. ಮುಖ್ಯ ಅತಿಥಿಯಾಗಿ ನಿವೃತ್ತ ಸೈನ್ಯಾಧಿಕಾರಿ ಹಾಗೂ ಕೆನರಾ ಬ್ಯಾಂಕಿನ ಪ್ರಬಂಧಕ ಸುಕುಮಾರ್ ಕುಂಬಳೆ , ಸುಶಾಂತ ಪ್ರಕಾಶನದ ಪ್ರಕಾಶಕ ಹಾಗೂ ಇನ್ಫೋಸಿಸ್ ಸಂಸ್ಥೆಯಲ್ಲಿ ಸಂಶೋಧಕರಾಗಿರುವ ಸುಶಾಂತ್ ರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಳಿನಾಕ್ಷಿ ಉದಯರಾಜ್ ಸ್ವಾಗತಿಸಿದರು. ಶಿಕ್ಷಕಿ ರತ್ನಾವತಿ ಜೆ. ಬೈಕಾಡಿ ಆಶಯ ಗೀತೆಯನ್ನು ಹಾಡಿದರು. ವಿಜಯ ಲಕ್ಷ್ಮೀ ಕಟೀಲು ಕಾರ್ಯಕ್ರಮ ನಿರೂಪಿಸಿದರು. ಅಕ್ಷತಾ ಅನಿಕೇತ್ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

“ನನ್ನನ್ನು ಅತ್ಯಧಿಕ ಬಹುಮತದೊಂದಿಗೆ ಗೆಲ್ಲಿಸಿ”-ಮತದಾರ ಭಾಂದವರಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನರೇಶ್ಚಂದ್ರ ಹೆಗ್ಡೆ ಹೆಬ್ರಿ ಬೀಡು ಪತ್ರಿಕಾಗೋಷ್ಠಿ ಮೂಲಕ ವಿನಂತಿ.

ಮಂಗಳೂರು : ಕರ್ನಾಟಕ ವಿಧಾನಮಂಡಲದ “ಮೇಲ್ಮನೆ ” ಎನಿಸಿದ ವಿಧಾನಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಬರುವ ಜೂನ್ 3 ರಂದು ನಡೆಯಲಿದೆ .ನೈಋತ್ಯ ಶಿಕ್ಷಕರ ಕ್ಷೇತ್ರ ಎನ್ನುವಂತಹದ್ದು ಅತ್ಯಂತ ಸುಶಿಕ್ಷಿತ ಮತದಾರರ ಕ್ಷೇತ್ರವೆನಿಸಿದೆ. ಇಲ್ಲಿನ ಮತದಾರರು ಕನಿಷ್ಠ ಎರೆಡೆರಡು ಪದವಿಗಳನ್ನು ಪಡೆದವರು ಎಂಬುದು ಉಲ್ಲೇಖನೀಯ.ನೈರುತ್ಯ ಶಿಕ್ಷಕರ ಕ್ಷೇತ್ರ ಎಂಬುದು ರಚನೆಯಾದ ಬಳಿಕ ಎಲ್ಲೋ ಒಂದೆರಡು ಸಂದರ್ಭಗಳನ್ನು ಹೊರತುಪಡಿಸಿ ,ರಾಜಕಾರಣಿಗಳು ,ಶಿಕ್ಷಕರೇ ಅಲ್ಲದವರು ,ಕೆಲವೊಂದು ಸಂದರ್ಭಗಳಲ್ಲಿ ಪದವಿಯನ್ನೇ ಪಡೆಯದವರು ಈ ಸುಶಿಕ್ಷಿತ ಮತದಾರರ ಕ್ಷೇತ್ರದಿಂದ ಚುನಾಯಿತರಾಗಿದ್ದು ಮಾತ್ರ ವಿಪರ್ಯಾಸ .ಈ ಬಾರಿ ಜರುಗಲಿರುವ ಜೂನ್ -3 ರ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸುಮಾರು 22 ಸಾವಿರಕ್ಕೂ ಅಧಿಕ ಮಂದಿ ಶಿಕ್ಷಕರು ಮತದಾರರಾಗಿ ನೊಂದಾಯಿಸಿಕೊಂಡಿದ್ದಾರೆ ಎಂದು ಅಂಕಿ -ಅಂಶಗಳು ತಿಳಿಸುತ್ತಿವೆ. ಕೊಡಗು ದಕ್ಷಿಣ ಕನ್ನಡ,ಉಡುಪಿ ,ಚಿಕ್ಕಮಗಳೂರು ,ಶಿವಮೊಗ್ಗ -ಹೀಗೆ ಐದು ಪೂರ್ತಿ ಕಂದಾಯ ಜಿಲ್ಲೆಗಳು ಹಾಗು ದಾವಣಗೆರೆ ಜಿಲ್ಲೆಯ ನ್ಯಾಮತಿ ,ಹೊನ್ನಾಳಿ ಮತ್ತು ಚನ್ನಗಿರಿ ತಾಲೂಕುಗಳು ಈ ನೈರುತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೊಳಪಟ್ಟಿವೆ. ಕರಾವಳಿ ,ಮಲೆನಾಡು ಮತ್ತು ಬಯಲುಸೀಮೆ…ಹೀಗೆ ಮೂರೂ ರೀತಿಯ ಭೌಗೋಳಿಕ ವಿಭಾಗಗಳನ್ನು ಈ ನಮ್ಮ ನೈರುತ್ಯ ಶಿಕ್ಷಕರ ಕ್ಷೇತ್ರವು ಒಳಗೊಂಡಿದೆ .ತಮಗೆ ಈಗಾಗಲೇ ತಿಳಿದಿರುವಂತೆ ಡಾ.ನರೇಶ್ಚಂದ್ರ ಹೆಗ್ಡೆ ,ಹೆಬ್ರಿಬೀಡು ಆದಂತಹ ನಾನು ಈ ಬಾರಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸುತ್ತಿದ್ದು ಮೇ -16 ರಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಧಿಕೃತವಾಗಿ ನನ್ನ ಉಮೇದ್ವಾರಿಕೆ ಯ ನಾಮಪತ್ರವನ್ನು ಸಲ್ಲಿಸಿದ್ದೇನೆಂದು ಡಾ. ನರೇಶ್ಚಂದ್ರ ಹೆಗ್ಡೆ, ಹೆಬ್ರಿ ಬೀಡು ಮಂಗಳೂರಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.ಸುಶಿಕ್ಷಿತರ ,ಮೇಧಾವಿಗಳ ಮತ್ತು ಬುದ್ದಿವಂತರ ಈ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಓರ್ವ ವಿದ್ಯಾವಂತ ಮತ್ತು ಸ್ವತಃ ಶಿಕ್ಷಕನೇ ಆಗಿರುವ ಅಭ್ಯರ್ಥಿಯೇ ಬೇಕು ಎಂಬ ಪರಿಕಲ್ಪನೆಯಡಿ ಹೃದ್ರೋಗ ಶಸ್ತ್ರ ಚಿಕಿತ್ಸಾ ತಜ್ಞ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿರುವ ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಮನಸ್ಸು ಮಾಡಿದ್ದೇನೆ .ಕರಾವಳಿ ಮತ್ತು ಮಲೆನಾಡಿನ ಸಂಗಮ ಸ್ಥಾನವಾದ ನಿಸರ್ಗ ರಮಣೀಯ ಹೆಬ್ರಿಯ ಪ್ರತಿಷ್ಠಿತ ಹೆಬ್ರಿಬೀಡು ಮನೆತನದಲ್ಲಿ ಜನಿಸಿರುವುದು ನನ್ನ ಸೌಭಾಗ್ಯ. ಉಡುಪಿ, ಮಣಿಪಾಲ ಮತ್ತು ಮಂಗಳೂರಿನಲ್ಲಿ ವಿದ್ಯಾಭ್ಯಾಸ ಪಡೆದು ಎಂ.ಬಿ.ಬಿ.ಎಸ್, ಎಂ.ಎಸ್ (ಸರ್ಜರಿ) ಮತ್ತು ಎಂ.ಸಿ.ಎಚ್ (ಸಿ.ಟಿ. ವಿ.ಎಸ್ ) ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ನಾನು ಈ ವರೆಗೆ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಣಿಪಾಲ, ಮೆಲಕಾ-ಮಣಿಪಾಲ ಮೆಡಿಕಲ್ ಕಾಲೇಜು ಮಲೇಷ್ಯಾ, ಸತ್ಯಸಾಯಿ ಉನ್ನತ ವೈದ್ಯಕೀಯ ಸಂಸ್ಥೆ, ಬೆಂಗಳೂರು, ಗೋಕುಲಂ ಸ್ಪೆಷಾಲಿಟಿ ಆಸ್ಪತ್ರೆ ಸೇಲಂ _ತಮಿಳ್ನಾಡು, ರಾಜರಾಜೇಶ್ವರಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಬೆಂಗಳೂರು ಮೊದಲಾದ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾದ್ಯಾಪಕ ,ಪ್ರಾದ್ಯಾಪಕ, ಸಮಾಲೋಚಕ ಮತ್ತು ಹಿರಿಯ ಕುಲಸಚಿವ ಮೊದಲಾದ ಶೈಕ್ಷಣಿಕ ಹುದ್ದೆಗಳನ್ನು ನಿಭಾಯಿಸಿದ್ದೇನೆ .ನನ್ನ ತಂದೆ ಡಾ.ಮನೋರಂಜನ್ ದಾಸ್ ಹೆಗ್ಡೆಯವರು ಸರಕಾರಿ ವೈದ್ಯಾಧಿಕಾರಿಗಳಾಗಿ ತನ್ನ ಮಾನವೀಯ ಸೇವೆಯಿಂದ ಉಡುಪಿ ಜಿಲ್ಲೆಯಾದ್ಯಂತ ಚಿರಪರಿಚಿತರು ಎನ್ನಲು ನನಗೆ ಅತೀವ ಹೆಮ್ಮೆಯೆನಿಸುತ್ತಿದೆ . ನನ್ನ ತಾಯಿ ಶ್ರೀಮತಿ ಸರೋಜಾ.ಎಂ ಹೆಗ್ಡೆಯವರು ಪದವೀಧರೆಯಾಗಿದ್ದು, ಆದರ್ಶ ಗ್ರಹಿಣಿಯಾಗಿ ಮಹಿಳಾಪರ ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿಕೊಂಡವರು.ನನ್ನ ಧರ್ಮಪತ್ನಿ ಡಾ. ಜ್ಯೋತಿರಾವ್ ಕೂಡಾ ವೃತ್ತಿಯಿಂದ ವೈದ್ಯೆಯಾಗಿದ್ದು ಫಾರ್ಮಕಾಲಜಿ ವಿಭಾಗದಲ್ಲಿ ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷಣ,ಮಾರ್ಗದರ್ಶನ ನೀಡುತ್ತಿದ್ದಾರೆನನ್ನ ವೃತ್ತಿ ಜೀವನದ ಬಗ್ಗೆ ಹೇಳುವುದಾದರೆ, ಓರ್ವ ಹ್ರದ್ರೋಗ ಶಸ್ತ್ರಚಿಕಿತ್ಸಾ ತಜ್ಞನಾಗಿ ಹ್ರದ್ರೋಗ ಮತ್ತು ತತ್ಸಂಬಂಧೀ ವಿಷಯಗಳ ಒಟ್ಟು ಇಪ್ಪತ್ತು ವಿಧದ ಬಹು ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ಸಾವಿರಾರು ಸಂಖ್ಯೆಯಲ್ಲಿ ಕೈಗೊಂಡು ,ಬಹು ದೊಡ್ಡ ಸಂಖ್ಯೆಯ ರೋಗಿಗಳಿಗೆ ಜೀವದಾನ ಮಾಡಿರುವ ವಿನೀತ ಮತ್ತು ವಿನಮ್ರ ಭಾವ ನನಗಿದೆ .ಅನೇಕ ಸಂಶೋಧನಾತ್ಮಕ ಹೃದ್ರೋಗ ಸಂಬಂಧೀ ಪ್ರಬಂಧಗಳನ್ನು ರಾಷ್ಟೀಯ -ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಮಂಡಿಸಿರುತ್ತೇನೆ . ಐವತ್ತಕ್ಕೂ ಹೆಚ್ಚಿನ ವೈದ್ಯಕೀಯ ಸಮ್ಮೇಳನಗಳು ಮತ್ತು ಕಾರ್ಯಾಗಾರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುತ್ತೇನೆ.ನಾನು ಸಿದ್ಧಪಡಿಸಿದ ಹೃದ್ರೋಗಕ್ಕೆ ಸಂಬಂಧಿಸಿದ ವಿಶೇಷ ಸಂಶೋಧನಾ ವರದಿ ದೇಶದ ಪ್ರಮುಖ ವೈದ್ಯಕೀಯ ಜರ್ನಲ್ ಗಳಲ್ಲಿ ಪ್ರಕಟವಾಗಿದೆ.ಬಹುಬೇಡಿಕೆಯ ಬಿ.ಎಸ್ಸಿ ಮತ್ತು ಎಂ.ಎಸ್ಸಿ (ಪರ್ಪ್ಯೂಷನ್ ಟೆಕ್ನಾಲಜಿ )ಕೋರ್ಸ್ ಗಳಿಗೆ ಸಂಪೂರ್ಣ ಪಠ್ಯಕ್ರಮ ಮತ್ತು ಶಿಷ್ಟಾಚಾರ ನಿಯಮಗಳನ್ನು ರಚಿಸುವ ಮೂಲಕ ಉನ್ನತ ಶಿಕ್ಷಣದ ಪಠ್ಯ ರಚನಾ ಕ್ಷೇತ್ರದಲ್ಲೂ ಕೈಯಾಡಿಸಿದ್ದೇನೆ.ನಾನು ವೈದ್ಯಕೀಯ ವಿದ್ಯಾರ್ಥಿಯಾಗಿರುವಾಗಲೇ ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಗೆ ವಿದ್ಯಾರ್ಥಿ ಪ್ರತಿನಿಧಿಯಾಗಿ ಅವಿರೋಧವಾಗಿ ಆಯ್ಕೆಯಾಗುವ ಸದಾವಕಾಶ ನನಗೆ ಲಭಿಸಿತ್ತು. ಮಣಿಪಾಲ ಕೆ.ಎಂ .ಸಿ ಯ ಇಂಟರ್ನ್ ಡಾಕ್ಟರ್ಸ್ ಆಸೋಸಿಯೇಷನ್ ನ ಅಧ್ಯಕ್ಷನಾಗಿಯೂ ಸೇವೆ ಸಲ್ಲಿಸಿದ್ದೇನೆ . ಗಣನೀಯ ಸಂಖ್ಯೆಯ ಶ್ರೀ ಸಾಮಾನ್ಯರಿಗೆ ಉಚಿತ ಹೃದ್ರೋಗ ಪರೀಕ್ಷೆ ಮಾಡಿ ಸೂಕ್ತ ಚಿಕಿತ್ಸೆಗೆ ಮಾರ್ಗದರ್ಶನ ನೀಡಿರುತ್ತೇನೆ .ಇಂತಹ ವೈದ್ಯಕೀಯ ಮತ್ತು ಶೈಕ್ಷಣಿಕ ಹಿನ್ನೆಲೆ ಹೊಂದಿರುವ ನಾನು ಇದೀಗ ಶಿಕ್ಷಣ ರಂಗದ ಸೇವಾಕಾಂಕ್ಷಿಯಾಗಿ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ.ಪ್ರಾಥಮಿಕ ಶಾಲಾ ಹಂತದಿಂದ ವೃತ್ತಿ ಶಿಕ್ಷಣ ಕಾಲೇಜುಗಳವರೆಗಿನ ವಿವಿಧ ಹಂತಗಳ ಶೈಕ್ಷಣಿಕ ಸಂಸ್ಥೆಗಳ , ಭಾಷಾ ಮಾಧ್ಯಮದ, ಬೋಧಕ ವೃಂದದ,ಬೋಧಕೇತರರ,ಸರಕಾರಿ,ಅನುದಾನಿತ ಮತ್ತು ಅನುದಾನರಹಿತ ವಿದ್ಯಾಸಂಸ್ಥೆಗಳವರ ,ಆಡಳಿತ ಮಂಡಳಿಗಳವರ ಬಹುಮುಖಿ ಸಮಸ್ಯೆಗಳನ್ನು ಆಯಾ ವರ್ಗದಲ್ಲಿ ತಜ್ಞರೆನಿಸಿದವರಿಂದ ಸಲಹೆ ,ಮಾರ್ಗದರ್ಶನ ಪಡೆದು ಶಾಶ್ವತ ಪರಿಹಾರ ಕ್ರಮಗಳನ್ನು ರೂಪಿಸಲು ಕಾರ್ಯೋನ್ಮುಖವಾಗುವ ಬದ್ಧತೆ ಖಂಡಿತವಾಗಿಯೂ ನನಗಿದೆ.ಇಂದು ಇಲ್ಲಿ ಉಪಸ್ಥಿತರಿರುವ ಮಾಧ್ಯಮಗಳ ಎಲ್ಲಾ ಪ್ರತಿನಿಧಿ ಮಿತ್ರರು ನನ್ನೆಲ್ಲಾ ವಿಚಾರ, ಚಿಂತನೆ, ಶೈಕ್ಷಣಿಕ ಹಿನ್ನೆಲೆ ಮತ್ತು ಮುಖ್ಯವಾಗಿ ನಾನು ಈ ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸಿದ ಕಾರಣಗಳನ್ನು ಈ ಶೈಕ್ಷಣಿಕ ಸಮೃದ್ಧ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಿಕ್ಷಕ ಮತದಾರರಿಗೆ ತಂತಮ್ಮ ಮಾಧ್ಯಮ/ ವಾಹಿನಿಗಳ ಮುಖಾಂತರ ತಲುಪಿಸಿ ತನ್ಮೂಲಕ ಪಕ್ಷೇತರನಾದ ಶಿಕ್ಷಕನೇ ಆದ ಅಭ್ಯರ್ಥಿಯಾದ ನಾನು ಅತ್ಯಧಿಕ ಪ್ರಥಮ ಪ್ರಾಶ್ಯಸ್ತದ ಮತಗಳಿಂದ ಗೆಲುವು ಸಾಧಿಸಲು ಸಹಕರಿಸಬೇಕೆಂದುಪತ್ರಿಕಾಗೋಷ್ಠಿಯಲ್ಲಿ ನರೇಶ್ಚಂದ್ರಹೆಗ್ಡೆ ವಿನಂತಿಸಿದ್ದಾರೆ. ಚಿತ್ರ : ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ನಳಿನ್ ಕುಮಾರ್ ಕಟೀಲ್ ಅವರನ್ನು ಎಂಎಲ್ ಸಿ ಮಾಡಿ ವಿಧಾನ ಪರಿಷತ್ ನ ಪ್ರತಿಪಕ್ಷ ನಾಯಕನಾಗಿಸಲು ಬಿಜೆಪಿ ಮುಖಂಡರ ತೀರ್ಮಾನ. ಮೇ.30ರಂದು ನಿರ್ಧಾರ.

ಬೆಂಗಳೂರು : ಜೂನ್ 13 ರಂದು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 44 ಆಕಾಂಕ್ಷಿಗಳಿದ್ದು,ಕೋರ್ ಕಮಿಟಿ 12 ಮಂದಿಯ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನೆ ಮಾಡಿದೆ.ಇದರಲ್ಲಿ ದ.ಕ.ಸಂಸದರೂ ಆಗಿರುವ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರೂ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಜಾತಿವಾರು ಹಾಗೂ ಪ್ರದೇಶವಾರು ಆಧರಿಸಿ 12 ಮಂದಿಯ ಅಂತಿಮ ಪಟ್ಟಿ ತಯಾರು ಮಾಡಲಾಗಿದ್ದು ಈ ಪೈಕಿ ಮೂವರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮೇ 22 ರಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಪಾಲ್ಗೊಂಡಿದ್ದರು.ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಗೆ ಮೂರು ಸ್ಥಾನ ಸಿಕ್ಕಿದ್ದು, ಆ ಮೂರು ಸ್ಥಾನಕ್ಕೆ ಪಟ್ಟಿ ಸಿದ್ದಪಡಿಸುವ ಕುರಿತು ಆಕಾಂಕ್ಷಿಗಳ ಪಟ್ಟಿಯೊಂದಿಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಆಕಾಂಕ್ಷಿಗಳ ಪಟ್ಟಿಯಲ್ಲಿ ಇಲ್ಲದ ಹೆಸರುಗಳ ಬಗ್ಗೆಯೂ ಪ್ರಸ್ತಾಪಿಸಿ ಚರ್ಚೆ ನಡೆಸಲಾಗಿದೆ. ಕಟೀಲ್‌ಗೆ ಪರಿಷತ್‌ನ ಪ್ರತಿಪಕ್ಷ ನಾಯಕ ಸ್ಥಾನ?: ಹಾಲಿ ಸಂಸದನಾಗಿರುವ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರದ ಅವಧಿ ಇನ್ನೇನು ಮುಗಿಯಲಿದೆ.ಈ ಬಾರಿ ಲೋಕಸಭೆಗೆ ಅವರಿಗೆ ಅವಕಾಶ ನೀಡಲಾಗಿಲ್ಲ. ಈ ನಿಟ್ಟಿನಲ್ಲಿ ಅವರನ್ನು ಪರಿಷತ್‌ ಸದಸ್ಯನಾಗಿ ಮಾಡುವ ಜೊತೆಗೆ ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಸ್ಥಾನ ನೀಡುವ ಕುರಿತು ಪಕ್ಷದ ಪ್ರಮುಖರು ತೀರ್ಮಾನಿಸಿದ್ದಾರೆ.ಪರಿಷತ್‌ನ ಪ್ರತಿಪಕ್ಷದ ನಾಯಕನಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ಈಗಾಗಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದಾರೆ. ಪ್ರಮುಖರ ಪಟ್ಟಿಯಲ್ಲಿ: ಸದ್ಯ ರಾಜ್ಯ ಬಿಜೆಪಿ ಸಿದ್ಧಪಡಿಸಿರುವ 12 ಜನರ ಪಟ್ಟಿಯಲ್ಲಿ ನಳಿನ್ ಕುಮಾರ್ ಕಟೀಲ್‌, ಸಿ.ಟಿ.ರವಿ, ಎನ್.ರವಿ ಕುಮಾರ್, ಬಿಜೆಪಿ ಮರಾಠ ಮುಖಂಡ ಮಾರುತಿ ರಾವ್‌ ಮೂಳೆ, ಬಿಜೆಪಿ ಮರಾಠ ನಾಯಕಿ ಧನಶ್ರೀ ಸರ್‌ದೇಸಾಯಿ, ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನಾ, ಹಾವೇರಿ ಬಿಜೆಪಿ ನಾಯಕ ಬೋಜರಾಜು ಪ್ರಮುಖರಾಗಿದ್ದಾರೆ.ಡಿ.ವಿ.ಸದಾನಂದ ಗೌಡರ ಹೆಸರು ಸೇರ್ಪಡೆಯಾಗಿದೆಯೇ ಎನ್ನುವ ಖಚಿತ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದು ಮೇ 30 ರ ನಂತರವಷ್ಟೇ ರಾಜ್ಯ ಬಿಜೆಪಿ ಕಳಿಸಿರುವ ಪಟ್ಟಿ ಬಗ್ಗೆ ಗಮನ ಹರಿಸಲಿದೆ ಮತ್ತು ಈ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಅಂತರಾಷ್ಟ್ರೀಯ ಗುಣ ಮಟ್ಟದ ನಗರವಾಗಿ ಬೆಳೆಯ ಬೇಕು- ರೋಹನ್ ಮೊಂತೇರೊ ಮಂಗಳೂರು ಪ್ರೆಸ್‌ ಕ್ಲಬ್ ಗೌರವ ಅತಿಥಿ.

ಮಂಗಳೂರು:ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ರೋಹನ್ ಕಾರ್ಪೋರೇಷನ್‌ನ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ತಿಳಿಸಿದ್ದಾರೆ.ಅವರು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು.ಮಂಗಳೂರು ನಗರ ಇನ್ನಷ್ಟು ಬೆಳೆಯಲು ಬೇಕಾದ ನೈಸರ್ಗಿಕ ಸೌಲಭ್ಯ ವನ್ನು ಹೊಂದಿ ದೆ.ಮಂಗಳೂರು ಜಲ,ವಾಯು,ನೆಲ ಸಾರಿಗೆ ಸಂಪರ್ಕ ಹೊಂದಿರುವ ನಗರ.ಹೆಚ್ಚು ಸುಶಿಕ್ಷಿತ ಜನರು ಇದ್ದಾರೆ.ಜಾತಿ,ಮತದ ದೊಡ್ಡ ಸಮಸ್ಯೆ ಇಲ್ಲ.ಒಂದು ರೀತಿಯಲ್ಲಿ ಮಂಗಳೂರು ಸ್ವರ್ಗದ ರೀತಿಯ ಪ್ರದೇಶ.ಮಂಗಳೂರಿನ ಜನ ದುಬೈ ಗೆ ಹೋಗುತ್ತಾರೆ.ಮಂಗಳೂರನ್ನೇ ದುಬೈ ರೀತಿಯಲ್ಲಿ ಬೆಳೆಸಬೇಕು. ಇಲ್ಲಿನ ಜನರು ಹಲವು ಭಾಷೆಗಳಲ್ಲಿ ವ್ಯವಹಾರ ಮಾಡಬಲ್ಲವರಾಗಿದ್ದಾರೆ ನಾನು ಉದ್ಯಮ ಕ್ಷೇತ್ರದಲ್ಲಿ ಬೆಳೆಯಲು ಮಂಗಳೂರಿನ ಜನ ಸಹಕಾರ ನೀಡಿರುವುದನ್ನು ನಾನು ಮರೆಯಲು ಸಾಧ್ಯವಿಲ್ಲ ಎಂದು ರೋಹನ್ ಮೊಂತೆರೋ ತಿಳಿಸಿದ್ದಾರೆ. 9ನೇ ತರಗತಿ ಶಾಲೆ ತ್ಯಜಿಸಿದವ ಉದ್ಯಮಿಯಾದ ಬಗೆ……….ತಾನು ಒಂಭತ್ತನೇ ತರಗತಿಯವರೆಗೆ ಶಾಲೆಗೆ ಹೋದೆ.ನಂತರ ಔಪಚಾರಿಕ ಶಿಕ್ಷಣ ವ್ಯವಸ್ಥೆ ಯಲ್ಲಿ ಶಿಕ್ಷಣ ಮುಂದುವರಿಸಲು ಸಾಧ್ಯ ವಾಗಲಿಲ್ಲ. ಉಳಾಯಿಬೆಟ್ಟು ಎನ್ನುವ ಸಣ್ಣ ಹಳ್ಳಿ ಯಲ್ಲಿ ನಮಗೆ ಸ್ವಲ್ಪ ಜಮೀನು ಇದೆ.ತಂದೆ ಕೃಷಿಕ.ನನ್ನನ್ನು ಕೃಷಿ ಕೆಲಸ ಮಾಡಿಕೊಂಡು ಇರಲು ಹೇಳಿದರು.ಆಗ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಹೊಲದಲ್ಲಿ ಊಳ ತೊಡಗಿದೆ.ಸ್ವಲ್ಪ ದಿನದಲ್ಲಿ ನನಗೆ ಕೃಷಿಯ ಕಷ್ಟ ನಷ್ಟದ ಅನುಭವ ವಾಯಿತು.ನಾನು ಅದರಲ್ಲಿ ಮುಂದುವರಿಯಲು ಇಷ್ಟ ಪಡಲಿಲ್ಲ.ಬಳಿಕ,ಒಂದು ಕ್ಯಾಂಟೀನ್ ನಲ್ಲಿ ಕೆಲಸಕ್ಕೆ ಸೇರಿದೆ.ಅಲ್ಲಿಯೂ ಸ್ವಲ್ಪ ದಿನದಲ್ಲಿ ಕೆಲಸ ಬಿಟ್ಟು ಒಂದು ಕಡೆ ಆಟೋ ಇಲೆಕ್ಟ್ರೀಶಿಯನ್ ಆಗಿ ಸೇರಿದೆ.ಬಳಿಕ ಏರ್ ಕಂಡೀಶನ್ ನಲ್ಲೂ ಕೆಲಸ ಮಾಡಿದೆ.ಅಲ್ಲೂ ಹೆಚ್ಚು ದಿನ ಇರಲಿಲ್ಲ.ನಂತರ ಒಂದು ಕ್ಯಾಟರಿಂಗ್ ನಲ್ಲಿ ಸೇರಿದೆ.ಬಳಿಕ ಒಂದು ಲಾಂಡ್ರಿ ಮಾಡಿದೆ.ಅದನ್ನು ಆರು ತಿಂಗಳಲ್ಲಿ ಮಾರಾಟ ಮಾಡಿದೆ.ಬಳಿಕ ಒಂದು ಬೇಕರಿ ಅಂಗಡಿಯಲ್ಲಿ ಮಾರಾಟ ಪ್ರತಿನಿಧಿಯಾಗಿ ಎಂಟು ವರ್ಷ ಕೆಲಸ ಮಾಡಿದೆ. ನಂತರ ಮನೆ ಬಾಡಿಗೆ ವ್ಯವಹಾರ ಸಣ್ಣ ಪುಟ್ಟ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡು ಇಂದು ಬೃಹತ್ ಬಡಾವಣೆ ನಿರ್ಮಿಸುವ ಹಂತಕ್ಕೆ ತಲುಪಿದೆ. ನಾನು ರಿಯಲ್ ಎಸ್ಟೇಟ್ ನ ಸಣ್ಣ ಪುಟ್ಟ ಕೆಲಸದಲ್ಲಿ ಕಲ್ಲು ಹೊತ್ತು, ಮೇಸ್ತ್ರಿ ಕೆಲಸ ಮಾಡಿದ ಎಲ್ಲಾ ಕಷ್ಟ ನಷ್ಟದ ಅನುಭವ ನನಗೆ ಸಾಕಷ್ಟು ಪಾಠ ಕಲಿಸಿದೆ ಎಂದು ರೋಹನ್ ಮೊಂತೆರೋ ತಮ್ಮ ಅನುಭವವನ್ನು ಹಂಚಿಕೊಂಡರು. ರೋಹನ್ ಮೊಂತೆರೋ ಕಳೆದ 32 ವರ್ಷಗಳಲ್ಲಿ 40 ರಿಯಲ್ಎಸ್ಟೇಟ್ ಪ್ರೊಜೆಕ್ಟ್ ಗಳನ್ನು ಪೂರ್ಣ ಗೊಳಿಸಿ 1400 ಜನರಿಗೆ ಉದ್ಯೋಗ ನೀಡಿದ್ದಾರೆ.3000ಕ್ಕೂ ಅಧಿಕ ಮನೆ ನಿರ್ಮಿಸಿದ್ದಾರೆ.ಮಂಗಳೂರಿನ ಪಡೀಲ್ ,ಸುರತ್ಕಲ್ ,ಯೆಯ್ಯಾಡಿ,ಸುರತ್ಕಲ್ ನಲ್ಲಿ 8 ಸಾವಿರ ಕೋಟಿ ರೂಪಾಯಿಯ ಯೋಜನೆ ಕೈ ಗೆತ್ತಿಕೊಳ್ಳಲಿರುವುದಾಗಿ ಅವರು ತಿಳಿಸಿದರು. ಮುಂದಿನ ಹಂತದಲ್ಲಿ ಮೈಸೂರು, ಗೋವಾದಲ್ಲಿ ರಿಯಲ್ ಎಸ್ಟೇಟ್ ಉದ್ಯಮವನ್ನು ವಿಸ್ತರಿಸುವ ಚಿಂತನೆ ಹೊಂದಿರುವುದಾಗಿ ರೋಹನ್ ಮೊಂತೆರೋ ವಿವರಿಸಿದರು.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಪೋರೇಟ್ ಸಂವಹನಾಧಿಕಾರಿ ಜೈದೀಪ್ ಶೆಣೈ ಕಾರ್ಯಕ್ರಮ ಉದ್ಘಾಟಿಸಿದರು.ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ , ಕಾರ್ಯಕ್ರಮ ನಿರ್ದೇಶಕ ವಿಲ್ಫೆಡ್ ಡಿ ಸೋಜ ಉಪಸ್ಥಿತರಿದ್ದರು.ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆ-ಆ್ಯಂಟೋನಿ ಮರಿಯಪ್ಪ. 2024-25 ನೇ ಸಾಲಿನಲ್ಲಿ 5ಲಕ್ಷ ಗಿಡ ನೆಡುವ ಯೋಜನೆ.

ಮಂಗಳೂರು:ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಗಿಡ ನೆಟ್ಟು ಬೆಳೆಸುವುದಕ್ಕೆ ಹಾಗೂ ಅರಣ್ಯ ಇಲಾಖೆಯ ವಿವಿಧ ಯೋಜನೆಗಳ ಮೂಲಕ ಗಿಡಗಳ ವಿತರಣೆ ಆರ್ಥಿಕ ನೆರವನ್ನು ಕೃಷಿಕರಿಗೆ ನೀಡಲಾ ಗುತ್ತಿದೆ. 2024-25ನೇ ಸಾಲಿನಲ್ಲಿ ರೈತರಿಗೆ 1,63,000ಗಿಡಗಳನ್ನು ವಿತರಿಸುವ ಗುರಿಹೊಂದಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.ಅವರು ನಗರದ ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಮಾಧ್ಯಮ ಸಂವಾದದಲ್ಲಿ ವಿವರಿಸಿದರು. ರೈತರಿಗೆ ತಮ್ಮ ಜಮೀನಿನಲ್ಲಿ ಗಿಡ ಬೆಳೆಸಲು ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆಯ 9 ನರ್ಸರಿಗಳಲ್ಲಿ ಮತ್ತು ಸಾಮಾಜಿಕ ಅರಣ್ಯ ವಿಭಾಗದ 5 ನರ್ಸರಿಗಳ ಮೂಲಕ ಸುಮಾರು 30 ವಿವಿಧ ರೀತಿಯ ಸಸ್ಯಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಒಬ್ಬ ರೈತನಿಗೆ ಗರಿಷ್ಠ ಒಂದು ಹೆಕ್ಟೇರ್ ಗೆ 400 ಸಸಿ ವಿತರಿಸುವ ಯೋಜನೆ ಇದೆ. ಕೃಷಿ ಅರಣ್ಯ ವಿಕಾಸ ಯೋಜನೆಯಲ್ಲಿ ಪ್ರತಿ ಗಿಡ ನೆಟ್ಟು ಸಂರಕ್ಷಣೆ ಮಾಡಲು 125 ರೂಪಾಯಿ ಆರ್ಥಿಕ ನೆರವು ರೈತರಿಗೆ ನೀಡಲಾಗುತ್ತದೆ. ನರೇಗಾ ದಲ್ಲೂ ಗಿಡ ನೆಡಲು ಸಹಾಯ ನೀಡಲಾಗುತ್ತದೆ. ಕಳೆದ ವರ್ಷ 7,79,000 ಗಿಡಗಳನ್ನು ಅರಣ್ಯದಲ್ಲಿ,35,600 ಗಿಡಗಳನ್ನು ಅರಣ್ಯೇತರ ಕಡೆಗಳಲ್ಲಿ ನೆಡಲಾಗಿದೆ. 4,41,000 ಗಿಡಗಳನ್ನು ರೈತರಿಗೆ ನೀಡಲಾಗಿದೆ. 2024-25 ರಲ್ಲಿ 5ಲಕ್ಷ ಸಸಿ ನೆಡುವ ಯೋಜನೆ ಇದೆ.ಈ ರೀತಿಯ ಪ್ರತಿ ವರ್ಷ ಸುಮಾರು 7ಲಕ್ಷ ಗಿಡಗಳನ್ನು ನೆಡಲಾಗುತ್ತಿದೆ. ಆದರೆ, ರಸ್ತೆ ಕಟ್ಟಡ ಇನ್ನಿತರ ಅಭಿವೃದ್ಧಿ ಯೋಜನೆಗಳ ಸಂದರ್ಭದಲ್ಲಿ ಪ್ರತಿ ವರ್ಷ ಸಾಕಷ್ಟು ಮರಗಳ ನಾಶವಾಗುತ್ತದೆ.ಕಳೆದ ವರ್ಷ ಈ ರೀತಿ 1,70,000 ಸಾವಿರ ಮರಗಳನ್ನು ತೆರವುಗೊಳಿಸ ಬೇಕಾಯಿತು. ಸುಮಾರು 3ಸಾವಿರ ಮರಗಳನ್ನು ಅಪಾಯವನ್ನು ತಪ್ಪಿಸಲು ತೆರವುಗೊಳಿಸ ಬೇಕಾಯಿತು. ಆದರೂ ಶೇ 33ರಷ್ಟು ಅರಣ್ಯ ವನ್ನು ಸಂರಕ್ಷಿಸುವುದು ಅನಿವಾರ್ಯವಾಗಿದೆ ಎಂದು ಮರಿಯಪ್ಪ ಹೇಳಿದರು.ಕಾಡು ಪ್ರಾಣಿಗಳ ಹಾವಳಿ ತಡೆಗೆ ಹಣ್ಣಿನ ಮರಗಳ ತೋಪು:- ಕಾಡು ಪ್ರಾಣಿಗಳು ಮುಖ್ಯ ವಾಗಿ,ಆನೆಗಳ ಹಾವಳಿ ತಡೆಯಲು ಕಾಡಿನಲ್ಲಿ ಅಕೇಶಿಯ ಮರಗಳನ್ನು ತೆರವುಗೊಳಿಸಿ ಹಣ್ಣಿನ ಮರಗಳನ್ನು ಬೆಳೆಸಲಾಗುತ್ತಿದೆ. ಇದುವರೆಗೆ ಸುಮಾರು 900 ಹೆಕ್ಟೇರ್ ಅಕೇಶಿಯ ಮರಗಳ ತೋಪು ತೆರವುಗೊಳಿಸಿ ಹಣ್ಣಿನ ಮರಗಳನ್ನು ಬೆಳೆಸಲಾಗಿದೆ. ಆನೆಗಳ ತಡೆಗೆ ಸೋಲಾರ್ ಬೇಲಿ ಸೇರಿದಂತೆ ಜನವಸತಿಗೆ ನುಗ್ಗದಂತೆ ತಡೆಗಳನ್ನು ನಿರ್ಮಿಸಲಾಗಿದೆ.ಆನೆಗಳ ಪಥ ಹಲವಾರು ವರ್ಷ ಗಳಿಂದ ಒಂದೇ ಆಗಿರುತ್ತದೆ.ರಸ್ತೆ ಇತರ ಕಾಮಗಾರಿಯ ಸಂದರ್ಬದಲ್ಲಿ ಈ ಪಥ ಬದಲಾದರೆ ಆನೆಗಳು ಗೊಂದಲಕ್ಕೆ ಒಳಗಾಗಿ ಹೊಸ ದಾರಿ ಹುಡುಕುತ್ತವೆ .ಇದರಿಂದ ಸಾಕಷ್ಟು ಬಾರಿ ಅವುಗಳು ನಾಡಿಗೆ ನುಗ್ಗಿದ ಉದಾಹರಣೆಗಳಿವೆ. ಕಳೆದ 2023-24ರಲ್ಲಿ ಆನೆ ದಾಳಿಯಿಂದ ನಾಲ್ಕು ಜೀವ ಹಾನಿಯಾಗಿದೆ. 2024-25ರಲ್ಲಿ ಯಾವುದೇ ಜೀವ ಹಾನಿ ಯಾಗಿಲ್ಲ . ಆನೆ,ಕಡವೆ, ಮಂಗಗಳು ಸೇರಿದಂತೆ ಕಾಡು ಪ್ರಾಣಿಗಳಿಂದ ಬೆಳೆ ಹಾನಿಯಾದರೆ ಅವರಿಗೆ ಪರಿಹಾರ ನೀಡುವ ಯೋಜನೆ ಇದೆ ಎಂದು ಡಿಸಿಎಫ್ ತಿಳಿಸಿದರು.ಚಾರಣ ಪ್ರಿಯರಿಗೆ ಆನ್ ಲೈನ್ ಮೂಲಕ ಬುಕ್ ಮಾಡಿ ಹೋಗಲು ಅವಕಾಶವಿದೆ. ಅರಣ್ಯದ ಕಾನೂನಿನಲ್ಲಿ ನೀಡಲಾದ ವಿನಾಯಿತಿಗಳ ಹೊರತಾಗಿ ಇನ್ನಿತರ ಚಟುವಟಿಕೆಗಳಿಗೆ ಮಾತ್ರ ಇಲಾಖೆ ಅನುಮತಿ ನೀಡುವುದಿಲ್ಲ. ಅರಣ್ಯ ಸಂರಕ್ಷಣೆಯ ಹಿನ್ನೆಲೆಯಲ್ಲಿ ಈ ನಿಯಮ ರೂಪಿಸಲಾಗಿದೆ ಎಂದು ಡಿಸಿಎಫ್ ಎ.ಮರಿಯಪ್ಪ ವಿವರಿಸಿದರು.ಮಾಧ್ಯಮ ಸಂವಾದದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,ಪ್ರೊಬೆಷನರಿ ಐಎಫ್ಎಸ್ ಅಧಿಕಾರಿ ಅಕ್ಷಯ್ ಪ್ರಕಾಶ್ಕರ್,ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪತ್ರಕರ್ತರಿಗೆ ಸಾಂಕೇತಿಕ ವಾಗಿ ಗಿಡಗಳನ್ನು ವಿತರಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಅವರಿಗೆ ‘ಹೊರನಾಡ ಕನ್ನಡ ರತ್ನ’ ಪ್ರಶಸ್ತಿ.

ಮುಂಬಯಿ: ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಅವರು ಹೊರನಾಡ ಕನ್ನಡ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸಂಘ ಆಂಧೇರಿ (ರಿ) ಪ್ರಸ್ತುತ ಪಡಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಇವರ ಸಹಯೋಗದಲ್ಲಿ ಜೂನ್ 9ರ ಭಾನುವಾರ ರಾಧಾಬಾಯಿ ಟಿ. ಭಂಡಾರಿ ಸಭಾಗೃಹ, ಬಂಟರ ಭವನ ಕುರ್ಲಾ, ಮುಂಬಯಿಯಲ್ಲಿ ಬೆಳಿಗ್ಗೆ 9.30ರಿಂದ ಆರಂಭವಾಗುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ 2024ರಲ್ಲಿ ಕರ್ನಾಟಕ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಹೇರಂಬ ಇಂಡಸ್ಟ್ರೀಸ್‌ನ ಸಿ.ಎಂ.ಡಿ. ಕನ್ಯಾನ ಸದಾಶಿವ ಶೆಟ್ಟಿ ಮೊದಲಾದ ಗಣ್ಯರ ಸಮ್ಮುಖದಲ್ಲಿ ಡಾ. ಸುಧಾಕರ ಶೆಟ್ಟಿ ಅವರಿಗೆ ಹೊರನಾಡ ಕನ್ನಡ ಪ್ರಶಸ್ತಿ ಸೇರಿದಂತೆ ಹಲವು ಮಂದಿ ಸಾಧಕರಿಗೆ ವಿವಿಧ ಪ್ರಶಸ್ತಿ ಪ್ರದಾನ ನಡೆಯಲಿದೆ. ಡಾ. ಮೋಹನ್ ಆಳ್ವರ ಸಹಕಾರದೊಂದಿಗೆ ಮೂಡಬಿದ್ರೆಯಲ್ಲಿ ಬೇಬಿ ಫ್ರೆಂಡ್ ಸಂಚಾರಿ ಮಕ್ಕಳ ಕ್ಲಿನಿಕ್‌ನ್ನು ಕಳೆದ ಒಂದು ವರ್ಷದಿಂದ ಆರಂಭಿಸುತ್ತಾ ಬಂದಿರುವ ಕಠಿಣ ಶ್ರಮಿ, ವೈದ್ಯಕೀಯ ಸಮಾಜ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಸುಧಾಕರ ಶೆಟ್ಟಿಯವರು ಪುಣೆಯಲ್ಲಿ ಯಶಸ್ವಿಯಾಗಿ 30 ವರ್ಷಗಳಿಂದ ಬೇಬಿ ಫ್ರೆಂಡ್ ಮಕ್ಕಳ ಕ್ಲಿನಿಕ್ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತ ನಾಮರಾಗಿದ್ದಾರೆ.ದಿನವಿಡೀ ಮಕ್ಕಳ ಆರೋಗ್ಯ ತಪಾಸಣೆ, ಬಡ ಮಕ್ಕಳಿಗಾಗಿ ಸಾವಿರಾರು ವೈದ್ಯಕೀಯ ಶಿಬಿರಗಳನ್ನು ಸಂಘಟಿಸುತ್ತಾ ಬಂದಿರುವ ಡಾ. ಸುಧಾಕರ ಶೆಟ್ಟಿಯವರು ಕೋವಿಡ್ ಸಂದರ್ಭದಲ್ಲಿ ಕರ್ನಾಟಕ ಮೂಲದ 1,500ಕ್ಕೂ ಹೆಚ್ಚು ರೋಗಿಗಳಿಗೆ ತನ್ನ ಪರಿಣಿತ ವೈದ್ಯಕೀಯ ತಂಡದ ಮೂಲಕ ಗುಣಮುಖಗೊಳಿಸಿದ್ದಾರೆ.ಡಾ. ಸುಧಾಕರ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ಸತತ 4 ಬಾರಿ ಕೇಂದ್ರ ಸರಕಾರ ಪ್ರತಿಷ್ಠಿತ ಪ್ರಶಸ್ತಿಯಾದ ರಕ್ಷಾ ಮಂತ್ರಿ ಅವಾರ್ಡ್ ದೊರಕಿದೆ.ಪುಣೆ ಕಂಟೋನ್ಮೆಂಟ್ ಬೋರ್ಡ್ ನಿಂದ ಶ್ರೇಷ್ಠತೆಯ ಪ್ರಮಾಣ ಪತ್ರ ಪ್ರಶಸ್ತಿ,2023ರಲ್ಲಿ ಚಾರ್ ಸಹಿ ಬಜಾಡೆ ಅವಾರ್ಡ್ ಬಂದಿದೆ.

Scroll to Top